ಬೆಂಗಳೂರು (ಆ.3): ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆಗೆ ಅಂತಿಮವಾಗಿ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದ ಪ್ರಮಾಣವಚನ ಸ್ವೀಕಾರ ಸಮಾರಂಭ ಇಂದು (ಸೋಮವಾರ) ಸಂಜೆ 05 ಗಂಟೆಗೆ ನಡೆಯಲಿದೆ ಎಂದು ಲೋಕಭವನ ಮೂಲಗಳು ತಿಳಿಸಿವೆ. ಆದರೆ, ಆರಂಭದಲ್ಲಿ ಸಮಾರಂಭ ಸಂಜೆ 4.05 ಕ್ಕೆ ನಡೆಯಬೇಕಿತ್ತು. ಆದರೆ, ಕೆಲವು ತಾಂತ್ರಿಕ ಹಾಗೂ ರಾಜಕೀಯ ಕಾರಣಗಳಿಂದ ಪ್ರಮಾಣವಚನವನ್ನು ಒಂದು ಗಂಟೆ ವಿಳಂಬಗೊಳಿಸಿ ಸಂಜೆ 5 ಗಂಟೆಗೆ ನಿಗದಿಪಡಿಸಲಾಗಿದೆ.
ಡೆಲ್ಲಿ ಸಭೆಯಲ್ಲಿ ಅಂತಿಮ ಮುದ್ರೆ
ಇದಕ್ಕೂ ಮುನ್ನ ನವದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಮಹತ್ವದ ಸಭೆ ನಡೆಯಿತು. ಸುಮಾರು 45 ನಿಮಿಷಗಳ ಕಾಲ ನಡೆದ ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಪುಟ ಸೇರಲಿರುವ ನೂತನ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಒತ್ತಿದ್ದಾರೆ. ಈ ಸಭೆಯಲ್ಲಿ ಸಚಿವರ ಆಯ್ಕೆ, ಹಂಚಿಕೆ ಮತ್ತು ಇತರೆ ರಾಜಕೀಯ ಸಮೀಕರಣಗಳ ಕುರಿತು ವಿವರವಾದ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
19 ಮಂದಿ ಸಚಿವರ ಪ್ರಮಾಣವಚನ
ಮೂಲತಃ 20 ಮಂದಿ ಶಾಸಕರಿಗೆ ಸಚಿವ ಸ್ಥಾನ ನೀಡುವ ಯೋಜನೆಯಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಕೆಲವು ಲೆಕ್ಕಾಚಾರಗಳಿಂದಾಗಿ 19 ಮಂದಿ ಶಾಸಕರು ಮಾತ್ರ ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಂಚಿತರಾದ ಶಾಸಕರು ಮತ್ತು ಅವರ ಬೆಂಬಲಿಗರಲ್ಲಿ ಅಸಮಾಧಾನ ಮೂಡುವ ಸಾಧ್ಯತೆಯಿದೆ.
ಗಾಯತ್ರಿ ಶಾಂತೇಗೌಡ ಹೆಸರಲ್ಲೇ ಗೊಂದಲ
ಸಚಿವ ಪಟ್ಟಿಯಲ್ಲಿ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ಪುತ್ರಿ ಗಾಯತ್ರಿ ಶಾಂತೇಗೌಡ ಅವರ ಹೆಸರು ಸೇರ್ಪಡೆಯಾಗಿರುವುದು ಗೊಂದಲಕ್ಕೆ ಕಾರಣವಾಗಿದೆ. ಆರಂಭದಲ್ಲಿ ಅವರ ಹೆಸರನ್ನು ಪಟ್ಟಿಯಲ್ಲಿ ಸೇರಿಸಲಾಗಿತ್ತು. ಆದರೆ, ಅನಂತರ ಸಿಎಂ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಗಾಯತ್ರಿ ಅವರ ಬದಲು ಬೇರೊಬ್ಬರ ಹೆಸರನ್ನು ಸೇರಿಸುವಂತೆ ಒತ್ತಡ ಹೇರಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆ ಪ್ರಮಾಣವಚನದ ಸಮಯವನ್ನು ಬದಲಾಯಿಸಲಾಗಿದೆ ಎಂದು ರಾಜಕೀಯ ವಲಯದಲ್ಲಿ ಭಾರೀ ಗುಸುಗುಸು ಕೇಳಿಬರುತ್ತಿದೆ. ಅಂತಿಮವಾಗಿ ಯಾರ ಹೆಸರು ಪಟ್ಟಿಯಲ್ಲಿ ಉಳಿಯುತ್ತದೆ ಎಂಬುದು ಕುತೂಹಲಕಾರಿಯಾಗಿದೆ.
ಲೋಕಭವನದಲ್ಲಿ ಭಾರೀ ಸಿದ್ಧತೆ
ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು ಹಾಗೂ ಅತಿಥಿಗಳಿಗಾಗಿ ಹೊರಭಾಗದಲ್ಲಿ ಜರ್ಮನ್ ಟೆಂಟ್ ಅಳವಡಿಸಲಾಗಿದೆ. ಲೋಕೋಪಯೋಗಿ ಇಲಾಖೆಯು ಮೂರು ದಿನಗಳ ಹಿಂದೆಯೇ ಸಿದ್ಧತಾ ಕಾರ್ಯಗಳನ್ನು ಆರಂಭಿಸಿತ್ತು. ಭದ್ರತಾ ದೃಷ್ಟಿಯಿಂದ ಸುಮಾರು 2,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಲೋಕಭವನ ಸುತ್ತಮುತ್ತ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.





