ಕರ್ನಾಟಕಕ್ಕೆ ಯತೀಂದ್ರ ಸೇರಿ ನಾಲ್ವರಿಗೆ ಡಿಸಿಎಂ ಪಟ್ಟ? ಕಾಂಗ್ರೆಸ್ ಹೈಕಮಾಂಡ್ ಹೊಸ ಸೂತ್ರ ಏನು?

Untitled design 2026 05 27T082201.840

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಇದೀಗ ಭಾರಿ ಮಹಾತಿರುವು ಸಂಭವಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಂತಿಮ ನಿರ್ಧಾರ ಕೈಗೊಂಡಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ನಡೆದ ಸುದೀರ್ಘ ಸಭೆಗಳ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆಯಾಗಿದೆ. ಇದರೊಂದಿಗೆ, ಹೊಸ ಸರ್ಕಾರದಲ್ಲಿ ನಾಲ್ವರು ಉಪಮುಖ್ಯಮಂತ್ರಿಗಳ (ಡಿಸಿಎಂ) ಸ್ಥಾನ ಸೃಷ್ಟಿಯಾಗುವ ಸೂಚನೆಗಳು ಬಲಗೊಂಡಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಸೂಚನೆಯ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠರೊಂದಿಗೆ ನಡೆದ ಮಾತುಕತೆಯ ಬಳಿಕ, ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ನಡೆಯುವ ಸಾಧ್ಯತೆ ಹೆಚ್ಚಾಗಿದೆ.

ಇದೇ ವೇಳೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದು, ರಾಷ್ಟ್ರ ರಾಜಕಾರಣಕ್ಕೆ ಬರಲು ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯಸಭೆ ಮೂಲಕ ಕೇಂದ್ರ ರಾಜಕೀಯದಲ್ಲಿ ಪ್ರಮುಖ ಜವಾಬ್ದಾರಿ ನೀಡುವ ಪ್ರಸ್ತಾಪವೂ ಮುಂದಿರಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಇದರ ಜೊತೆಗೆ, ಸಿದ್ದರಾಮಯ್ಯ ಅವರ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಹೊಸ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡುವ ಆಫರ್ ಕೂಡ ಚರ್ಚೆಗೆ ಬಂದಿದೆ. ಆರಂಭದಲ್ಲಿ ಈ ಪ್ರಸ್ತಾಪಕ್ಕೆ ಸಿದ್ದರಾಮಯ್ಯ ತಕ್ಷಣ ಒಪ್ಪಿಗೆ ಸೂಚಿಸದಿದ್ದರೂ, ಆಪ್ತ ಸಚಿವರು ಹಾಗೂ ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅಧಿಕಾರ ಹಂಚಿಕೆ ಸೂತ್ರಕ್ಕೆ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ.

ದೆಹಲಿಯಿಂದ ಬೆಂಗಳೂರಿಗೆ ಮರಳಿರುವ ಸಿದ್ದರಾಮಯ್ಯ ಅವರು ಇಂದು ಮಹತ್ವದ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆಯಿದೆ. ಈ ಸುದ್ದಿಗೋಷ್ಠಿಯಲ್ಲಿ ತಮ್ಮ ರಾಜೀನಾಮೆ ಅಥವಾ ನಾಯಕತ್ವ ಬದಲಾವಣೆ ಕುರಿತ ಮಹತ್ವದ ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ವಲಯದಲ್ಲಿ ಚರ್ಚೆ ಜೋರಾಗಿದೆ.

ಇನ್ನು ರಾಜ್ಯದಲ್ಲಿ ಉಂಟಾಗಬಹುದಾದ ರಾಜಕೀಯ ಅಸಮಾಧಾನವನ್ನು ತಡೆಯಲು ಕಾಂಗ್ರೆಸ್ ಹೈಕಮಾಂಡ್ ಹೊಸ ಸಾಮಾಜಿಕ ಸಮತೋಲನದ ಫಾರ್ಮುಲಾವನ್ನು ಸಿದ್ಧಪಡಿಸಿದೆ ಎನ್ನಲಾಗುತ್ತಿದೆ. ಹೊಸ ಸರ್ಕಾರದಲ್ಲಿ ಒಬ್ಬ ಮುಖ್ಯಮಂತ್ರಿಯ ಜೊತೆಗೆ ನಾಲ್ವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವ ಪ್ರಸ್ತಾಪ ಗಂಭೀರವಾಗಿ ಚರ್ಚೆಯಲ್ಲಿದೆ.

ಈ ನಾಲ್ವರು ಡಿಸಿಎಂ ಸ್ಥಾನಗಳ ಮೂಲಕ ರಾಜ್ಯದ ಪ್ರಮುಖ ಸಮುದಾಯಗಳಿಗೆ ಪ್ರತಿನಿಧಿತ್ವ ನೀಡಲು ಕಾಂಗ್ರೆಸ್ ತಂತ್ರ ರೂಪಿಸಿದೆ ಎಂದು ಹೇಳಲಾಗುತ್ತಿದೆ. ಡಿಸಿಎಂ ರೇಸ್‌ನಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರುಗಳಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆ, ಬಿ.ಜೆ. ಜಮೀರ್ ಅಹ್ಮದ್ ಖಾನ್ ಹಾಗೂ ಎಂ.ಬಿ. ಪಾಟೀಲ್ ಇದ್ದಾರೆ.

ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗದ ಪ್ರತಿನಿಧಿಯಾಗಿ ಗುರುತಿಸಿಕೊಂಡಿದ್ದರೆ, ಪ್ರಿಯಾಂಕ್ ಖರ್ಗೆ ದಲಿತ ಸಮುದಾಯದ ಪ್ರಮುಖ ನಾಯಕರಾಗಿ ಹೊರಹೊಮ್ಮಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಪರವಾಗಿ ಜಮೀರ್ ಅಹ್ಮದ್ ಖಾನ್ ಹೆಸರು ಕೇಳಿಬರುತ್ತಿದ್ದು, ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಎಂ.ಬಿ. ಪಾಟೀಲ್ ಅವರಿಗೆ ಸಹ ಡಿಸಿಎಂ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Exit mobile version