ರಾಜ್ಯದಲ್ಲೂ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ಕಡಿವಾಣ?

Untitled design 2026 01 31T091602.112

ಬೆಂಗಳೂರು: ಮಕ್ಕಳು ಮತ್ತು ಅಪ್ರಾಪ್ತರ ಮೇಲೆ ಸಾಮಾಜಿಕ ಜಾಲತಾಣಗಳು ಬೀರುತ್ತಿರುವ ದುಷ್ಪರಿಣಾಮಗಳ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿರುವ ನಡುವೆಯೇ, ಕರ್ನಾಟಕದಲ್ಲೂ ಮಕ್ಕಳ ಸಾಮಾಜಿಕ ಜಾಲತಾಣ ಬಳಕೆಗೆ ಕಡಿವಾಣ ಹೇರುವ ಕುರಿತು ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ. ತೆಲಂಗಾಣ ರಾಜ್ಯದ ನಂತರ ಇದೀಗ ಕರ್ನಾಟಕದಲ್ಲೂ ‘ಡಿಜಿಟಲ್ ಡಿಟಾಕ್ಸಿಫಿಕೇಷನ್’ ಎಂಬ ಹೊಸ ಪರಿಕಲ್ಪನೆಗೆ ಚರ್ಚೆ ಆರಂಭವಾಗಿದೆ.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವೇಳೆ ಈ ವಿಷಯ ಪ್ರಸ್ತಾಪವಾಗಿದ್ದು, ಐಟಿ–ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಮಕ್ಕಳ ಸಾಮಾಜಿಕ ಜಾಲತಾಣ ಬಳಕೆಯಿಂದ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಬಿಜೆಪಿ ಸದಸ್ಯ ಸುರೇಶ್ ಕುಮಾರ್ ಅವರು ಪ್ರಶ್ನೆ ಎತ್ತಿದ ಸಂದರ್ಭದಲ್ಲಿ, ಸರ್ಕಾರ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂಬ ಭರವಸೆ ನೀಡಲಾಗಿದೆ.

ಸಾಮಾಜಿಕ ಜಾಲತಾಣದಿಂದ ಮಕ್ಕಳ ಮೇಲೆ ದುಷ್ಪರಿಣಾಮ

ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಮಕ್ಕಳಲ್ಲಿ ಗಮನ ವಿಚಲನೆ, ಮನೋವೈಕಲ್ಯ, ನಿದ್ರಾಭಂಗ, ವ್ಯಸನದಂತಹ ಲಕ್ಷಣಗಳು ಕಾಣಿಸುತ್ತಿವೆ. ಶಿಕ್ಷಣದಲ್ಲಿ ಆಸಕ್ತಿ ಕುಂಠಿತವಾಗುವುದು, ನೈತಿಕ ಮೌಲ್ಯಗಳ ಮೇಲೆ ಪರಿಣಾಮ ಬೀರುವುದರ ಜೊತೆಗೆ, ಅನಗತ್ಯ ಮತ್ತು ಅಶ್ಲೀಲ ವಿಷಯಗಳಿಗೆ ಮಕ್ಕಳು ತಲುಪುತ್ತಿರುವುದು ದೊಡ್ಡ ಕಳವಳಕ್ಕೆ ಕಾರಣವಾಗಿದೆ. ಜಾಲತಾಣಗಳ ಮೂಲಕ ಮಕ್ಕಳ ದುರ್ಬಳಕೆ, ಆನ್‌ಲೈನ್ ಅಪರಾಧಗಳು ಮತ್ತು ಸೈಬರ್ ಬುಲ್ಲಿಯಿಂಗ್ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪೋಷಕರು ಹಾಗೂ ತಜ್ಞರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ವಿಧಾನಸಭೆಯಲ್ಲಿ ಎದ್ದ ಪ್ರಶ್ನೆ

