ಹನೂರು ಎನ್‌ಕೌಂಟರ್‌ ಪ್ರಕರಣ: ವಿಧಾನಸಭೆಯಲ್ಲಿ ಭಾರೀ ಗದ್ದಲ, ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ

Untitled design 2026 08 17T133045.333

ಹನೂರು ಎನ್‌ಕೌಂಟರ್‌ ಪ್ರಕರಣ ಸೋಮವಾರ ಕರ್ನಾಟಕ ವಿಧಾನಸಭೆಯ ಕಲಾಪದಲ್ಲಿ ತೀವ್ರ ರಾಜಕೀಯ ಚರ್ಚೆಗೆ ಕಾರಣವಾಯಿತು. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದಲ್ಲಿ ಮೂವರು ಮೃತಪಟ್ಟ ಘಟನೆ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದರು. ಈ ವಿಚಾರವಾಗಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ತೀವ್ರ ವಾಕ್ಸಮರ ನಡೆದಿದ್ದು, ಕೆಲಕಾಲ ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು.

ಕಲಾಪ ಆರಂಭದಲ್ಲೇ ಅಶೋಕ್ ಆಗ್ರಹ

ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆಯೇ ವಿಷಯ ಪ್ರಸ್ತಾಪಿಸಿದ ಆರ್. ಅಶೋಕ್, “ಮೂವರು ಮೃತಪಟ್ಟಿರುವ ಗಂಭೀರ ಘಟನೆ ನಡೆದಿದೆ. ಸರ್ಕಾರ ಸದನಕ್ಕೆ ಸಂಪೂರ್ಣ ಮಾಹಿತಿ ನೀಡಬೇಕು” ಎಂದು ಒತ್ತಾಯಿಸಿದರು.

ತಮಿಳುನಾಡು ಮುಖ್ಯಮಂತ್ರಿ ಕೂಡ ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ತಮಿಳಿಗರ ಸುರಕ್ಷತೆ ಕುರಿತು ಪ್ರಶ್ನೆ ಎತ್ತಿರುವುದನ್ನು ಉಲ್ಲೇಖಿಸಿದ ಅವರು, ಸರ್ಕಾರ ಈ ವಿಚಾರವನ್ನು ಲಘುವಾಗಿ ಪರಿಗಣಿಸದೆ ಸ್ಪಷ್ಟ ನಿಲುವು ತಿಳಿಸಬೇಕು ಎಂದು ಹೇಳಿದರು.

ಡಿಸಿಎಂ ಪರಮೇಶ್ವರ್ ಪ್ರತಿಕ್ರಿಯೆ

ವಿಪಕ್ಷದ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಮೊದಲು ಪ್ರಶ್ನೋತ್ತರ ಕಲಾಪಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ನಂತರ ನಿಯಮಾನುಸಾರ ನಿಲುವಳಿ ಸೂಚನೆ ಮೂಲಕ ಎನ್‌ಕೌಂಟರ್‌ ಪ್ರಕರಣದ ಕುರಿತು ಸುದೀರ್ಘ ಚರ್ಚೆ ನಡೆಸಬಹುದು ಎಂದು ಸಲಹೆ ನೀಡಿದರು.

ಆದರೆ ಬಿಜೆಪಿ ಶಾಸಕ ಸುನೀಲ್ ಕುಮಾರ್, “ಸರ್ಕಾರವೇ ಸ್ವಯಂಪ್ರೇರಿತವಾಗಿ ಹೇಳಿಕೆ ನೀಡುತ್ತದೆ ಎಂದು ನಾವು ನಿರೀಕ್ಷಿಸಿದ್ದೆವು. ಹೇಳಿಕೆ ನೀಡದ ಕಾರಣ ನಾವೇ ವಿಷಯ ಪ್ರಸ್ತಾಪಿಸಿದ್ದೇವೆ” ಎಂದು ಸರ್ಕಾರವನ್ನು ಟೀಕಿಸಿದರು.

ಸರ್ಕಾರದಿಂದ ಅಧಿಕೃತ ಸ್ಪಷ್ಟನೆ

ವಿಪಕ್ಷದ ನಿರಂತರ ಒತ್ತಡದ ಹಿನ್ನೆಲೆಯಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಸರ್ಕಾರದ ಪರವಾಗಿ ಸದನದಲ್ಲಿ ಹೇಳಿಕೆ ನೀಡಿದರು. ಹನೂರು ಎನ್‌ಕೌಂಟರ್‌ ಪ್ರಕರಣದ ಹಿನ್ನೆಲೆ, ಅರಣ್ಯ ಸಿಬ್ಬಂದಿಯ ಕಾರ್ಯಾಚರಣೆ ಹಾಗೂ ಸರ್ಕಾರದ ಪ್ರಾಥಮಿಕ ನಿಲುವನ್ನು ಅವರು ವಿವರಿಸಿದರು.

ಆದರೆ ಸಚಿವರ ಹೇಳಿಕೆಯಿಂದ ಅತೃಪ್ತರಾದ ಆರ್. ಅಶೋಕ್, “ಸಚಿವರು ಕೇವಲ ಬರೆದು ಕೊಟ್ಟ ಉತ್ತರ ಓದಿ ಮುಗಿಸಿದ್ದಾರೆ. ಮೃತಪಟ್ಟವರ ವಿರುದ್ಧ ಯಾವುದೇ ಅರಣ್ಯ ಪ್ರಕರಣಗಳಿರಲಿಲ್ಲ ಎಂದಿದ್ದರೆ, ಗುಂಡಿನ ದಾಳಿ ಹೇಗೆ ನಡೆಯಿತು? ಕುಟುಂಬಗಳಿಗೆ ಯಾವ ಪರಿಹಾರ ನೀಡಲಾಗಿದೆ?” ಎಂದು ಪ್ರಶ್ನಿಸಿದರು.

“ಇದು ಎನ್‌ಕೌಂಟರ್‌ ಅಲ್ಲ, ಕೊಲೆ”

ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅಶೋಕ್, “ಇದು ಎನ್‌ಕೌಂಟರ್‌ ಅಲ್ಲ, ಕೊಲೆ” ಎಂದು ಆರೋಪಿಸಿದರು. ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಾದರೆ ಸಂಪೂರ್ಣ ದಿನದ ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಕಾಂಗ್ರೆಸ್ ಸದಸ್ಯರು ಪ್ರಶ್ನೋತ್ತರ ಕಲಾಪ ಮುಂದುವರಿಸಬೇಕೆಂದು ಪಟ್ಟು ಹಿಡಿದರು. ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಮತ್ತೆ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಸಭಾಧ್ಯಕ್ಷರು ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದರು.

Exit mobile version