BJP ಹಾಗೂ ಜೆಡಿಎಸ್ ಸದಸ್ಯರ ಪ್ರತಿಭಟನೆ ಮತ್ತು ಗದ್ದಲದ ನಡುವೆಯೇ ವಿಧಾನಸಭೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ತಿದ್ದುಪಡಿ ಮಸೂದೆ ಸೇರಿದಂತೆ ಮೂರು ಮಹತ್ವದ ತಿದ್ದುಪಡಿ ಮಸೂದೆಗಳಿಗೆ ಅಂಗೀಕಾರ ದೊರೆತಿದೆ. 2026ನೇ ಸಾಲಿನ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕ ಹಾಗೂ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಸದನದಲ್ಲಿ ಅಂಗೀಕರಿಸಲಾಯಿತು.
ವಿಧಾನಸಭೆಯಲ್ಲಿ ಗದ್ದಲದ ನಡುವೆಯೇ ಸಚಿವ ಕೃಷ್ಣ ಬೈರೇಗೌಡ ಅವರು ಮೂರು ಮಸೂದೆಗಳನ್ನು ಪರ್ಯಾಲೋಚನೆಗೆ ಮಂಡಿಸಿದರು. ಬಿಡಿಎ ತಿದ್ದುಪಡಿ ಮಸೂದೆ ಕುರಿತು ವಿವರಣೆ ನೀಡಿದ ಅವರು, ಬಿಡಿಎ ಸ್ವಾಧೀನಪಡಿಸಿಕೊಂಡಿರುವ ಭೂಮಿಯಲ್ಲಿ ಹಲವು ಬಡಾವಣೆಗಳು ನಿರ್ಮಾಣವಾಗಿದ್ದು, ಅವುಗಳಲ್ಲಿ ಅನೇಕ ಅನಧಿಕೃತ ಮನೆಗಳಿವೆ. ಈ ಮನೆಗಳನ್ನು ತೆರವುಗೊಳಿಸಲು ಸಾಧ್ಯವಾಗದ ಪರಿಸ್ಥಿತಿ ಒಂದೆಡೆಯಾದರೆ, ಮತ್ತೊಂದೆಡೆ ಮನೆ ಮಾಲೀಕರಿಗೆ ತಮ್ಮ ಆಸ್ತಿಗಳಿಗೆ ಪೂರ್ಣ ಪ್ರಮಾಣದ ದಾಖಲೆಗಳನ್ನು ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
ಇಂತಹ ಬಡಾವಣೆಗಳಲ್ಲಿರುವ ಮನೆ ಮಾಲೀಕರಿಗೆ ಶಾಶ್ವತ ದಾಖಲೆಗಳನ್ನು ಒದಗಿಸುವ ಉದ್ದೇಶದಿಂದ ತಿದ್ದುಪಡಿ ತರಲಾಗಿದೆ. ಮಾರ್ಗಸೂಚಿ ದರದ ಮೇಲೆ ಶೇ.50ರಷ್ಟು ರಿಯಾಯಿತಿ ನೀಡುವ ಮೂಲಕ ಆಸ್ತಿ ದಾಖಲೀಕರಣಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡ ಭೂಮಿಯಲ್ಲಿ ಸುಮಾರು 1,11,560 ಅನಧಿಕೃತ ಮನೆಗಳು ನಿರ್ಮಾಣವಾಗಿವೆ ಎಂದು ಸಚಿವರು ಮಾಹಿತಿ ನೀಡಿದರು.
