ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ

ಮಂಡ್ಯ, ಆಗಸ್ಟ್ 01: ಕಾವೇರಿ ನೀರಿನ ಹಂಚಿಕೆ ವಿಚಾರವಾಗಿ ಮಂಡ್ಯದಲ್ಲಿ ಪ್ರತಿಭಟನೆಗಳು ಮುಂದುವರೆದಿದೆ. ತಮಿಳುನಾಡಿಗೆ ನೀರು ಬಿಡಬಾರದು ಎಂದು ಒತ್ತಾಯಿಸಿ ಮಂಡ್ಯ ರಕ್ಷಣಾ ವೇದಿಕೆ (ಮ.ರ.ವೇ) ಕಾರ್ಯಕರ್ತರು ಸಂಜಯ್ ವೃತ್ತದಲ್ಲಿ ‘ಗೋ ಬ್ಯಾಕ್ ವಿಜಯ್’ ಪೋಸ್ಟರ್ಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಅಲ್ಲದೆ, ಅವರು ಅಲ್ಲೇ ಟೀ ಕಾಯಿಸಿ ವಿಶಿಷ್ಟ ರೀತಿಯಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಮಂಡ್ಯದ ಸಂಜಯ್ ವೃತ್ತದಲ್ಲಿ ಜಮಾಯಿಸಿದ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಮತ್ತು ವಿವಿಧ ಕನ್ನಡಪರ ಸಂಘಟನೆಗಳ ಸದಸ್ಯರು ಕೈಯಲ್ಲಿ ‘ಗೋ ಬ್ಯಾಕ್ ವಿಜಯ್’ ಫಲಕಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು. ವಿಶಿಷ್ಟ ರೀತಿಯಲ್ಲಿ ಟೀ ತಯಾರಿಸಿ ಪ್ರತಿಭಟನೆ ನಡೆಸಿದ ಹೋರಾಟಗಾರರು, ಕಾವೇರಿ ವಿಚಾರದಲ್ಲಿ ತಮಿಳುನಾಡು ನಿರಂತರವಾಗಿ ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನಾಕಾರರು ಮಾತನಾಡಿ, ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ನಿರಂತರ ಅಡ್ಡಿಪಡಿಸುತ್ತಿದೆ. ಇದೀಗ ಮಾತುಕತೆಯ ಹೆಸರಿನಲ್ಲಿ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಕೇವಲ ರಾಜಕೀಯ ತಂತ್ರ ಎಂದು ಟೀಕಿಸಿದರು. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡಬಾರದು ಎಂದು ಅವರು ಆಗ್ರಹಿಸಿದರು.

ಸಿಡಬ್ಲ್ಯೂಎಂಎ (CWMA) ಆದೇಶದ ಹಿನ್ನೆಲೆ ಹಾಗೂ ವಿಜಯ್ ಅವರ ರಾಜ್ಯ ಭೇಟಿ ಹಿನ್ನೆಲೆ ಮಂಡ್ಯ ಜಿಲ್ಲೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ ದಿನಗಳಲ್ಲಿ ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹೋರಾಟಗಾರರು ಎಚ್ಚರಿಸಿದರು.

ಇದೇ ವೇಳೆ ಹಾಸನ ಜಿಲ್ಲೆಯಲ್ಲಿಯೂ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಪ್ರತಿಭಟನೆಗಳು ಆರಂಭವಾಗಿವೆ. ಕರವೇ (ನಾರಾಯಣಗೌಡ ಬಣ) ನೇತೃತ್ವದಲ್ಲಿ ಕಾರ್ಯಕರ್ತರು ಬೀದಿಗಿಳಿದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮತ್ತೊಂದೆಡೆ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಗಳು ಹೇಮಾವತಿ ಜಲಾಶಯಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿ, ಮೊದಲು ರಾಜ್ಯದ ರೈತರಿಗೆ ಮತ್ತು ಕಾಲುವೆಗಳಿಗೆ ನೀರು ಒದಗಿಸಬೇಕು ಎಂದು ಒತ್ತಾಯಿಸಿದರು.

ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರ ಜೊತೆಗೆ ಮುಸ್ಲಿಂ ಸಮುದಾಯದ ಸದಸ್ಯರೂ ಭಾಗವಹಿಸಿದ್ದು, ಇದು ಸಮಾನ ಹಿತಾಸಕ್ತಿಯ ಹೋರಾಟ ಎಂದು ಪ್ರತಿಭಟನಾಕಾರರು ಹೇಳಿದರು. ಹಳೆ ಮೈಸೂರು–ಬೆಂಗಳೂರು ಹೆದ್ದಾರಿಯಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿದ ಹೋರಾಟಗಾರರು ವಾಹನ ಸಂಚಾರಕ್ಕೂ ಅಡ್ಡಿಪಡಿಸಿದರು.

ಪ್ರತಿಭಟನೆ ವೇಳೆ ಕೆಲ ಹೋರಾಟಗಾರರು ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಒಬ್ಬ ಪ್ರತಿಭಟನಾಕಾರ ಬಸ್ ಮುಂಭಾಗದಲ್ಲಿ ರಸ್ತೆಯಲ್ಲೇ ಮಲಗಿ ಉರುಳು ಸೇವೆ ನಡೆಸಿದ್ದು, ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಪೊಲೀಸರು ಮನವಿ ಮಾಡಿದರೂ ಪ್ರತಿಭಟನಾಕಾರರು ಹಿಂದೆ ಸರಿಯಲಿಲ್ಲ. ನಂತರ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ ಕೆಲ ಹೋರಾಟಗಾರರನ್ನು ಸ್ಥಳದಿಂದ ತೆರವುಗೊಳಿಸಿದರು.

ಪ್ರತಿಭಟನಾಕಾರರು ನಾಳೆ ನಡೆಯಲಿರುವ ಸರ್ವಪಕ್ಷಗಳ ಸಭೆಯಲ್ಲಿ ರಾಜ್ಯದ ಎಲ್ಲಾ ಸಂಸದರು ಹಾಗೂ ಶಾಸಕರು ಭಾಗವಹಿಸಿ ರಾಜ್ಯದ ಹಿತದೃಷ್ಟಿಯಿಂದ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಕರ್ನಾಟಕದ ರೈತರ ಹಿತಾಸಕ್ತಿಯನ್ನು ಕಾಪಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದರು.

‘ನಾವು ರಕ್ತ ಕೊಟ್ಟರೂ ನೀರು ಕೊಡಲ್ಲ’ ಎಂಬ ಘೋಷಣೆಗಳ ಮೂಲಕ ಹೋರಾಟಗಾರರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

Exit mobile version