ವಿಧಾನಸಭೆಯಲ್ಲಿ ಮಾತನಾಡಿದ ಬಿಜೆಪಿ ಸದಸ್ಯ ಸುರೇಶ್ ಕುಮಾರ್, “ಸಣ್ಣ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ವಿಷಯಗಳನ್ನು ವೀಕ್ಷಿಸುತ್ತಿದ್ದಾರೆ. ಇದರಿಂದ ಅವರ ಮನಸ್ಸು ತಪ್ಪು ದಾರಿಗೆ ಹೋಗುತ್ತಿದೆ. ಸರ್ಕಾರ ಈ ಕುರಿತು ಗಂಭೀರ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಐಟಿ–ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, “ಇದು ಅತ್ಯಂತ ಗಂಭೀರ ವಿಷಯ. ಮಕ್ಕಳನ್ನು ಸಂಪೂರ್ಣವಾಗಿ ಜಾಲತಾಣದಿಂದ ದೂರವಿಡುವುದಕ್ಕಿಂತ, ಜವಾಬ್ದಾರಿಯುತ ಬಳಕೆಯ ಕುರಿತು ಜಾಗೃತಿ ಮೂಡಿಸುವುದು ಮುಖ್ಯ. ಈ ದಿಸೆಯಲ್ಲಿ ‘ಡಿಜಿಟಲ್ ಡಿಟಾಕ್ಸಿಫಿಕೇಷನ್’ ಕುರಿತು ಚರ್ಚೆ ನಡೆಯುತ್ತಿದೆ” ಎಂದು ತಿಳಿಸಿದರು.

ಪ್ರಿಯಾಂಕ್ ಖರ್ಗೆ ಅವರ ಪ್ರಕಾರ, ಮೆಟಾ (Meta) ಸಂಸ್ಥೆಯೊಂದಿಗೆ ಸಹಕಾರ ಸಾಧಿಸಿ, ಕೃತಕ ಬುದ್ಧಿಮತ್ತೆ (AI) ಮೂಲಕ ಸಾಮಾಜಿಕ ಜಾಲತಾಣದ ವೀಡಿಯೋ ಮತ್ತು ವಿಷಯಗಳನ್ನು ಪರಿಶೀಲಿಸುವ ವ್ಯವಸ್ಥೆ ರೂಪಿಸುವ ಚಿಂತನೆ ನಡೆಯುತ್ತಿದೆ. ಇದರಿಂದ ಮಕ್ಕಳಿಗೆ ಹಾನಿಕಾರಕ ವಿಷಯ ತಲುಪದಂತೆ ತಡೆಯುವ ಉದ್ದೇಶವಿದೆ.

ಫಿನ್ಲೆಂಡ್, ಆಸ್ಟ್ರೇಲಿಯಾ ಮತ್ತು ಫ್ರಾನ್ಸ್‌ ದೇಶಗಳಲ್ಲಿ ಈಗಾಗಲೇ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ತೆಲಂಗಾಣದಲ್ಲೂ ಇದೇ ರೀತಿಯ ಕ್ರಮ ಜಾರಿಗೆ ತರಲು ಚಿಂತನೆ ನಡೆದಿದೆ. ಇದರ ಬೆನ್ನಲ್ಲೇ ಕರ್ನಾಟಕ ಸರ್ಕಾರವೂ ಅಂತಹ ಮಾದರಿಗಳನ್ನು ಅಧ್ಯಯನ ಮಾಡುತ್ತಿದೆ.

3 ಲಕ್ಷ ವಿದ್ಯಾರ್ಥಿಗಳಿಗೆ ಜಾಗೃತಿ

ರಾಜ್ಯದಲ್ಲಿ ಮೊದಲ ಹಂತವಾಗಿ 3 ಲಕ್ಷ ವಿದ್ಯಾರ್ಥಿಗಳು ಮತ್ತು 1 ಲಕ್ಷ ಶಿಕ್ಷಕರಿಗೆ ಸಾಮಾಜಿಕ ಜಾಲತಾಣದ ಜವಾಬ್ದಾರಿಯುತ ಬಳಕೆಯ ಕುರಿತು ಜಾಗೃತಿ ಮೂಡಿಸಲು ಸರ್ಕಾರ ನಿರ್ಧರಿಸಿದೆ.

ಈ ವಿಷಯ ಇನ್ನೂ ಚರ್ಚೆಯ ಹಂತದಲ್ಲಿದ್ದು, ವಿವಿಧ ತಜ್ಞರು, ಶಿಕ್ಷಣ ಸಂಸ್ಥೆಗಳು ಮತ್ತು ಪೋಷಕರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Exit mobile version