ಬೆಂಗಳೂರು, ಜುಲೈ 27: ಕರ್ನಾಟಕದ ರಾಜಕೀಯ ವಲಯದಲ್ಲಿ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ಚರ್ಚೆ ಮತ್ತೆ ಜೋರಾಗಿದೆ.. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಖಾಲಿ ಇರುವ ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಕುರಿತು ಇಂದು ಹಾಗೂ ನಾಳೆ ದೆಹಲಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸೇರಿದಂತೆ ರಾಜ್ಯ ಕಾಂಗ್ರೆಸ್ನ ಪ್ರಮುಖ ನಾಯಕರು ದೆಹಲಿಗೆ ತೆರಳುತ್ತಿರುವ ಹಿನ್ನೆಲೆ ಸಚಿವ ಸಂಪುಟ ವಿಸ್ತರಣೆ ವಿಚಾರ ಅಂತಿಮ ಹಂತ ತಲುಪಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಕಳೆದ ವಾರ ನಡೆದ ನೀಟ್ ಪರೀಕ್ಷೆ ಸಂಬಂಧಿತ ಪ್ರತಿಭಟನೆ ಹಾಗೂ ಕಾಂಗ್ರೆಸ್ ಹೈಕಮಾಂಡ್ ನಾಯಕರ ನಿರತ ಕಾರ್ಯಕ್ರಮಗಳ ಕಾರಣ ಸಂಪುಟ ವಿಸ್ತರಣೆ ಕುರಿತ ಚರ್ಚೆ ಮುಂದೂಡಲಾಗಿತ್ತು. ಇದೀಗ ದೆಹಲಿಯಲ್ಲಿ ನಡೆಯಲಿರುವ ಸರಣಿ ಸಭೆಗಳಲ್ಲಿ ಈ ವಿಷಯ ಪ್ರಮುಖ ಅಜೆಂಡಾವಾಗುವ ಸಾಧ್ಯತೆ ಇದೆ. ಹೈಕಮಾಂಡ್ ಒಪ್ಪಿಗೆ ನೀಡಿದರೆ ಇದೇ ವಾರ ಜುಲೈ 29 ಅಥವಾ 30ರಂದು ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಯಬಹುದು ಎಂಬ ಮಾಹಿತಿ ಕಾಂಗ್ರೆಸ್ ಮೂಲಗಳಿಂದ ಲಭ್ಯವಾಗಿದೆ.
ಸಂಪುಟ ವಿಸ್ತರಣೆಯ ಜೊತೆಗೆ ಇಬ್ಬರು ಉಪಮುಖ್ಯಮಂತ್ರಿಗಳ ನೇಮಕದ ಕುರಿತ ಚರ್ಚೆಯೂ ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ. ಆದರೆ ಈ ಬಗ್ಗೆ ಕಾಂಗ್ರೆಸ್ ನಾಯಕತ್ವದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಅಂತಿಮ ನಿರ್ಧಾರ ಹೈಕಮಾಂಡ್ ಸಭೆಯ ಬಳಿಕವೇ ಪ್ರಕಟವಾಗುವ ಸಾಧ್ಯತೆ ಇದೆ.
ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ ತೀವ್ರ
ಸಂಪುಟ ವಿಸ್ತರಣೆಯ ಸುದ್ದಿ ಬಲವಾಗುತ್ತಿದ್ದಂತೆ ಸಚಿವ ಸ್ಥಾನಾಕಾಂಕ್ಷಿಗಳ ಚಟುವಟಿಕೆಗಳೂ ಹೆಚ್ಚಾಗಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ತೆರಳುವ ಮುನ್ನವೇ ಬೆಂಗಳೂರಿನ ಅವರ ನಿವಾಸಕ್ಕೆ ಹಲವು ಕಾಂಗ್ರೆಸ್ ಶಾಸಕರು ಭೇಟಿ ನೀಡಿ ಸಚಿವ ಸ್ಥಾನಕ್ಕೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.
ಹಂಪನಗೌಡ ಬಾದರ್ಲಿ, ದದ್ದಲ್, ಅಜಯ್ ಸಿಂಗ್, ರಹೀಂ ಖಾನ್ ಸೇರಿದಂತೆ ಹಲವು ಶಾಸಕರು ಖರ್ಗೆ ಅವರನ್ನು ಭೇಟಿ ಮಾಡಿ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಇನ್ನೊಂದೆಡೆ ಬಿ. ನಾಗೇಂದ್ರ, ವಿಜಯಾನಂದ ಕಾಶಪ್ಪನವರ್ ಹಾಗೂ ರಾಘವೇಂದ್ರ ಹಿಟ್ನಾಳ್ ಸೇರಿದಂತೆ ಕೆಲವು ನಾಯಕರು ನೇರವಾಗಿ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಮೂಲಕ ತಮ್ಮ ಪರವಾಗಿ ಲಾಬಿ ನಡೆಸುತ್ತಿದ್ದಾರೆ.
