ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಕಲಬೆರಕೆ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಹೋಟೆಲ್, ರೆಸ್ಟೋರೆಂಟ್ಗಳು ಹಾಗೂ ಆಹಾರ ಉತ್ಪನ್ನಗಳ ಮಾರಾಟ ಮಳಿಗೆಗಳ ಮೇಲೆ ದಾಳಿ ನಡೆಸುತ್ತಿರುವ ಅಧಿಕಾರಿಗಳು, ಅನುಮಾನಾಸ್ಪದ ಉತ್ಪನ್ನಗಳನ್ನು ಪತ್ತೆಹಚ್ಚಿ ನಿಯಮಾನುಸಾರ ಕ್ರಮ ಕೈಗೊಳ್ಳುತ್ತಿದ್ದಾರೆ.
ಇತ್ತೀಚೆಗೆ ಕಳಪೆ ಗುಣಮಟ್ಟದ ಇಂಗು (ಹಿಂಗು) ಉತ್ಪನ್ನಗಳ ವಿರುದ್ಧ ಕ್ರಮ ಕೈಗೊಂಡಿದ್ದ ಇಲಾಖೆಯು ಇದೀಗ ಮಸಾಲೆ ಪದಾರ್ಥಗಳು ಮತ್ತು ಮಸಾಲೆ ಪುಡಿಗಳತ್ತ ಗಮನ ಹರಿಸಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಬ್ರ್ಯಾಂಡ್ಗಳ ಮಸಾಲೆ ಉತ್ಪನ್ನಗಳಲ್ಲಿ ಕೃತಕ ಬಣ್ಣಗಳು ಹಾಗೂ ಆರೋಗ್ಯಕ್ಕೆ ಹಾನಿಕಾರಕವಾಗಬಹುದಾದ ರಾಸಾಯನಿಕಗಳನ್ನು ಬಳಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ತಪಾಸಣೆಯನ್ನು ಚುರುಕುಗೊಳಿಸಿದ್ದಾರೆ.
ಮಸಾಲೆಗಳಲ್ಲಿ ETO ಬಳಕೆ ಶಂಕೆ
ಮಸಾಲೆ ಪದಾರ್ಥಗಳ ಸಂಸ್ಕರಣೆ ಹಾಗೂ ಸಂಗ್ರಹಣೆಯಲ್ಲಿ ಇಥಿಲೀನ್ ಆಕ್ಸೈಡ್ (ETO) ನಂತಹ ರಾಸಾಯನಿಕಗಳ ಬಳಕೆಯ ಕುರಿತು ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಇಂತಹ ರಾಸಾಯನಿಕಗಳ ಬಳಕೆಗೆ ಸಂಬಂಧಿಸಿದಂತೆ ಸ್ಪಷ್ಟ ಮತ್ತು ಕಠಿಣ ಮಾನದಂಡಗಳನ್ನು ರೂಪಿಸುವಂತೆ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಕೇಂದ್ರ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರವಾದ FSSAIಗೆ ಮನವಿ ಮಾಡಿದೆ.
ರಾಜ್ಯದಿಂದ ಬಂದ ಮನವಿಗಳು ಹಾಗೂ ಗ್ರಾಹಕರ ದೂರುಗಳ ಹಿನ್ನೆಲೆಯಲ್ಲಿ ಕೇಂದ್ರ ಮಟ್ಟದಲ್ಲಿಯೂ ಈ ವಿಚಾರದ ಬಗ್ಗೆ ಗಮನ ಹರಿಸಲಾಗುತ್ತಿದೆ. ಮಸಾಲೆ ಉತ್ಪನ್ನಗಳ ಗುಣಮಟ್ಟ ಮತ್ತು ಅವುಗಳಲ್ಲಿ ಬಳಸುವ ರಾಸಾಯನಿಕಗಳ ಪ್ರಮಾಣವನ್ನು ನಿಗದಿತ ಸುರಕ್ಷತಾ ಮಿತಿಯೊಳಗೆ ಇರುವಂತೆ ಖಚಿತಪಡಿಸಿಕೊಳ್ಳುವುದು ಇಲಾಖೆಯ ಪ್ರಮುಖ ಉದ್ದೇಶವಾಗಿದೆ.
ಇಂಗು ಬಳಿಕ ಮಸಾಲೆಗಳ ತಪಾಸಣೆ
ಇತ್ತೀಚೆಗೆ ಕೆಲವು ಇಂಗು ಉತ್ಪನ್ನಗಳ ಗುಣಮಟ್ಟದ ಕುರಿತು ನಡೆದ ತಪಾಸಣೆ ಆಹಾರ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಎವರೆಸ್ಟ್ ಹಾಗೂ ಎಲ್ಜಿ ಕಂಪನಿಗಳ ಇಂಗು ಉತ್ಪನ್ನಗಳಲ್ಲಿ ಆಲ್ಕೋಹಾಲ್ ಸೊಲ್ಯೂಬಲ್ ಪ್ರಮಾಣ ನಿಗದಿತ ಮಾನದಂಡಕ್ಕೆ ಹೊಂದಿಕೆಯಾಗದಿರುವುದು ಹಾಗೂ ಗುಣಮಟ್ಟದ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಅವುಗಳ ಮಾರಾಟ ಮತ್ತು ಉತ್ಪಾದನೆಗೆ ನಿರ್ಬಂಧ ವಿಧಿಸಲಾಗಿತ್ತು ಎಂದು ಇಲಾಖೆ ತಿಳಿಸಿದೆ.
