ಹಾಸನ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ತಾಯಿ ಚೆನ್ನಮ್ಮ ಅವರ ನಿಧನದಿಂದ ರಾಜ್ಯಾದ್ಯಂತ ಶೋಕದ ವಾತಾವರಣ ನಿರ್ಮಾಣವಾಗಿದೆ. ಸರಳತೆ ಮತ್ತು ದೈವಭಕ್ತಿಗೆ ಹೆಸರಾಗಿದ್ದ ಚೆನ್ನಮ್ಮ ಅವರು ಕುಟುಂಬದಷ್ಟೇ ಅಲ್ಲ, ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳ ಪಾಲಿಗೆ ತಾಯಿಯಂತೆಯೇ ಬದುಕಿದ್ದರು. ಅವರ ಅಗಲಿಕೆಯಿಂದ ಹರದನಹಳ್ಳಿ ಹಾಗೂ ಹುಟ್ಟೂರು ಮುತ್ತಿಗೆ ಹಿರಿಹಳ್ಳಿ ಸೇರಿದಂತೆ ಹಾಸನ ಜಿಲ್ಲೆ ದುಃಖದಲ್ಲಿ ಮುಳುಗಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮುತ್ತಿಗೆ ಹಿರಿಹಳ್ಳಿ ಗ್ರಾಮದಲ್ಲಿ ಜನಿಸಿದ ಚೆನ್ನಮ್ಮ ಅವರು ಬಾಲ್ಯದಿಂದಲೇ ಸರಳ ಜೀವನವನ್ನು ಅಳವಡಿಸಿಕೊಂಡಿದ್ದರು. ರಾಜಕೀಯದ ಕೇಂದ್ರಬಿಂದುವಾಗಿದ್ದ ದೇವೇಗೌಡರ ಕುಟುಂಬದ ಪ್ರಮುಖ ಆಧಾರಸ್ತಂಭವಾಗಿದ್ದ ಅವರು, ಮನೆಗೆ ಬರುವ ಪ್ರತಿಯೊಬ್ಬರನ್ನೂ ಆತ್ಮೀಯವಾಗಿ ಬರಮಾಡಿಕೊಳ್ಳುತ್ತಿದ್ದರು. ಹಳ್ಳಿಯಿಂದ ಯಾರೇ ಬಂದರೂ ಸ್ವತಃ ಅಡುಗೆ ಮಾಡಿ ಊಟ ಬಡಿಸುತ್ತಿದ್ದರು. ಅಗತ್ಯವಿದ್ದರೆ ಪ್ರಯಾಣ ವೆಚ್ಚ ನೀಡಿ ಕಳುಹಿಸುವಷ್ಟು ಕಾಳಜಿ ವಹಿಸುತ್ತಿದ್ದರು ಎಂಬ ನೆನಪುಗಳನ್ನು ಸಂಬಂಧಿಕರು ಹಾಗೂ ಗ್ರಾಮಸ್ಥರು ಕಣ್ಣೀರಿನಿಂದ ಹಂಚಿಕೊಂಡಿದ್ದಾರೆ.
“ಅವರು ನಮ್ಮ ಪಾಲಿಗೆ ಅನ್ನಪೂರ್ಣೆಯಾಗಿದ್ದರು. ಅನಾಥೆಯಾದ ನನ್ನನ್ನು ಮಗಳಂತೆ ಬೆಳೆಸಿದರು. ಇಂದು ಅವರು ನಮ್ಮೊಂದಿಗಿಲ್ಲ ಎನ್ನುವುದನ್ನು ನಂಬಲು ಸಾಧ್ಯವಾಗುತ್ತಿಲ್ಲ” ಎಂದು ಕುಟುಂಬದ ಆಪ್ತರು ಹಾಗೂ ಗ್ರಾಮಸ್ಥರು ಭಾವುಕರಾಗಿ ಮಾತನಾಡಿದ್ದಾರೆ. ಚೆನ್ನಮ್ಮ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಮುತ್ತಿಗೆ ಹಿರಿಹಳ್ಳಿ ಗ್ರಾಮದಲ್ಲಿ ಮೌನ ಆವರಿಸಿದ್ದು, ಗ್ರಾಮಸ್ಥರು ದುಃಖ ವ್ಯಕ್ತಪಡಿಸಿದ್ದಾರೆ.
