ಕರ್ನಾಟಕದ ಅತ್ಯಂತ ಪ್ರತಿಷ್ಠಿತ ಕಣಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಚಿತ್ರಣ ನಿಧಾನವಾಗಿ ಲಭ್ಯವಾಗುತ್ತಿದೆ. ಅಂಚೆ ಮತಗಳ ಎಣಿಕೆ ಮುಕ್ತಾಯವಾಗಿದ್ದು, ಮೊದಲ ಸುತ್ತಿನ ಇವಿಎಂ (EVM) ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಎರಡೂ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಶುಭಾರಂಭ ಮಾಡಿದ್ದಾರೆ.
ದಾವಣಗೆರೆ ದಕ್ಷಿಣ: ಸಮರ್ಥ್ ಶಾಮನೂರು ಮಿಂಚು
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಂಚೆ ಮತಗಳ ಎಣಿಕೆಯಲ್ಲೂ ಮೇಲುಗೈ ಸಾಧಿಸಿದ್ದ ಕಾಂಗ್ರೆಸ್, ಇದೀಗ ಇವಿಎಂ ಎಣಿಕೆಯಲ್ಲೂ ಮುನ್ನಡೆ ಮುಂದುವರಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಅವರು ಬಿಜೆಪಿಯ ಶ್ರೀನಿವಾಸ್ ದಾಸಕರಿಯಪ್ಪ ಅವರಿಗಿಂತ 317 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ. ಶಾಮನೂರು ಕುಟುಂಬದ ವರ್ಚಸ್ಸು ಇಲ್ಲಿ ಮತ್ತೆ ಕೆಲಸ ಮಾಡಿದಂತೆ ಕಾಣುತ್ತಿದೆ.
ಬಾಗಲಕೋಟೆಯಲ್ಲೂ ಕಾಂಗ್ರೆಸ್ಗೆ ಬಲ :
ಆರಂಭದಲ್ಲಿ ಅಂಚೆ ಮತಗಳ ಎಣಿಕೆ ವೇಳೆ ಬಿಜೆಪಿ ಮುನ್ನಡೆ ಕಾಣಿಸಿಕೊಂಡಿದ್ದ ಬಾಗಲಕೋಟೆ ಕ್ಷೇತ್ರದಲ್ಲಿ, ಇವಿಎಂ ಎಣಿಕೆ ಆರಂಭವಾಗುತ್ತಿದ್ದಂತೆ ಪರಿಸ್ಥಿತಿ ಬದಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಬಿಜೆಪಿಯ ವೀರಣ್ಣ ಚರಂತಿಮಠ ಅವರಿಗಿಂತ ಮುನ್ನಡೆ ಸಾಧಿಸಿದ್ದಾರೆ. ಇದರಿಂದ ಬಾಗಲಕೋಟೆ ಕಣದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಮಧ್ಯಾಹ್ನದ ವೇಳೆಗೆ ಅಂತಿಮ ಫಲಿತಾಂಶ ಹೊರಬೀಳಲಿದೆ.
ಮತ ಎಣಿಕೆ ಕೇಂದ್ರದಲ್ಲಿ ಬಿಗಿ ಭದ್ರತೆ :
ದಾವಣಗೆರೆಯ ಡಿಆರ್ಆರ್ ಕಾಲೇಜು ಮತ್ತು ಬಾಗಲಕೋಟೆಯ ತೋಟಗಾರಿಕೆ ವಿವಿಯಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಸಿಸಿಟಿವಿ ಕಣ್ಗಾವಲಿನಲ್ಲಿ ಪ್ರಕ್ರಿಯೆ ಸಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು ಈಗಾಗಲೇ ಎರಡೂ ಕ್ಷೇತ್ರಗಳಲ್ಲಿ ಸಂಭ್ರಮಾಚರಣೆಗೆ ಸಿದ್ಧತೆ ನಡೆಸುತ್ತಿದ್ದಾರೆ.