ಇದೀಗ ಇದೇ ರೀತಿಯ ತಪಾಸಣೆಯನ್ನು ಮಸಾಲೆ ಉತ್ಪನ್ನಗಳಿಗೂ ವಿಸ್ತರಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ರಾಜ್ಯದ ವಿವಿಧ ಮಾರುಕಟ್ಟೆಗಳಿಂದ ಸಾಂಬಾರ್ ಪೌಡರ್, ಗರಂ ಮಸಾಲೆ, ಚಿಕನ್ ಮಸಾಲೆ, ಅರಿಶಿನ ಪುಡಿ ಹಾಗೂ ಖಾರದ ಪುಡಿ ಸೇರಿದಂತೆ ಹಲವು ಉತ್ಪನ್ನಗಳ ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ.
ಪ್ರಯೋಗಾಲಯದಲ್ಲಿ ಗುಣಮಟ್ಟ ಪರೀಕ್ಷೆ
ಅಧಿಕಾರಿಗಳು ಸಂಗ್ರಹಿಸುವ ಮಸಾಲೆ ಉತ್ಪನ್ನಗಳ ಮಾದರಿಗಳನ್ನು NABL ಮಾನ್ಯತೆ ಪಡೆದ ಅಧಿಕೃತ ಪ್ರಯೋಗಾಲಯಗಳಿಗೆ ಕಳುಹಿಸಿ ಪರೀಕ್ಷೆ ನಡೆಸಲಾಗುತ್ತದೆ. ಉತ್ಪನ್ನಗಳಲ್ಲಿ ಕೃತಕ ಬಣ್ಣಗಳ ಬಳಕೆ, ಕೀಟನಾಶಕಗಳ ಶೇಷ, ರಾಸಾಯನಿಕಗಳ ಪ್ರಮಾಣ ಹಾಗೂ ಇತರ ಗುಣಮಟ್ಟದ ಮಾನದಂಡಗಳನ್ನು ಪರಿಶೀಲಿಸಲಾಗುತ್ತದೆ.
ಪರೀಕ್ಷಾ ವರದಿಯಲ್ಲಿ ಯಾವುದೇ ಉತ್ಪನ್ನದಲ್ಲಿ ಅನುಮೋದಿತ ಮಿತಿಗಿಂತ ಹೆಚ್ಚಿನ ಪ್ರಮಾಣದ ರಾಸಾಯನಿಕ ಅಥವಾ ಕೃತಕ ಬಣ್ಣ ಬಳಕೆ ಕಂಡುಬಂದರೆ, ಸಂಬಂಧಪಟ್ಟ ತಯಾರಕರು ಹಾಗೂ ಮಾರಾಟಗಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಇಲಾಖೆ ಮುಂದಾಗಲಿದೆ. ಅಗತ್ಯವಿದ್ದಲ್ಲಿ ಉತ್ಪನ್ನದ ಮಾರಾಟಕ್ಕೆ ನಿಷೇಧ ವಿಧಿಸುವುದು, ಮಾರುಕಟ್ಟೆಯಿಂದ ಹಿಂಪಡೆಯುವುದು ಹಾಗೂ ಕಾನೂನು ಪ್ರಕಾರ ಕ್ರಿಮಿನಲ್ ಪ್ರಕರಣ ದಾಖಲಿಸುವ ಕ್ರಮಗಳನ್ನೂ ಕೈಗೊಳ್ಳಲಾಗುತ್ತದೆ.
ಆಹಾರ ಉತ್ಪನ್ನಗಳ ಗುಣಮಟ್ಟದ ಬಗ್ಗೆ ಗ್ರಾಹಕರಲ್ಲಿ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಲಾಖೆಯ ಈ ಕಾರ್ಯಾಚರಣೆ ಮಹತ್ವ ಪಡೆದುಕೊಂಡಿದೆ. ಮಾರುಕಟ್ಟೆಯಲ್ಲಿ ಮಾರಾಟವಾಗುವ ಮಸಾಲೆ ಪದಾರ್ಥಗಳು ನಿಗದಿತ ಆಹಾರ ಸುರಕ್ಷತಾ ಮಾನದಂಡಗಳನ್ನು ಪಾಲಿಸುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಮುಂದಿನ ದಿನಗಳಲ್ಲೂ ತಪಾಸಣೆ ಮುಂದುವರಿಯುವ ಸಾಧ್ಯತೆಯಿದೆ.
