ಹಾವೇರಿ: ಆಕಸ್ಮಿಕವಾಗಿ ದನದ ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ, ಕೊಟ್ಟಿಗೆಯಲ್ಲಿದ್ದ 17 ಎಮ್ಮೆಗಳು ಹಾಗೂ 4 ಕರುಗಳು ಹೊರಬರಲಾಗದೆ ಸಜೀವ ದಹನವಾಗಿರುವ ದಾರುಣ ಘಟನೆ ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದಲ್ಲಿ ನಡೆದಿದೆ.
ಘಟನೆಯ ವಿವರ
ಕನವಳ್ಳಿ ಗ್ರಾಮದ ರೈತ ಪರಮೇಶ ಜಾಡರ್ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೊಟ್ಟಿಗೆಯ ಪಕ್ಕದಲ್ಲೇ ಇದ್ದ ಮೇವಿನ ಬಣವೆಗೆ ಮೊದಲು ಬೆಂಕಿ ತಗುಲಿದ್ದು, ಗಾಳಿಯ ರಭಸಕ್ಕೆ ಬೆಂಕಿ ಕ್ಷಣಾರ್ಧದಲ್ಲಿ ಕೊಟ್ಟಿಗೆಗೆ ವ್ಯಾಪಿಸಿದೆ. ಕೊಟ್ಟಿಗೆಯಲ್ಲಿದ್ದ ಎಮ್ಮೆಗಳು ಮತ್ತು ಕರುಗಳು ಬೆಂಕಿಯ ಕೆನ್ನಾಲಗೆಯಿಂದ ತಪ್ಪಿಸಿಕೊಳ್ಳಲಾಗದೆ ಸ್ಥಳದಲ್ಲೇ ಸಾವನ್ನಪ್ಪಿವೆ.
ಗ್ರಾಮಸ್ಥರ ಹರಸಾಹಸ
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಗ್ರಾಮಸ್ಥರು ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಎಷ್ಟೇ ನೀರು ತಂದು ಸುರಿದರೂ ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಜಾನುವಾರುಗಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ.
ವಿಷಯ ತಿಳಿಯುತ್ತಿದ್ದಂತೆ ಹಾವೇರಿಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಗ್ರಾಮಸ್ಥರ ಸಹಕಾರದೊಂದಿಗೆ ತೀವ್ರ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದರು. ಆದರೆ, ಅಷ್ಟರಲ್ಲಾಗಲೇ ಕೊಟ್ಟಿಗೆಯಲ್ಲಿದ್ದ ಎಲ್ಲಾ ಜಾನುವಾರುಗಳು ಸಝಿವ ದಹನವಾಗಿದೆ. ರೈತ ಪರಮೇಶ ಜಾಡರ್ ಅವರು ತಮ್ಮ ಜೀವನೋಪಾಯವಾಗಿದ್ದ ಜಾನುವಾರುಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. ಸ್ಥಳೀಯರು ಹಾಗೂ ರೈತ ಸಂಘಟನೆಗಳು ಸಂಕಷ್ಟದಲ್ಲಿರುವ ರೈತ ಕುಟುಂಬಕ್ಕೆ ಸರ್ಕಾರ ಕೂಡಲೇ ಪರಿಹಾರ ನೀಡಬೇಕೆಂದು ಒತ್ತಾಯಿಸಿವೆ.





