ಬೆಂಗಳೂರು (ಜೂನ್ 20): ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಮೂಡಿದೆ ಎಂಬ ವಿಶ್ಲೇಷಣೆಗಳ ನಡುವೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದು, ಎರಡು ಪಕ್ಷಗಳ ನಡುವೆ ಯಾವುದೇ ಹೊಂದಾಣಿಕೆ ಕೊರತೆ ಇಲ್ಲ ಎಂದು ಹೇಳಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಮೈತ್ರಿಯಲ್ಲಿ ಭಿನ್ನಾಭಿಪ್ರಾಯದ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಗೆಲುವಿನ ನಿರೀಕ್ಷೆಯಿಂದಲ್ಲ, ಮುಂದಿನ ರಾಜಕೀಯ ಪರಿಸ್ಥಿತಿಯನ್ನು ಪರೀಕ್ಷಿಸುವ ಉದ್ದೇಶದಿಂದ ಕಣಕ್ಕಿಳಿಸಲಾಗಿತ್ತು. ಅಭ್ಯರ್ಥಿ ಆಯ್ಕೆಗೂ ಮುನ್ನ ಎರಡು ಸಭೆಗಳನ್ನು ನಡೆಸಿ ಎಲ್ಲ ಶಾಸಕರ ಅಭಿಪ್ರಾಯ ಪಡೆದುಕೊಂಡಿದ್ದೆ. ನಿನ್ನೆ ನಡೆದ ಸಭೆಯಲ್ಲಿ ಜಿ.ಟಿ. ದೇವೇಗೌಡರನ್ನು ಹೊರತುಪಡಿಸಿ 17 ಶಾಸಕರು ಭಾಗವಹಿಸಿದ್ದು, ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ ಎಂದದರು.
ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮುನ್ನವೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಆರ್. ಅಶೋಕ್ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಚರ್ಚೆ ನಡೆಸಲಾಗಿತ್ತು. ಕಳೆದ ಮೂರು ವರ್ಷಗಳಲ್ಲಿ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಆಗಿಲ್ಲ ಎಂಬ ಅಸಮಾಧಾನ ಎಲ್ಲೆಡೆ ವ್ಯಕ್ತವಾಗಿದೆ. ಇದು ಕೇವಲ ಜೆಡಿಎಸ್ ಅಥವಾ ಬಿಜೆಪಿ ಮಾತ್ರವಲ್ಲ, ಕಾಂಗ್ರೆಸ್ ಪಕ್ಷಕ್ಕೂ ಅನ್ವಯಿಸುತ್ತದೆ. ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಿರೀಕ್ಷಿತ ಮಟ್ಟದಲ್ಲಿ ಆಗದಿರುವುದು ಈ ಚುನಾವಣೆಯ ಮೇಲೂ ಪರಿಣಾಮ ಬೀರಿದೆ ಎಂದರು.
ಕೆಲವು ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗೆ ಮತ ಹಾಕಿದರೆ 40ರಿಂದ 50 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಸರ್ಕಾರದ ಕಡೆಯಿಂದ ಆಮಿಷ ಒಡ್ಡಲಾಗಿದೆ ಎಂದು ಆರೋಪಿಸಿದ ಕುಮಾರಸ್ವಾಮಿ, ಹೆಚ್ಚಿನ ಅನುದಾನ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿ ಕೆಲವರು ಚಂಚಲ ಮನಸ್ಥಿತಿಗೆ ಒಳಗಾಗಿರಬಹುದು ಎಂದು ಹೇಳಿದರು.
ಅಡ್ಡಮತದಾನದ ಬಗ್ಗೆ ಮಾತನಾಡಿದ ಅವರು, 18 ಮತಗಳಲ್ಲಿ ಒಂದು ಮತ ಹೊರಹೋಗುವ ಸಾಧ್ಯತೆ ಮೊದಲೇ ಗೊತ್ತಿತ್ತು. ಬಿಜೆಪಿಯ ಹೆಚ್ಚುವರಿ ಮತಗಳ ವರ್ಗಾವಣೆಯ ನಿರೀಕ್ಷೆಯೂ ಇತ್ತು. ಆದರೆ ಕೆಲ ಶಾಸಕರು ಕ್ಷೇತ್ರದ ಅಭಿವೃದ್ಧಿ ಹೆಸರಿನಲ್ಲಿ ಸರ್ಕಾರದ ಆಮಿಷಕ್ಕೆ ಒಳಗಾಗಿರಬಹುದು. ಈ ಬೆಳವಣಿಗೆಯಿಂದ ಬಿಜೆಪಿ-ಜೆಡಿಎಸ್ ಮೈತ್ರಿಗೆ ಧಕ್ಕೆಯಾಗುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಎರಡೂ ಪಕ್ಷಗಳ ನಡುವೆ ಬಿರುಕು ಉಂಟುಮಾಡುವ ಆಸೆ ಇದೆ. ಆದರೆ ನಮ್ಮ ಮತ್ತು ಬಿಜೆಪಿಯ ನಡುವೆ ಯಾವುದೇ ಹೊಂದಾಣಿಕೆ ಸಮಸ್ಯೆ ಇಲ್ಲ ಎಂದರು.
ಬಿಜೆಪಿ ಈ ವಿಚಾರದ ಕುರಿತು ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದು, ಸಿ.ಟಿ. ರವಿಗೆ ಜವಾಬ್ದಾರಿ ನೀಡಲಾಗಿದೆ. ತಾವು ದೆಹಲಿಗೆ ತೆರಳಿದಾಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿ ಎಲ್ಲ ಮಾಹಿತಿಗಳನ್ನು ಹಂಚಿಕೊಳ್ಳುವುದಾಗಿ ಕುಮಾರಸ್ವಾಮಿ ಹೇಳಿದರು. ಮುಖ್ಯಮಂತ್ರಿ ಸ್ಥಾನ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಯ ತಮ್ಮ ಗುರಿ ಮುಖ್ಯಮಂತ್ರಿ ಹುದ್ದೆಯಲ್ಲ. ಮೊದಲು ರಾಜ್ಯದಲ್ಲಿರುವ ಕೆಟ್ಟ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, 2028ರಲ್ಲಿ ಜನರ ನಿರೀಕ್ಷೆಗೆ ತಕ್ಕ ಜನಪರ ಸರ್ಕಾರವನ್ನು ತರಬೇಕು ಎಂಬುದೇ ತಮ್ಮ ಗುರಿಯಾಗಿದೆ ಎಂದು ಹೇಳಿದರು.
