ಬೆಳಗಾವಿ: ಕಾಂಗ್ರೆಸ್ನ ಹಿರಿಯ ಹಾಗೂ ಅನುಭವಿ ಶಾಸಕ ಶಾಮನೂರು ಶಿವಶಂಕರಪ್ಪ ಅವರು ವಿಧಿವಶರಾದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಕಲಾಪವನ್ನು ನಾಳೆ ಬೆಳಿಗ್ಗೆ 9:30 ಗಂಟೆಗೆ ಮುಂದೂಡಲಾಗಿದೆ.
ರಾಜ್ಯ ರಾಜಕೀಯಕ್ಕೆ ಅಪಾರ ಕೊಡುಗೆ ನೀಡಿದ್ದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನವು ರಾಜ್ಯದ ರಾಜಕೀಯ ವಲಯದಲ್ಲಿ ಆಘಾತ ಉಂಟುಮಾಡಿದೆ. ಅವರ ನಿಧನದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ವಿಧಾನಸಭೆ ಹಾಗೂ ವಿಧಾನಪರಿಷತ್ ಕಲಾಪಗಳಲ್ಲಿ ಸಂತಾಪ ಸೂಚನೆ ಸಭೆ ಆಯೋಜಿಸಲಾಯಿತು. ಸದನದಲ್ಲಿ ಎಲ್ಲ ಪಕ್ಷಗಳ ಸದಸ್ಯರು ನಿಂತು ಮೌನಾಚರಣೆ ಮೂಲಕ ಅಗಲಿದ ಹಿರಿಯ ಶಾಸಕರಿಗೆ ಶ್ರದ್ಧಾಂಜಲಿ ಅರ್ಪಿಸಿದರು.
ಸಂತಾಪ ಸೂಚನೆ ಸಭೆಯಲ್ಲಿ ಮಾತನಾಡಿದ ಸ್ಪೀಕರ್ ಯು.ಟಿ. ಖಾದರ್ ಅವರು, ಶಾಮನೂರು ಶಿವಶಂಕರಪ್ಪ ಅವರು ಸರಳತೆ, ಶಿಸ್ತು ಹಾಗೂ ಜನಪರ ಸೇವೆಯಿಂದ ಗುರುತಿಸಿಕೊಂಡ ಅಪರೂಪದ ನಾಯಕರು ಎಂದು ಬಣ್ಣಿಸಿದರು. ಹಲವು ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದ ಅವರು, ತಮ್ಮ ಕ್ಷೇತ್ರದ ಜನರಿಗಾಗಿ ಸದಾ ಹೋರಾಟ ನಡೆಸಿದವರು ಎಂದು ಸ್ಮರಿಸಿದರು.
ಸಂತಾಪ ಸೂಚನೆ ಸಭೆ ಮುಗಿದ ನಂತರ, ಸ್ಪೀಕರ್ ಯು.ಟಿ. ಖಾದರ್ ಅವರು ಇಂದು ನಡೆಯಬೇಕಿದ್ದ ವಿಧಾನಸಭೆಯ ಕಲಾಪವನ್ನು ಮುಂದೂಡುವುದಾಗಿ ಅಧಿಕೃತ ಆದೇಶ ಹೊರಡಿಸಿದರು. ಅದರಂತೆ, ವಿಧಾನಸಭೆಯ ಮುಂದಿನ ಕಲಾಪ ನಾಳೆ ಬೆಳಿಗ್ಗೆ 9:30ಕ್ಕೆ ಆರಂಭವಾಗಲಿದೆ. ಇದೇ ವೇಳೆ ವಿಧಾನಪರಿಷತ್ ಕಲಾಪವೂ ಮುಂದೂಡಲಾಗಿದೆ.
ಇನ್ನೊಂದೆಡೆ, ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದಾವಣಗೆರೆಯ ಹೈಸ್ಕೂಲು ಮೈದಾನದಲ್ಲಿ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕಾಗಿ ಇರಿಸಲಾಗಿದ್ದು, ಇಂದು ಸಂಜೆ 4 ಗಂಟೆಯವರೆಗೆ ಜನರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅಂತಿಮ ದರ್ಶನ ಪಡೆಯಲು ಆಗಮಿಸುವ ನಿರೀಕ್ಷೆ ಇದೆ.
ಅಂತಿಮ ದರ್ಶನದ ಬಳಿಕ, ಸಂಜೆ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ, ಪತ್ನಿಯ ಸಮಾಧಿಯ ಪಕ್ಕದಲ್ಲಿಯೇ ವೀರಶೈವ ಲಿಂಗಾಯಿತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಈ ವೇಳೆ ಕುಟುಂಬದ ಸದಸ್ಯರು, ಆಪ್ತರು ಹಾಗೂ ಅಪಾರ ಸಂಖ್ಯೆಯ ಬೆಂಬಲಿಗರು ಹಾಜರಾಗಲಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸರ್ಕಾರದ ಸಚಿವರು, ಶಾಸಕರು, ವಿವಿಧ ಪಕ್ಷಗಳ ನಾಯಕರು ಹಾಗೂ ಗಣ್ಯರು ಪಾಲ್ಗೊಳ್ಳುವ ಸಾಧ್ಯತೆ ಇದೆ. ರಾಜ್ಯ ಸರ್ಕಾರದ ವತಿಯಿಂದ ಪೂರ್ಣ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.





