ಬೆಂಗಳೂರು, ಜುಲೈ 18: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಸಂಪುಟ ವಿಸ್ತರಣೆಯ ಅಂತಿಮ ಹಂತದ ಚರ್ಚೆ ಇದಾಗಿದ್ದು, ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಹಾಗೂ ಹೈಕಮಾಂಡ್ ಸೂಚನೆಗಳ ಕುರಿತು ಸಮಾಲೋಚನೆ ನಡೆದಿದೆ ಎನ್ನಲಾಗಿದೆ.
ಇತ್ತೀಚೆಗೆ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ನಡೆದ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆದಿತ್ತು. ಆದರೆ ಆ ಸಭೆಯ ನಡುವೆಯೇ ಮಲ್ಲಿಕಾರ್ಜುನ ಖರ್ಗೆ ತುರ್ತಾಗಿ ಬೆಂಗಳೂರಿಗೆ ವಾಪಸ್ಸಾಗಿದ್ದರು. ಇದೀಗ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸಚಿವ ಸ್ಥಾನಕ್ಕೆ ಪರಿಗಣಿಸಲಾದ ಹೆಸರುಗಳ ಬಗ್ಗೆ ಅಂತಿಮ ಅಭಿಪ್ರಾಯ ವಿನಿಮಯ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಹಿರಿಯ ನಾಯಕರ ಪಟ್ಟಿಗೆ ಹೈಕಮಾಂಡ್ ಕತ್ತರಿ?
ಸಿಎಂ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧಪಡಿಸಿದ್ದ ಪಟ್ಟಿಯಲ್ಲಿ 11 ಮಂದಿ ಹಿರಿಯ ಮಾಜಿ ಸಚಿವರ ಹೆಸರುಗಳಿದ್ದವು ಎನ್ನಲಾಗಿದೆ. ಆದರೆ ಈ ಪಟ್ಟಿಯಲ್ಲಿ ಶೇ.50ರಷ್ಟು ಕಡಿತಗೊಳಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ ಎಂಬ ಮಾಹಿತಿ ಪಕ್ಷದ ವಲಯದಲ್ಲಿ ಕೇಳಿಬರುತ್ತಿದೆ. ಹೀಗಾಗಿ ಯಾವ ಹಿರಿಯ ನಾಯಕರನ್ನು ಕೈಬಿಡಬೇಕು ಮತ್ತು ಯಾರಿಗೆ ಅವಕಾಶ ನೀಡಬೇಕು ಎಂಬ ಮಹತ್ವದ ನಿರ್ಧಾರ ಈಗ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ನಿಂತಿದೆ.
ಇದರ ಜೊತೆಗೆ ಸಚಿವ ಸ್ಥಾನಕ್ಕೆ ಪರಿಗಣನೆಯಲ್ಲಿರುವ ಉಳಿದ 32 ಶಾಸಕರಲ್ಲಿ ಆದ್ಯತೆ ಯಾರಿಗೆ ನೀಡಬೇಕು ಎಂಬ ವಿಚಾರವೂ ಸಭೆಯಲ್ಲಿ ಚರ್ಚೆಗೆ ಬಂದಿರಬಹುದು ಎಂದು ರಾಜಕೀಯ ವಲಯ ಅಂದಾಜಿಸಿದೆ. ಅಂತಿಮ ಪಟ್ಟಿಯನ್ನು ರಾಹುಲ್ ಗಾಂಧಿ ಅವರೊಂದಿಗೆ ಸಮಾಲೋಚಿಸಿ ನಿರ್ಧರಿಸುವ ಸಾಧ್ಯತೆಯಿದೆ.
ಸಚಿವ ಸ್ಥಾನಕ್ಕಾಗಿ ಲಾಬಿ ಜೋರಾಗಿದೆ
ಸಂಪುಟ ವಿಸ್ತರಣೆ ಚರ್ಚೆ ತೀವ್ರಗೊಳ್ಳುತ್ತಿದ್ದಂತೆ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಶಾಸಕರ ಲಾಬಿಯೂ ಹೆಚ್ಚಾಗಿದೆ. ಶಾಸಕ ಅಜಯ್ ಸಿಂಗ್ ಅವರು ಖರ್ಗೆ ಅವರನ್ನು ಭೇಟಿ ಮಾಡಿ ತಮ್ಮನ್ನು ಸಚಿವ ಸ್ಥಾನಕ್ಕೆ ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಅದೇ ರೀತಿ ಶಾಸಕ ಎಂ. ಕೃಷ್ಣಪ್ಪ ಕೂಡ ಸಚಿವ ಸ್ಥಾನಕ್ಕಾಗಿ ತಮ್ಮ ಬೇಡಿಕೆಯನ್ನು ಖರ್ಗೆ ಮುಂದೆ ಮಂಡಿಸಿದ್ದಾರೆ.
ಸಂಪುಟ ವಿಸ್ತರಣೆಯ ದಿನಾಂಕ ಇನ್ನೂ ಅಧಿಕೃತವಾಗಿ ಘೋಷಣೆಯಾಗದಿದ್ದರೂ, ಹೈಕಮಾಂಡ್ ಮಟ್ಟದಲ್ಲಿ ಅಂತಿಮ ಹಂತದ ಚರ್ಚೆಗಳು ನಡೆಯುತ್ತಿರುವುದರಿಂದ ಶೀಘ್ರದಲ್ಲೇ ಹೊಸ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಬೀಳುವ ಸಾಧ್ಯತೆ ಇದೆ. ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
