ಬೆಳಗಾವಿಯಲ್ಲಿ ಮರಾಠಿ ಪುಂಡರ ಹಿಂಸಾಚಾರವನ್ನು ಖಂಡಿಸಿ ಕನ್ನಡ ಪರ ಹೋರಾಟಗಾರರು, ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದರು. ಈ ಬಂದ್ ರಾಜ್ಯದ ಹಲವೆಡೆಗಳಲ್ಲಿ ವಿವಿಧ ರೀತಿಯ ಪ್ರತಿಕ್ರಿಯೆಗಳನ್ನು ಪಡೆದಿದ್ದು, ವಿಶೇಷವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.
ಮಾಲ್ಗಳು ಮತ್ತು ಥಿಯೇಟರ್ಗಳ ಬೆಂಬಲ
ಕಳೆದ ಕೆಲ ವರ್ಷಗಳಲ್ಲಿ ಬಂದ್ಗಳ ಪ್ರಭಾವ ಕಡಿಮೆಯಾಗಿದ್ದರೂ, ಈ ಬಾರಿ ಕೆಲವು ಪ್ರಮುಖ ಮಾಲ್ಗಳು ಬಂದ್ಗೆ ಬೆಂಬಲ ಸೂಚಿಸಿವೆ. ಲುಲ್ಲು ಮಾಲ್, ಮಂತ್ರಿ ಸ್ಕ್ವೇರ್, ಓರಾಯನ್ ಮಾಲ್ಗಳು ತಮ್ಮ ಬೆಂಬಲವನ್ನು ಘೋಷಿಸಿ, ಬೆಳಗಿನ ಸಿನಿಮಾ ಪ್ರದರ್ಶನಗಳನ್ನು ರದ್ದುಪಡಿಸಿದ್ದವು. ಥಿಯೇಟರ್ ಮಾಲೀಕರು ಕೂಡ ಬೆಳಗಿನ ಶೋಗಳನ್ನು ರದ್ದುಗೊಳಿಸಿದ್ದಾರೆ.
ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಹೈಡ್ರಾಮಾ
ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಂದ್ ಹಿನ್ನೆಲೆ ಹೈಡ್ರಾಮಾ ನಡೆದಿದೆ. ಪ್ರತಿಭಟನಾಕಾರರು ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಸಾರ್ವಜನಿಕರಿಗೆ ಮನವಿ ಮಾಡಲು ಅವಕಾಶ ನೀಡಬೇಕೆಂದು ಪ್ರತಿಭಟನಾಕಾರರು ಬೇಡಿಕೆ ಇಟ್ಟಿದ್ದು, ಸಂಜೆವರೆಗೂ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ. ಇವರ ಮನವೊಲಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಬೆಂಗಳೂರು ನಗರದಲ್ಲಿ ಬಂದ್ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚು ಮಾಡಲಾಗಿದೆ. ಮೆಜೆಸ್ಟಿಕ್, ಓರಾಯನ್ ಮಾಲ್, ಮಂತ್ರಿ ಮಾಲ್ ಮುಂತಾದ ಪ್ರಮುಖ ಕಟ್ಟಡಗಳಿಗೆ ಬಿಗಿ ಭದ್ರತೆ ನೀಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಂದೋಬಸ್ತ್ ನೀಡಲಾಗಿದೆ.
ಸಾರಿಗೆ ಬಸ್ಗಳ ಸಂಚಾರ
ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳು ಎಂದಿನಂತೆ ಸಂಚರಿಸಿದ್ದರೂ, ಓಲಾ, ಉಬರ್ ಡ್ರೈವರ್ಸ್ ಅಂಡ್ ಓನರ್ಸ್ ಅಸೋಸಿಯೇಷನ್, ಆಟೊ ರಿಕ್ಷಾ ಸಂಘಟನೆಗಳು ಬಂದ್ಗೆ ಬೆಂಬಲ ನೀಡಿದ್ದರಿಂದ ಸಂಚಾರದಲ್ಲಿ ಕೆಲವು ವ್ಯತ್ಯಾಸಗಳಿವೆ. ಇದರಿಂದ ಕೆಲವರು ಬಸ್ ನಿಲ್ದಾಣಗಳಿಗೆ ಸಮಯಕ್ಕಿಂತ ಮುಂಚೆಯೇ ಬಂದು ಕಾಯುತ್ತಿರುವುದು ಕಂಡುಬಂದಿದೆ.
ಪ್ರತಿಭಟನೆಗಳು ಮತ್ತು ಪೊಲೀಸ್ ಬಂದೋಬಸ್ತ್
ಬೆಂಗಳೂರಿನ ಟೌನ್ಹಾಲ್ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಮೆರವಣಿಗೆ ನಡೆಸಲಾಯಿತು. ಪ್ರತಿಭಟನಾಕಾರರು ರಸ್ತೆಯನ್ನು ತಡೆದು ತಮ್ಮ ಆಕ್ರೋಶವನ್ನು ಹೊರಹಾಕಿದರು. ಪೊಲೀಸರು ಈ ಸಂದರ್ಭದಲ್ಲಿ ಬಂದೋಬಸ್ತ್ ಮಾಡಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ.
ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಭಾರೀ ಜನಜಂಗುಳಿ
ಕರ್ನಾಟಕ ಬಂದ್ ಹಿನ್ನೆಲೆ, ಬೆಂಗಳೂರು ಏರ್ಪೋರ್ಟ್ನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿತ್ತು. ವಿಮಾನ ನಿಲ್ದಾಣದಲ್ಲಿ ಜನರ ಹಾವಳಿ ಕಂಡುಬಂದಿದ್ದು, ಕೆಲವು ಮಂದಿ ತಮ್ಮ ಲಗೇಜ್ ಜೊತೆ ನಿಂತು ಕಾಯುತ್ತಿದ್ದರು.
ಮೈಸೂರು, ಕಲ್ಯಾಣ ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ ಕಂಡುಬಂದರೆ, ಕರಾವಳಿ ಕರ್ನಾಟಕದಲ್ಲಿ ಬಂದ್ಗೆ ಹೆಚ್ಚಿನ ಪ್ರತಿಕ್ರಿಯೆ ವ್ಯಕ್ತವಾಗಲಿಲ್ಲ.