ಇದೇ ಮಸೂದೆಯಲ್ಲಿ ಬಿಡಿಎ ಆಯುಕ್ತರಿಗೆ ಕಾಮಗಾರಿಗಳಿಗೆ ₹5 ಕೋಟಿವರೆಗೆ ಆರ್ಥಿಕ ಮಂಜೂರಾತಿ ನೀಡುವ ಅಧಿಕಾರ ಕಲ್ಪಿಸಲಾಗಿದೆ. ಈ ಹಿಂದೆ ಆಯುಕ್ತರಿಗೆ ₹50 ಲಕ್ಷದವರೆಗೆ ಮಾತ್ರ ಮಂಜೂರಾತಿ ನೀಡುವ ಅಧಿಕಾರವಿತ್ತು. ಬಡಾವಣೆಗಳು, ಪ್ಲಾಟ್ಗಳು ಮತ್ತು ವಿಲ್ಲಾಗಳ ದುರಸ್ತಿ ಹಾಗೂ ನಿರ್ವಹಣೆಯಂತಹ ತ್ವರಿತ ಕಾಮಗಾರಿಗಳನ್ನು ಕೈಗೊಳ್ಳಲು ಈ ಮಿತಿ ಹೆಚ್ಚಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಅಲ್ಲದೆ, ಬಿಡಿಎ ಭೂಮಿಯಲ್ಲಿ ಅನಧಿಕೃತವಾಗಿ ಅಧಿಭೋಗ ಹೊಂದಿರುವವರು ತಿದ್ದುಪಡಿ ಕಾಯ್ದೆ ಜಾರಿಗೆ ಬಂದ ದಿನದಿಂದ ಎರಡು ವರ್ಷಗಳೊಳಗೆ ನಿವೇಶನ ಹಂಚಿಕೆ ಪಡೆಯದಿದ್ದರೆ, ಅಂತಹವರನ್ನು ತೆರವುಗೊಳಿಸಲು ಪ್ರಾಧಿಕಾರಕ್ಕೆ ಅವಕಾಶ ನೀಡಲಾಗಿದೆ.
ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕದಲ್ಲಿಯೂ ಹಲವು ಪ್ರಮುಖ ಅಂಶಗಳನ್ನು ಸೇರಿಸಲಾಗಿದೆ. 2005ರ ನಂತರ ಹಾಗೂ 2015ರ ತಿದ್ದುಪಡಿ ಕಾಯ್ದೆ ಜಾರಿಗೆ ಬರುವ ಮೊದಲು ಅನುಮೋದನೆಗೊಂಡಿದ್ದರೂ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಳ್ಳದ ಬಡಾವಣೆಗಳಿಗೆ ಮಾರ್ಗಸೂಚಿ ಮೌಲ್ಯದ ಶೇ.3ರಷ್ಟು ದಂಡ ವಿಧಿಸುವ ವ್ಯವಸ್ಥೆಯನ್ನು ಕಾನೂನುಬದ್ಧಗೊಳಿಸಲಾಗುತ್ತಿದೆ.
ಈ ದಂಡ ಪಾವತಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಬಡಾವಣೆಗಳಿಗೆ ಅಂತಿಮ ಅನುಮೋದನೆ ನೀಡಲು ಹಾಗೂ ಉಳಿಕೆ ನಿವೇಶನಗಳನ್ನು ಬಿಡುಗಡೆ ಮಾಡಲು ಮಸೂದೆ ಅವಕಾಶ ಕಲ್ಪಿಸುತ್ತದೆ. ಈ ಹಿಂದೆ ವಿಧಿಸಲಾಗಿದ್ದ ಅಥವಾ ಸಂಗ್ರಹಿಸಲಾದ ದಂಡವನ್ನೂ ಸಿಂಧುಗೊಳಿಸುವ ಪ್ರಸ್ತಾವನೆ ಇದೆ.
ಇನ್ನು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕಕ್ಕೂ ಸದನದ ಅನುಮೋದನೆ ದೊರೆತಿದೆ. ಪ್ರಾಧಿಕಾರದ ಉಪಾಧ್ಯಕ್ಷರು, ಪದನಿಮಿತ್ತ ಸದಸ್ಯರು ಹಾಗೂ ಸರ್ಕಾರೇತರ ಸದಸ್ಯರಿಗೆ ಸಂಬಂಧಿಸಿದ ಉಪಬಂಧಗಳನ್ನು ಪರಿಷ್ಕರಿಸುವ ಉದ್ದೇಶದಿಂದ ಈ ತಿದ್ದುಪಡಿ ಮಸೂದೆ ತರಲಾಗಿದೆ.





