ಬೆಂಗಳೂರು (ಜುಲೈ 2): ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಎಸ್ಐಆರ್ (Special Intensive Revision) ಪ್ರಕ್ರಿಯೆ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಎಸ್ಐಆರ್ ಪ್ರಕ್ರಿಯೆ ಬಗ್ಗೆ ಮೊದಲ ಮಾಹಿತಿಯನ್ನೇ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳೇ ನೀಡಿದ್ದರು ಎಂದು ಹೇಳಿ, ಇದರ ಹಿಂದೆ ಸರ್ಕಾರದ ನೇರ ಪ್ರೇರಣೆ ಇದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.
ಮುಖ್ಯಮಂತ್ರಿಗಳೇ ಮುತುವರ್ಜಿ ವಹಿಸಿ, ಎಸ್ಐಆರ್ ವೇಳೆ ಸರಿಯಾದ ಮಾಹಿತಿ ನೀಡುವಂತೆ ಜನರಿಗೆ ಸೂಚನೆ ನೀಡುತ್ತಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರು ಹೊರಗುಳಿದರೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಬಹುದು ಎಂಬ ರೀತಿಯ ಜಾಹೀರಾತುಗಳ ಮೂಲಕ ಜನರಲ್ಲಿ ಆತಂಕ ಸೃಷ್ಟಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು. ಇದೇ ವೇಳೆ ಕಾಂಗ್ರೆಸ್ ಮುಖಂಡರು ಎಸ್ಐಆರ್ ವಿರುದ್ಧ ಕಟುವಾಗಿ ಮಾತನಾಡುತ್ತಿರುವುದೂ ಮುಖ್ಯಮಂತ್ರಿ ಪ್ರೇರಣೆಯಿಂದಲೇ ನಡೆಯುತ್ತಿರುವ ಬೆಳವಣಿಗೆ ಇರಬಹುದು ಎಂದು ಅವರು ಟೀಕಿಸಿದರು.
ರಾಮನಗರ ಜಿಲ್ಲೆಯಲ್ಲಿ ಎಸ್ಐಆರ್ ಪ್ರಕ್ರಿಯೆ ಸರಿಯಾದ ರೀತಿಯಲ್ಲಿ ನಡೆಯುತ್ತಿಲ್ಲ ಎಂದು ದೂರಿದ ಕುಮಾರಸ್ವಾಮಿ ಅವರು, ಅಲ್ಲಿನ ಬಿಎಲ್ಒಗಳು ಜನರನ್ನು ಚೌಟ್ರಿಗಳಲ್ಲಿ ಕೂರಿಸಿ ಸಾವಿರಾರು ಮಂದಿಯಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಹೇಳಿದರು. ಇದಲ್ಲದೆ, ಒಂದು ನಿರ್ದಿಷ್ಟ ಸಮುದಾಯದವರನ್ನು ಗುರಿಯಾಗಿಸಿಕೊಂಡು ಕೆಲಸ ನಡೆಯುತ್ತಿದೆ ಎಂಬ ಅನುಮಾನ ವ್ಯಕ್ತಪಡಿಸಿದ ಅವರು, ರಾಮನಗರ ಮತ್ತು ಚನ್ನಪಟ್ಟಣ ಭಾಗಗಳಲ್ಲಿ ಬಾಂಗ್ಲಾದೇಶ ಮೂಲದವರನ್ನು ಇರಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪವನ್ನೂ ಮಾಡಿದರು.
ಬಿಡದಿ ಹೋಬಳಿಯ ಕೇತಗನಹಳ್ಳಿಯಲ್ಲಿ ತಮ್ಮ ಕುಟುಂಬದ ಮತವೂ ಇರುವುದಾಗಿ ಉಲ್ಲೇಖಿಸಿದ ಕುಮಾರಸ್ವಾಮಿ, “ಮುಖ್ಯಮಂತ್ರಿಗಳೇ, ಕಳ್ಳಮತ ಸೃಷ್ಟಿ ಮಾಡಲು ನಿಮ್ಮಿಂದ ಆಗುತ್ತಿದೆ. ನಿಮಗೆ ಯಾವ ನೈತಿಕತೆ ಇದೆ?” ಎಂದು ನೇರವಾಗಿ ಪ್ರಶ್ನಿಸಿದರು. ರಾಜ್ಯದಲ್ಲಿ ಕಳ್ಳಮತದಾನಕ್ಕೆ ಅವಕಾಶ ಕಲ್ಪಿಸುವ ಕೆಲಸ ನಡೆಯುತ್ತಿದ್ದು, ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಇದು ಕೇವಲ ರಾಮನಗರಕ್ಕೆ ಸೀಮಿತವಾಗಿಲ್ಲ; ಇಡೀ ರಾಜ್ಯದಲ್ಲಿಯೇ ಇಂತಹ ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ ಕುಮಾರಸ್ವಾಮಿ, ಚುನಾವಣಾ ಆಯೋಗ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಎಸ್ಐಆರ್ ಪ್ರಕ್ರಿಯೆ ಸಂಪೂರ್ಣ ಪ್ರಾಮಾಣಿಕವಾಗಿ ನಡೆಯಬೇಕು, ಮತದಾರರ ಪಟ್ಟಿಯಲ್ಲಿ ಅಕ್ರಮಗಳಿಗೆ ಅವಕಾಶ ಇರಬಾರದು ಎಂದು ಹೇಳಿದರು.
ಈ ವಿಷಯವನ್ನು ಚುನಾವಣಾ ಆಯೋಗದ ಗಮನಕ್ಕೆ ತರುವುದಾಗಿ, ಜೊತೆಗೆ ಕೇಂದ್ರ ಗೃಹ ಸಚಿವರ ಗಮನಕ್ಕೂ ತರುವುದಾಗಿ ಕುಮಾರಸ್ವಾಮಿ ತಿಳಿಸಿದರು. ಜಿಲ್ಲಾಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂಬುದಕ್ಕೂ ಪ್ರಶ್ನೆ ಎತ್ತಿದ ಅವರು, ಜನರ ಮತದಾನದ ಹಕ್ಕಿನ ಮೇಲೆ ಯಾವುದೇ ರೀತಿಯ ರಾಜಕೀಯ ಪ್ರಭಾವ ಬೀಳಬಾರದು ಎಂದು ಆಗ್ರಹಿಸಿದರು.




