ಬೆಂಗಳೂರು, ಜುಲೈ 18: ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಬಿಜೆಪಿ ಪಾದಯಾತ್ರೆ ಘೋಷಣೆ ಮಾಡಿದ ಬೆನ್ನಲ್ಲೇ, ಜೆಡಿಎಸ್ ಕೂಡ ಪ್ರತ್ಯೇಕವಾಗಿ ಪಾದಯಾತ್ರೆ ನಡೆಸುವುದಾಗಿ ಘೋಷಿಸಿದೆ. ಜು.30ರಿಂದ ಆಗಸ್ಟ್ 1ರವರೆಗೆ ಬಿಡದಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ವರೆಗೆ ಪಾದಯಾತ್ರೆ ನಡೆಸಲು ಜೆಡಿಎಸ್ ನಾಯಕರು ತೀರ್ಮಾನಿಸಿದ್ದು, ರೈತರ ಪರ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಸಂದೇಶ ನೀಡಿದ್ದಾರೆ.
ಶನಿವಾರ ಜೆ.ಪಿ. ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಹಾಗೂ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಕೃಷ್ಣ ರೆಡ್ಡಿ ಈ ಕುರಿತು ಮಾಹಿತಿ ನೀಡಿದರು. ಬಿಡದಿ ಟೌನ್ಶಿಪ್ ಯೋಜನೆಗೆ ರೈತರ ವಿರೋಧ ಮುಂದುವರಿದಿರುವ ಹಿನ್ನೆಲೆಯಲ್ಲಿ, ಮೊದಲು ಯೋಜನೆ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಲಾಗುವುದು. ಬಳಿಕ ಭೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ವರೆಗೆ ಪಾದಯಾತ್ರೆ ನಡೆಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ಯೋಜನೆಗೆ ಕೇವಲ ಶೇ.9ರಷ್ಟು ರೈತರು ಮಾತ್ರ ಒಪ್ಪಿಗೆ ಸೂಚಿಸಿದ್ದು, ಬಹುಪಾಲು ರೈತರು ತಮ್ಮ ಜಮೀನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ. ಈ ಹಿಂದೆ 11 ಕಿಲೋಮೀಟರ್ ಪಾದಯಾತ್ರೆ ನಡೆಸಿ ರೈತರ ಅಭಿಪ್ರಾಯ ಸಂಗ್ರಹಿಸಲಾಗಿದ್ದು, ಹೈನುಗಾರಿಕೆ ಹಾಗೂ ಕೃಷಿಯನ್ನೇ ನಂಬಿಕೊಂಡಿರುವ ಕುಟುಂಬಗಳು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿವೆ ಎಂದು ನಾಯಕರು ಹೇಳಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರೈತರಲ್ಲಿ ಗೊಂದಲ ಸೃಷ್ಟಿಸುವ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಜೆಡಿಎಸ್ ಟೀಕಿಸಿದೆ. “ಜಮೀನು ಕೊಡಲು ಇಚ್ಛೆಯಿರುವವರು ಕೊಡಲಿ, ಬೇಡವಾದವರು ಕೊಡಬೇಡಿ” ಎಂಬ ಸಿಎಂ ಹೇಳಿಕೆಯಿಂದ ರೈತರು ದ್ವಂದ್ವಕ್ಕೆ ಸಿಲುಕಿದ್ದಾರೆ. ಸರ್ಕಾರ ಸ್ಪಷ್ಟ ನಿಲುವು ಪ್ರಕಟಿಸದೆ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ ಈಗಾಗಲೇ ಪಾದಯಾತ್ರೆ ಘೋಷಿಸಿರುವ ಕುರಿತು ಪ್ರತಿಕ್ರಿಯಿಸಿದ ಸುರೇಶ್ ಬಾಬು, ರೈತರ ಹೋರಾಟದಲ್ಲಿ ಎಲ್ಲ ವಿರೋಧ ಪಕ್ಷಗಳ ಸಹಕಾರ ಅಗತ್ಯ ಎಂದು ಹೇಳಿದರು. ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಕೂಡ ರೈತರ ಪರವಾಗಿ ಧ್ವನಿ ಎತ್ತಿದ್ದು, ಮುಂದಿನ ದಿನಗಳಲ್ಲಿ ಎರಡೂ ಪಕ್ಷಗಳ ನಾಯಕರು ಚರ್ಚಿಸಿ ಹೋರಾಟದ ರೂಪುರೇಷೆಗಳನ್ನು ನಿರ್ಧರಿಸುವ ಸಾಧ್ಯತೆ ಇದೆ ಎಂದರು.
ಸರ್ಕಾರ ಬಿಡದಿ ಟೌನ್ಶಿಪ್ ಯೋಜನೆಯನ್ನು ತಕ್ಷಣವೇ ಕೈಬಿಡಬೇಕು ಎಂದು ಆಗ್ರಹಿಸಿದ ಜೆಡಿಎಸ್, ರೈತರ ಬದುಕಿಗೆ ಧಕ್ಕೆ ತರುವ ಯಾವುದೇ ಯೋಜನೆಯನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಎಚ್ಚರಿಕೆ ನೀಡಿತು. ಸರ್ಕಾರ ಹಠಮಾರಿ ಧೋರಣೆ ಮುಂದುವರಿಸಿದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದೆ.
ಇದೇ ವೇಳೆ ಕನಕಪುರದಲ್ಲಿ ಎರಡನೇ ವಿಮಾನ ನಿಲ್ದಾಣ ಸ್ಥಾಪನೆ ಪ್ರಸ್ತಾವಕ್ಕೂ ಜೆಡಿಎಸ್ ವಿರೋಧ ವ್ಯಕ್ತಪಡಿಸಿದೆ. ನೆಲಮಂಗಲ ಅಥವಾ ಶಿರಾ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಹೆಚ್ಚು ಸೂಕ್ತವಾಗಿದ್ದು, ಕನಕಪುರವನ್ನು ಆಯ್ಕೆ ಮಾಡಿರುವುದರ ಹಿಂದೆ ಬೇರೆ ಉದ್ದೇಶಗಳಿವೆ ಎಂದು ಆರೋಪಿಸಿದ ಜೆಡಿಎಸ್ ನಾಯಕರು, ಈ ನಿರ್ಧಾರವನ್ನು ಸರ್ಕಾರ ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿದರು.





