ಶಿವಮೊಗ್ಗ: ಇರಾನ್ ಮೇಲೆ ಅಮೆರಿಕ ನಡೆಸಿರುವ ದಾಳಿ ಸಂಪೂರ್ಣ ಅನಗತ್ಯ ಮತ್ತು ಖಂಡನೀಯ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಸಂತಾಪ ಸೂಚಿಸಿದ ಅವರು, ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ..
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮನಯ್ಯ ಅವರು, “ಅಮೆರಿಕ ನಡೆಸಿರುವ ದಾಳಿ ಅನಗತ್ಯ. ಒಂದೆಡೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶಾಂತಿಯ ಮಂತ್ರ ಪಠಿಸುತ್ತಾರೆ, ಇನ್ನೊಂದೆಡೆ ಯುದ್ಧ ಮಾಡುತ್ತಾರೆ. ಅಮೆರಿಕದ ಈ ವಿರೋಧಾಭಾಸದ ನಿಲುವನ್ನು ನಾನು ಖಂಡಿಸುತ್ತೇನೆ” ಎಂದು ಸ್ಪಷ್ಟವಾಗಿ ಹೇಳಿದರು
ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ
ಇರಾನ್–ಅಮೆರಿಕಾ ಸಂಘರ್ಷದ ಹಿನ್ನೆಲೆ ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ, ವಿಶೇಷವಾಗಿ ಕನ್ನಡಿಗರ ಸುರಕ್ಷತೆ ಕುರಿತು ರಾಜ್ಯ ಸರ್ಕಾರ ಚಿಂತಿತವಾಗಿದೆ ಎಂದು ಸಿಎಂ ಹೇಳಿದರು. “ರಾಜ್ಯ ಸರ್ಕಾರವು ಕೇಂದ್ರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಅಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ವಾಪಸ್ಸು ಕರೆತರಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಭರವಸೆ ನೀಡಿದರು.
ಬಳ್ಳಾರಿ ಜಿಲ್ಲೆಯ ಸುಮಾರು 30 ಮಂದಿ ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಮಾಹಿತಿ ದೊರೆತಿದ್ದು, ಅವರನ್ನು ಸುರಕ್ಷಿತವಾಗಿ ಕರೆತರಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು. “ದುಬೈನಲ್ಲಿ ವಾಸಿಸುತ್ತಿರುವ ಭಾರತೀಯರು ಈವರೆಗೆ ಸುರಕ್ಷಿತರಾಗಿದ್ದಾರೆ ಎಂಬ ಮಾಹಿತಿ ನಮಗೆ ಲಭಿಸಿದೆ” ಎಂದು ತಿಳಿಸಿದರು.
ದುಬೈ ವಿಮಾನ ನಿಲ್ದಾಣ ಬಂದ್ -ಆತಂಕದ ಪರಿಸ್ಥಿತಿ
ಸದ್ಯ ದುಬೈ ವಿಮಾನ ನಿಲ್ದಾಣ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂಬ ಮಾಹಿತಿ ದೊರೆತಿದ್ದು, ಪರಿಸ್ಥಿತಿ ಸಾಮಾನ್ಯಗೊಂಡ ಬಳಿಕ ಅವರನ್ನು ಭಾರತಕ್ಕೆ ಕರೆತರಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು. ದುಬೈ ವಿಮಾನ ನಿಲ್ದಾಣ ಬಂದ್ ಆಗಿರುವುದು ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದೆ. ಆದರೂ ಅಲ್ಲಿರುವ ಕನ್ನಡಿಗರು ಸುರಕ್ಷಿತರಾಗಿದ್ದಾರೆ ಎಂಬ ಮಾಹಿತಿ ಸರ್ಕಾರಕ್ಕೆ ಲಭ್ಯವಾಗಿದೆ.
ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ಸ್ಥಳೀಯ ಆಯುಕ್ತರೊಂದಿಗೆ ಸಭೆ ನಡೆಸಿ, ವಿದೇಶಗಳಲ್ಲಿ ಇರುವ ಕನ್ನಡಿಗರ ಸುರಕ್ಷತೆ ಕುರಿತು ಸಮಗ್ರ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು. “ಯಾರಿಗೂ ಯಾವುದೇ ತೊಂದರೆ ಆಗದಂತೆ ನಾವು ಎಲ್ಲಾ ರೀತಿಯ ನೆರವು ನೀಡಲು ಸಿದ್ಧವಾಗಿದ್ದೇವೆ” ಎಂದು ಭರವಸೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈನಲ್ಲಿ ಇದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ ಎಂದು ಸಿಎಂ ಹೇಳಿದರು. “ತಾವು ಹೋಟೆಲ್ನಲ್ಲಿ ಸುರಕ್ಷಿತವಾಗಿದ್ದೇವೆ ಎಂದು ಭೋಜೇಗೌಡರು ತಿಳಿಸಿದ್ದಾರೆ. ಅಲ್ಲಿ ಪರಿಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ನೀಡಿದ್ದಾರೆ” ಎಂದು ವಿವರಿಸಿದರು.
