ಮೈಸೂರು/ಹನೂರು, ಆ.16: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಮೂವರ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಸ್ಥರೊಂದಿಗೆ ಸರ್ಕಾರ ನಡೆಸಿದ ಸಂಧಾನ ಯಶಸ್ವಿಯಾಗಿದೆ. ಸರ್ಕಾರ ನೀಡಿದ ಭರವಸೆಯ ಮೇರೆಗೆ ಕುಟುಂಬಸ್ಥರು ಮರಣೋತ್ತರ ಪರೀಕ್ಷೆಗೆ ಸಮ್ಮತಿ ನೀಡಿದ್ದು, ಬಳಿಕ ಮೂರು ಮೃತದೇಹಗಳನ್ನು ಮೈಸೂರಿನ ಶವಗಾರದಿಂದ ಹಸ್ತಾಂತರಿಸಲಾಗಿದೆ.
ಎನ್ಕೌಂಟರ್ನಲ್ಲಿ ಮೃತಪಟ್ಟ ಬೆಂಜಮೀನ್ ಕುಮಾರ್, ಆಂಥೋಣಿ ಮತ್ತು ಪೀಟರ್ ಅವರ ಮೃತದೇಹಗಳನ್ನು ಹನೂರಿಗೆ ಕೊಂಡೊಯ್ಯಲು ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದಾರೆ. ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕ ಮೃತದೇಹಗಳನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು, ನಾಳೆ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ತಿಳಿಸಲಾಗಿದೆ.
ಸರ್ಕಾರದ ಭರವಸೆಯ ಬಳಿಕ ಅಂತ್ಯಗೊಂಡ ಪ್ರತಿಭಟನೆ
ಘಟನೆಯ ಬಳಿಕ ಹನೂರಿನಲ್ಲಿ ಭಾರೀ ಪ್ರತಿಭಟನೆ ನಡೆದಿತ್ತು. ಮೃತದೇಹಗಳನ್ನು ಮೈಸೂರಿಗೆ ಸಾಗಿಸಿದ್ದನ್ನು ವಿರೋಧಿಸಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ಅರಣ್ಯ ಸಚಿವ ರಾಮಲಿಂಗ ರೆಡ್ಡಿ, ಹನೂರು ಶಾಸಕ ಮಂಜುನಾಥ್ ಹಾಗೂ ಜಿಲ್ಲಾಡಳಿತ ಕುಟುಂಬಸ್ಥರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿ ಮನವೊಲಿಸಿದರು.
ಶಾಗ್ಯ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸೆಲ್ವಕುಮಾರ್ ಮಾತನಾಡಿ, ಸರ್ಕಾರ ನೀಡಿದ ಭರವಸೆಯ ಆಧಾರದ ಮೇಲೆ ಮೃತದೇಹಗಳನ್ನು ಹನೂರಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ತಪ್ಪಿತಸ್ಥರ ವಿರುದ್ಧ ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ವೇಳೆ ಕೆಲ ಸಚಿವರು ಕುಟುಂಬದ ನೋವು ಆಲಿಸಲು ಬರದಿದ್ದುದಕ್ಕೂ ಅಸಮಾಧಾನ ವ್ಯಕ್ತಪಡಿಸಿದರು.
ಪರಿಹಾರದ ಬೇಡಿಕೆ ಏನು?
ಕುಟುಂಬಸ್ಥರು ಸರ್ಕಾರದ ಮುಂದೆ ಈ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ:
-
ತಲಾ 2 ಕೋಟಿ ರೂ. ಪರಿಹಾರ
-
ಪ್ರತಿ ಕುಟುಂಬದ ಓರ್ವರಿಗೆ ಸರ್ಕಾರಿ ಉದ್ಯೋಗ
-
ಮಕ್ಕಳಿಗೆ ಉಚಿತ ಶಿಕ್ಷಣದ ಭರವಸೆ
-
ಎನ್ಕೌಂಟರ್ಗೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ
ಇದಕ್ಕೆ ಪ್ರತಿಯಾಗಿ ಹನೂರು ಶಾಸಕ ಮಂಜುನಾಥ್ ವೈಯಕ್ತಿಕವಾಗಿ ತಲಾ 10 ಲಕ್ಷ ರೂ, ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡುವ ಭರವಸೆ ವ್ಯಕ್ತಪಡಿಸಿದ್ದಾರೆ. ಉಳಿದ ಬೇಡಿಕೆಗಳ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಸೆಲ್ವಕುಮಾರ್ ತಿಳಿಸಿದ್ದಾರೆ.
ಪ್ರಕರಣದ ಸತ್ಯಾಸತ್ಯತೆ ಕುರಿತು ತನಿಖೆ ಮುಂದುವರಿದಿದ್ದು, ನಿಷ್ಪಕ್ಷಪಾತ ತನಿಖೆಯ ಮೂಲಕ ನೊಂದ ಕುಟುಂಬಗಳಿಗೆ ನ್ಯಾಯ ದೊರಕಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.