ನಾಯಕರಿಂದ ವಿಭಿನ್ನ ಪ್ರತಿಕ್ರಿಯೆಗಳು
ಸಚಿವ ಸ್ಥಾನ ಕುರಿತು ಕೇಳಲಾದ ಪ್ರಶ್ನೆಗೆ ಚಿತ್ರದುರ್ಗ ಶಾಸಕ ಶಿವಗಂಗಾ ಬಸವರಾಜ ಅವರು ವಿಶಿಷ್ಟವಾಗಿ ಪ್ರತಿಕ್ರಿಯಿಸಿದ್ದಾರೆ. “ನಾನು ಪಕ್ಷದಲ್ಲಿ ಶಿವನ ಮುಂದಿನ ಬಸವನಿದ್ದಂತೆ. ಡಿಕೆ ಶಿವಕುಮಾರ್ ಅವರನ್ನು ಗಣಪತಿಯಂತೆ ಸುತ್ತುತ್ತೇನೆ. ಸಚಿವ ಸ್ಥಾನ ಕೊಟ್ಟರೆ ಗುಡ್, ಕೊಡದಿದ್ದರೆ ವೆರಿ ಗುಡ್” ಎಂದು ಹಾಸ್ಯಮಿಶ್ರಿತವಾಗಿ ಹೇಳುವ ಮೂಲಕ ಪಕ್ಷದ ನಾಯಕತ್ವದ ಮೇಲಿನ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ಸಚಿವ ಎಂ.ಬಿ. ಪಾಟೀಲ್ ವಿಜಯಪುರ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ನೀಡಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ತಮಗೆ ಉಪಮುಖ್ಯಮಂತ್ರಿ ಸ್ಥಾನ ಸಿಗಲಿದೆ ಎಂಬ ಸುದ್ದಿಯನ್ನು ಅವರು ತಳ್ಳಿ ಹಾಕಿದ್ದು, ಈ ಕುರಿತು ಯಾವುದೇ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯದ ಸಂಸದರೊಂದಿಗೆ ಡಿಕೆಶಿ ಸಭೆ
ಸಂಸತ್ ಮುಂಗಾರು ಅಧಿವೇಶನದ ಹಿನ್ನೆಲೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಸಂಜೆ 6.30ಕ್ಕೆ ದೆಹಲಿಯ ಕರ್ನಾಟಕ ಭವನದಲ್ಲಿ ರಾಜ್ಯದ ಸಂಸದರ ಸಭೆ ಕರೆದಿದ್ದಾರೆ. ರಾಜ್ಯಕ್ಕೆ ಸಂಬಂಧಿಸಿದ ಅಭಿವೃದ್ಧಿ ಯೋಜನೆಗಳು, ಕೇಂದ್ರದಿಂದ ಬಾಕಿ ಇರುವ ಅನುದಾನಗಳು ಹಾಗೂ ಆಡಳಿತಾತ್ಮಕ ವಿಷಯಗಳ ಕುರಿತು ಚರ್ಚೆ ನಡೆಸುವ ಉದ್ದೇಶದಿಂದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಸಂಸದರಿಗೆ ಆಹ್ವಾನ ನೀಡಲಾಗಿದೆ.
ಈ ಸಭೆಯ ಬಳಿಕ ಮಂಗಳವಾರ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ನಡೆಯಲಿರುವ ಚರ್ಚೆಯೇ ಸಚಿವ ಸಂಪುಟ ವಿಸ್ತರಣೆಯ ಭವಿಷ್ಯವನ್ನು ನಿರ್ಧರಿಸುವ ಸಾಧ್ಯತೆ ಇದೆ.
ಸಂಪುಟ ವಿಸ್ತರಣೆ, ಸಚಿವ ಸ್ಥಾನಾಕಾಂಕ್ಷಿಗಳ ಲಾಬಿ, ಉಪಮುಖ್ಯಮಂತ್ರಿ ಹುದ್ದೆಗಳ ಕುರಿತು ನಡೆಯುತ್ತಿರುವ ಚರ್ಚೆಗಳು ಹಾಗೂ ದೆಹಲಿಯಲ್ಲಿ ನಡೆಯಲಿರುವ ಸರಣಿ ಸಭೆಗಳ ಹಿನ್ನೆಲೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಹೆಚ್ಚಾಗಿದೆ.