ಇದೀಗ ಚೆನ್ನಮ್ಮ ಅವರ ಅಂತ್ಯಕ್ರಿಯೆಗೆ ಹರದನಹಳ್ಳಿಯಲ್ಲಿ ಭಾರಿ ಸಿದ್ಧತೆ ಕೈಗೊಳ್ಳಲಾಗಿದೆ. ಅಪಾರ ದೈವಭಕ್ತೆಯಾಗಿದ್ದ ಚೆನ್ನಮ್ಮ ಅವರ ಅಂತಿಮ ಸಂಸ್ಕಾರ ನಡೆಯುವ ಸ್ಥಳವನ್ನು ವಾಸ್ತು ಶಾಸ್ತ್ರದ ಪ್ರಕಾರವೇ ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಖ್ಯಾತ ವಾಸ್ತು ತಜ್ಞ ಹರಿಪ್ರಸಾದ್ ಅವರು ದೇವೇಗೌಡರ ಕುಟುಂಬದ ಕೋರಿಕೆಯ ಮೇರೆಗೆ ಸ್ಥಳ ಪರಿಶೀಲಿಸಿ ಅಂತಿಮ ಸಂಸ್ಕಾರಕ್ಕೆ ಸೂಕ್ತ ಜಾಗವನ್ನು ಗುರುತಿಸಿದ್ದಾರೆ.
ಈ ಕುರಿತು ಮಾತನಾಡಿದ ಹರಿಪ್ರಸಾದ್, “ವಾಸ್ತು ನಿಯಮಗಳ ಪ್ರಕಾರ ಈಶಾನ್ಯ ಭಾಗದಲ್ಲಿ ಭಾರ ಇರಬಾರದು. ಉತ್ತರ ಹಾಗೂ ಪೂರ್ವ ಭಾಗ ತಗ್ಗಾಗಿರಬೇಕು. ಪಶ್ಚಿಮ ಮತ್ತು ದಕ್ಷಿಣ ಭಾಗ ಎತ್ತರದಲ್ಲಿದ್ದು, ಆ ದಿಕ್ಕಿನಲ್ಲಿ ಭಾರ ಇರಬೇಕು. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಅಂತಿಮ ಸಂಸ್ಕಾರದ ಸ್ಥಳವನ್ನು ಸಿದ್ಧಪಡಿಸಲಾಗಿದೆ” ಎಂದು ತಿಳಿಸಿದ್ದಾರೆ.
ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಮೊದಲು ಹೊಳೆನರಸೀಪುರದಲ್ಲಿರುವ ಎಚ್.ಡಿ. ರೇವಣ್ಣ ಅವರ ನಿವಾಸಕ್ಕೆ ತರಲಾಗುತ್ತದೆ. ಅಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾವಿರಾರು ಜನರು ಆಗಮಿಸುವ ನಿರೀಕ್ಷೆ ಇರುವುದರಿಂದ ಜಿಲ್ಲಾಡಳಿತ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಬಳಿಕ ಪಾರ್ಥಿವ ಶರೀರವನ್ನು ಅವರ ಹುಟ್ಟೂರು ಮುತ್ತಿಗೆ ಹಿರಿಹಳ್ಳಿಗೆ ಕೊಂಡೊಯ್ಯಲಾಗುತ್ತದೆ. ಅಲ್ಲಿಂದ ಹರದನಹಳ್ಳಿಯಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ.
ರಾಜ್ಯ ಹಾಗೂ ರಾಷ್ಟ್ರದ ಹಲವು ಗಣ್ಯರು ಅಂತಿಮ ನಮನ ಸಲ್ಲಿಸುವ ಸಾಧ್ಯತೆ ಇರುವ ಹಿನ್ನೆಲೆ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಐದು ಪೊಲೀಸ್ ಅಧೀಕ್ಷಕರ (SP) ನೇತೃತ್ವದಲ್ಲಿ 2,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜನಸಂದಣಿ ನಿಯಂತ್ರಣ, ವಾಹನ ಸಂಚಾರ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ವಿಶೇಷ ತಂಡಗಳು ಕಾರ್ಯನಿರ್ವಹಿಸಲಿವೆ.
ಗಣ್ಯರ ಸುಗಮ ಸಂಚಾರಕ್ಕಾಗಿ ಒಟ್ಟು ಐದು ಹೆಲಿಪ್ಯಾಡ್ಗಳನ್ನು ನಿರ್ಮಿಸಲಾಗಿದೆ. ಹರದನಹಳ್ಳಿಯಲ್ಲಿ ಎರಡು ಹಾಗೂ ಹೊಳೆನರಸೀಪುರದಲ್ಲಿ ಮೂರು ಹೆಲಿಪ್ಯಾಡ್ಗಳನ್ನು ಸಿದ್ಧಪಡಿಸಲಾಗಿದೆ. ಇದೇ ವೇಳೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ರೇವಣ್ಣ ನಿವಾಸಕ್ಕೆ ಭೇಟಿ ನೀಡಿ ಸಾರ್ವಜನಿಕ ದರ್ಶನ ಹಾಗೂ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ.
ಸಾವಿರಾರು ಜನರು ಸೇರುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದ್ದು, ಅಂತಿಮ ಯಾತ್ರೆ ಶಾಂತಿಯುತವಾಗಿ ನಡೆಯಲು ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಪೂರ್ಣಗೊಳಿಸಿದೆ.
