ಗದಗ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗದಗ ನಗರದ ಚನ್ನಮ್ಮ ಸರ್ಕಲ್ ಬಳಿ ನಡೆದಿದೆ.
ಮೃತಪಟ್ಟವರನ್ನು ಜವಳಗಲ್ಲಿಯ ಅಮನ್ ರಿಯಾಜ್ ಅಹ್ಮದ ಮುಳಗುಂದ (25) ಮತ್ತು ಜುನೇದ್ ಮಕಬೂಲಸಾಬ ಕಾಗದಗಾರ (23) ಎಂದು ಗುರುತಿಸಲಾಗಿದೆ. ಇಬ್ಬರೂ ಬಾಲ್ಯ ಮಿತ್ರರು ಎನ್ನಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಮುಳಗುಂದ ನಾಕಾದಿಂದ ಭೀಷ್ಮ ಕೆರೆ ಕಡೆಗೆ ಅವರು ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಚನ್ನಮ್ಮ ಸರ್ಕಲ್ ಬಳಿ ನಿಯಂತ್ರಣ ತಪ್ಪಿದ ಬೈಕ್ ನೇರವಾಗಿ ಡಿವೈಡರ್ನಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಂಬದ ಮೇಲಿದ್ದ ವಿದ್ಯುತ್ ಬಲ್ಬುಗಳು ನೆಲಕ್ಕು ಬಿದ್ದು ಚೂರಾಗಿವೆ. ಸ್ಥಳದಲ್ಲೇ ಇಬ್ಬರು ತೀವ್ರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಗದಗ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದೆ ಮತ್ತು ಅಪಘಾತದ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.