ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ

ಸ್ವ (47)

ಬೆಂಗಳೂರು, ಜುಲೈ 22: ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೊಮ್ಮೆ ಮುಂದೂಡಿಕೆಯಾಗಿದ್ದು, ನಿಗದಿಯಾಗಿದ್ದ ದಿನವೇ ಪ್ರಮಾಣವಚನ ಕಾರ್ಯಕ್ರಮ ನಡೆಯದಂತಾಗಿದೆ. ಸಚಿವರ ಅಂತಿಮ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಇನ್ನೂ ಅನುಮೋದನೆ ನೀಡದ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಪ್ರಕ್ರಿಯೆ ವಿಳಂಬವಾಗಿದೆ.

ಸಚಿವ ಸಂಪುಟ ವಿಸ್ತರಣೆ ಕುರಿತು ಅಂತಿಮ ಚರ್ಚೆ ನಡೆಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ದೆಹಲಿಗೆ ತೆರಳಿದ್ದರು. ಆದರೆ ಮಂಗಳವಾರ ಕಾಂಗ್ರೆಸ್ ನಾಯಕರು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ವಿರೋಧಿಸಿ ನಡೆಸಿದ ಪ್ರತಿಭಟನೆಯಲ್ಲಿ ನಿರತರಾಗಿದ್ದ ಕಾರಣ, ಹೈಕಮಾಂಡ್ ಜೊತೆ ನಡೆಯಬೇಕಿದ್ದ ಮಹತ್ವದ ಸಭೆ ಮುಂದೂಡಲ್ಪಟ್ಟಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಈ ಕುರಿತು ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಗಳವಾರ ನಡೆಯಬೇಕಿದ್ದ ಸಭೆ ನಡೆಯದ ಕಾರಣ ಬುಧವಾರ ನಡೆಯಬೇಕಿದ್ದ ನೂತನ ಸಚಿವರ ಪ್ರಮಾಣವಚನ ಸಮಾರಂಭವನ್ನೂ ಮುಂದೂಡಲಾಗಿದೆ ಎಂದು ಸ್ಪಷ್ಟಪಡಿಸಿದರು. ರಾಜ್ಯಪಾಲರ ಅನುಮತಿ ಪಡೆದು ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಲಾಗಿದ್ದರೂ, ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ ಎಂದರು.

“ನಮ್ಮ ಪಕ್ಷದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ನಮ್ಮ ಅಭಿಪ್ರಾಯಗಳನ್ನು ಪಡೆದು, ಹೊಸ ಮುಖಗಳು, ಪ್ರಾದೇಶಿಕ ಸಮತೋಲನ, ಜಿಲ್ಲಾವಾರು ಪ್ರಾತಿನಿಧ್ಯ ಸೇರಿದಂತೆ ವಿವಿಧ ಅಂಶಗಳನ್ನು ಪರಿಗಣಿಸಿ ಸಚಿವರ ಆಯ್ಕೆ ಮಾಡಲಾಗುತ್ತದೆ” ಎಂದು ಮುಖ್ಯಮಂತ್ರಿ ಹೇಳಿದರು.

ದೆಹಲಿಯ ಪ್ರತಿಭಟನೆಯ ವೇಳೆ ನಡೆದ ಘಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಪೊಲೀಸರು ತಮ್ಮನ್ನು ಎಳೆದೊಯ್ಯಲು ಮುಂದಾದ ಸಂದರ್ಭದಲ್ಲಿ ರಾಹುಲ್ ಗಾಂಧಿ ಮಧ್ಯಪ್ರವೇಶಿಸಿ, “ಅವರು ಮುಖ್ಯಮಂತ್ರಿ, ಅವರನ್ನು ಮುಟ್ಟಬೇಡಿ” ಎಂದು ಪೊಲೀಸರಿಗೆ ಸೂಚನೆ ನೀಡಿದರು ಎಂದು ವಿವರಿಸಿದರು. ನಂತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸಭೆ ನಡೆಸಲು ಸಾಧ್ಯವಾಗಲಿಲ್ಲ ಎಂದರು.

ಸಚಿವ ಸಂಪುಟದಲ್ಲಿ ಹೊಸ ಮಾನದಂಡಗಳು ಅಥವಾ ಅಚ್ಚರಿಯ ಆಯ್ಕೆಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಕಾಂಗ್ರೆಸ್ ಪಕ್ಷದ ಹಿತದೃಷ್ಟಿಯಿಂದ ಅಗತ್ಯವಾದ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ. ಸಚಿವ ಸಂಪುಟ ರಚನೆ ಕುರಿತು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ” ಎಂದು ಹೇಳಿದರು.

ಸಚಿವ ಸ್ಥಾನಗಳ ಭರ್ತಿ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಉಳಿದಿರುವ ಎಲ್ಲ ಖಾಲಿ ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಆಸೆ ಇದೆ ಎಂದು ತಿಳಿಸಿದರು. “ಸಚಿವ ಸ್ಥಾನಗಳನ್ನು ಖಾಲಿ ಇಡುವುದರಲ್ಲಿ ಅರ್ಥವಿಲ್ಲ. ಅವಕಾಶ ದೊರೆತರೆ ಇಂದೇ ಪಟ್ಟಿಯನ್ನು ಅಂತಿಮಗೊಳಿಸಲು ನಾನು ಸಿದ್ಧನಿದ್ದೇನೆ ಎಂದರು.

ಯುವ ಶಾಸಕರಿಗೆ ಅವಕಾಶ ಸಿಗುವ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗೆ, “ನನಗೆ ಎಲ್ಲಾ 136 ಶಾಸಕರು ಹಾಗೂ ಪರಿಷತ್ ಸದಸ್ಯರು ಸಮಾನರು. ಪ್ರತಿಯೊಬ್ಬರಿಗೂ ಅರ್ಹತೆ ಇದೆ. ಯುವಕರಿಗೆ ಅವಕಾಶ ನೀಡಬೇಕು ಎಂಬುದು ನನ್ನ ವೈಯಕ್ತಿಕ ಆಶಯ. ಆದರೆ ಅಂತಿಮವಾಗಿ ಹೈಕಮಾಂಡ್ ಮಾರ್ಗದರ್ಶನದಂತೆ ನಿರ್ಧಾರ ಕೈಗೊಳ್ಳಲಾಗುತ್ತದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

Exit mobile version