ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

Untitled design 2026 07 15T154021.838

ಬೆಂಗಳೂರು, ಜುಲೈ (15): ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ವ್ಯಾಪ್ತಿಯ ಪಂಚ ನಗರ ಪಾಲಿಕೆಗಳ ಚುನಾವಣೆಯ ಭವಿಷ್ಯ ಇದೀಗ ಸುಪ್ರೀಂ ಕೋರ್ಟ್ ತೀರ್ಪಿನ ಮೇಲೆ ಅವಲಂಬಿತವಾಗಿದೆ. ಕರ್ನಾಟಕ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜುಲೈ 17ರಂದು ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದ್ದು, ಅಂದೇ ಬೆಂಗಳೂರು ಸ್ಥಳೀಯ ಸಂಸ್ಥೆಗಳ ಚುನಾವಣೆ ಯಾವಾಗ ನಡೆಯಲಿದೆ ಎಂಬುದು ಸ್ಪಷ್ಟವಾಗುವ ಸಾಧ್ಯತೆ ಇದೆ.

ಈ ಹಿಂದೆ ಸುಪ್ರೀಂ ಕೋರ್ಟ್ ಆಗಸ್ಟ್ 31ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಆದರೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆಗೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿದೆ. ಸರ್ಕಾರದ ಮನವಿಯಂತೆ ಆಗಸ್ಟ್ 31ರ ಬದಲಿಗೆ ಡಿಸೆಂಬರ್ 31ರವರೆಗೆ ಗಡುವು ವಿಸ್ತರಿಸುವಂತೆ ಕೋರಲಾಗಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಹಾಗೂ ವಿ.ಮೋಹನ ಅವರನ್ನೊಳಗೊಂಡ ಪೀಠದ ಮುಂದೆ ಈ ಅರ್ಜಿ ವಿಚಾರಣೆಗೆ ಬರಲಿದೆ. ಜಿಬಿಎ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ವಿಚಾರಣೆಯನ್ನು ಪಟ್ಟಿಯಿಂದ ಕೈಬಿಡದಂತೆ ಮನವಿ ಮಾಡಿದ್ದು, ಅದನ್ನು ನ್ಯಾಯಪೀಠ ಅಂಗೀಕರಿಸಿರುವುದರಿಂದ ಜುಲೈ 17ರಂದು ವಿಚಾರಣೆ ನಡೆಯುವುದು ಬಹುತೇಕ ಖಚಿತವಾಗಿದೆ.

ಕರ್ನಾಟಕ ಸರ್ಕಾರ ತನ್ನ ಅರ್ಜಿಯಲ್ಲಿ, ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯಿಂದ ಚುನಾವಣಾ ಸಿಬ್ಬಂದಿಯ ಕೊರತೆ ಉಂಟಾಗಿದೆ ಎಂದು ವಾದಿಸಿದೆ. ಬೆಂಗಳೂರು ನಗರದಲ್ಲೇ ಸುಮಾರು 1.03 ಕೋಟಿ ಮತದಾರರು ಮತ್ತು 40 ಲಕ್ಷಕ್ಕೂ ಹೆಚ್ಚು ಮನೆಗಳು ಇದ್ದು, ಐದು ನಗರ ಪಾಲಿಕೆಗಳ ಚುನಾವಣೆಗೆ ಸುಮಾರು 60 ಸಾವಿರ ಸಿಬ್ಬಂದಿ ಅಗತ್ಯವಿದೆ. ಹೀಗಾಗಿ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವುದು ಕಷ್ಟಕರ ಎಂದು ಸರ್ಕಾರ ಹೇಳಿದೆ.

ಇನ್ನೊಂದೆಡೆ, ಚುನಾವಣೆಯನ್ನು ಯಾವುದೇ ಕಾರಣಕ್ಕೂ ಮುಂದೂಡಬಾರದು ಎಂದು ಒತ್ತಾಯಿಸಿ ಕೆಲವು ಸಂಘಟನೆಗಳು ಮತ್ತು ಬಿಜೆಪಿ ಪರ ವಲಯಗಳು ಸುಪ್ರೀಂ ಕೋರ್ಟ್‌ಗೆ  ಅರ್ಜಿ ಸಲ್ಲಿಸಿವೆ. ನ್ಯಾಯಾಲಯ ಈಗಾಗಲೇ ನೀಡಿರುವ ಗಡುವಿನೊಳಗೆ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಒಂದು ವೇಳೆ ಸುಪ್ರೀಂ ಕೋರ್ಟ್ ಸರ್ಕಾರದ ಮನವಿಯನ್ನು ಒಪ್ಪಿಕೊಂಡರೆ, ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳ ಮರುಸಂರಚನೆ ಅಥವಾ ಮರುವಿಭಜನೆಗೆ ಸರ್ಕಾರ ಮುಂದಾಗುವ ಸಾಧ್ಯತೆಯಿದೆ ಎಂಬ ರಾಜಕೀಯ ಚರ್ಚೆಗಳೂ ಜೋರಾಗಿವೆ. ಹೀಗಾಗಿ ಜುಲೈ 17ರಂದು ಹೊರಬರುವ ಸುಪ್ರೀಂ ಕೋರ್ಟ್ ತೀರ್ಪು ಜಿಬಿಎ ಚುನಾವಣೆ ಮಾತ್ರವಲ್ಲ, ಬೆಂಗಳೂರಿನ ಸ್ಥಳೀಯ ಆಡಳಿತದ ಮುಂದಿನ ದಿಕ್ಕನ್ನೂ ನಿರ್ಧರಿಸುವ ಮಹತ್ವದ ಬೆಳವಣಿಗೆಯಾಗಲಿದೆ.

Exit mobile version