ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಘಟನೆಯಿಂದ ಪೊಗೃಹ ಸಚಿವ ಜಿ.ಪರಮೇಶ್ವರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಕರಣದ ಹಿನ್ನೆಲೆ
ಮಹಮ್ಮದ್ ಅಕ್ಟರ್ ಎಂಬುವವರ ವಿರುದ್ಧದ ಅಪರಾಧ ಪ್ರಕರಣವೊಂದರಲ್ಲಿ ಅವರಿಗೆ ಸಹಾಯ ಮಾಡುವ ಭರವಸೆ ನೀಡಿ ಇನ್ಸ್ಪೆಕ್ಟರ್ ಗೋವಿಂದರಾಜು ಬರೋಬ್ಬರಿ 5 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು. ಇದರಲ್ಲಿ ಈಗಾಗಲೇ 1 ಲಕ್ಷ ರೂಪಾಯಿಯನ್ನು ಮೊದಲ ಕಂತಾಗಿ ಪಡೆದಿದ್ದ ಇನ್ಸ್ಪೆಕ್ಟರ್, ಬಾಕಿ ಉಳಿದ 4 ಲಕ್ಷ ರೂಪಾಯಿಯನ್ನು ತಕ್ಷಣವೇ ನೀಡುವಂತೆ ಒತ್ತಡ ಹೇರಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತ ಅಕ್ಟರ್ ಲೋಕಾಯುಕ್ತ ಪೊಲೀಸರ ಮೊರೆ ಹೋಗಿದ್ದರು.
ಲೋಕಾಯುಕ್ತ ಅಧಿಕಾರಿಗಳ ಮಾರ್ಗದರ್ಶನದಂತೆ, ಮೈಸೂರು ರಸ್ತೆಯ ಸಿಎಎಆರ್ (CAR) ಮೈದಾನದ ಬಳಿ ಹಣ ನೀಡಲು ದೂರುದಾರರು ಬಂದಿದ್ದರು. ಇನ್ಸ್ಪೆಕ್ಟರ್ ಗೋವಿಂದರಾಜು ಅವರು ಕರ್ತವ್ಯದ ಮೇಲಿದ್ದಾಗ, ಅಂದರೆ ಪೊಲೀಸ್ ಸಮವಸ್ತ್ರದಲ್ಲಿಯೇ ಲಂಚದ ಹಣವನ್ನು ಸ್ವೀಕರಿಸಲು ಮುಂದಾಗಿದ್ದರು. 4 ಲಕ್ಷ ರೂಪಾಯಿಗಳನ್ನು ಕೈಗೆತ್ತಿಕೊಳ್ಳುತ್ತಿದ್ದಂತೆಯೇ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದರು.
ಲೋಕಾಯುಕ್ತ ಪೊಲೀಸರು ತಮಗೆ ಬೇಡಿ ತೊಡಗಿಸಲು ಮುಂದಾದಾಗ ಇನ್ಸ್ಪೆಕ್ಟರ್ ಗೋವಿಂದರಾಜು ಅವರು ಸಾರ್ವಜನಿಕವಾಗಿ ಜೋರಾಗಿ ಕಿರುಚಾಡಿ, ರಂಪಾಟ ಮಾಡಿದ್ದರು. ಈ ಹೈಡ್ರಾಮದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಪೊಲೀಸ್ ಇಲಾಖೆಗೆ ಮುಜುಗರ ಉಂಟುಮಾಡಿದೆ. ಈ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಇಲಾಖೆಯು ಗೋವಿಂದರಾಜು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ.
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಪದೇಪದೆ ಇಂತಹ ಘಟನೆಗಳು ನಡೆದಾಗ ಸರ್ಕಾರಕ್ಕೆ ಹಾಗೂ ವೈಯಕ್ತಿಕವಾಗಿ ನನಗೂ ಮುಜುಗರವಾಗುತ್ತದೆ. ವಾರ್ಷಿಕ ಪೊಲೀಸ್ ಸಮ್ಮೇಳನದಲ್ಲಿ ಭ್ರಷ್ಟಾಚಾರದ ವಿರುದ್ಧ ಕಠಿಣ ಎಚ್ಚರಿಕೆ ನೀಡಿದ್ದರೂ ಇಂತಹ ಕೃತ್ಯಗಳು ನಡೆಯುತ್ತಿವೆ. ಇದು ಯಾಕೆ ನಡೆಯುತ್ತಿದೆ ಎಂಬುದರ ಬಗ್ಗೆ ಸವಿಸ್ತಾರವಾದ ಅಧ್ಯಯನ ನಡೆಸಬೇಕಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪೊಲೀಸ್ ಪೋಸ್ಟಿಂಗ್ಗಾಗಿ ಹಣ ನೀಡುವ ವ್ಯವಸ್ಥೆ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಅವಧಿಯಲ್ಲಿ ಅಂತಹವುಗಳಿಗೆ ಅವಕಾಶವಿಲ್ಲ. ನಮಗೆ ಜನರಿಗೆ ಉತ್ತರಿಸುವ ಜವಾಬ್ದಾರಿಯಿದೆ. ಪ್ರಾಥಮಿಕ ವರದಿ ಬಂದ ನಂತರ ಇನ್ಸ್ಪೆಕ್ಟರ್ ವಿರುದ್ಧ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.





