ಕರಾವಳಿಯಲ್ಲಿ ಮಳೆ ಮುನ್ಸೂಚನೆ: ಅರೆಂಜ್ ಅಲರ್ಟ್ ಘೋಷಣೆ!

Untitled design 2026 06 29T190953.871

ಬೆಂಗಳೂರು (ಜೂನ್ 29): ರಾಜ್ಯದಲ್ಲಿ ಮಳೆ ಕೊರತೆಯಿಂದ ಆತಂಕ ಎದುರಾಗಿದ್ದ ಬೆನ್ನಲ್ಲೇ ಇದೀಗ ಹವಾಮಾನ ಇಲಾಖೆ ಶುಭ ಸುದ್ದಿಯೊಂದನ್ನು ನೀಡಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 5ರವರೆಗೆ ಹಲವು ಜಿಲ್ಲೆಗಳಿಗೆ ಅರೆಂಜ್ ಅಲರ್ಟ್ ಘೋಷಿಸಲಾಗಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಾದ ದ.ಕ, ಉಡುಪಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಇಂದು ಸೋಮವಾರ ಬೆಳಗ್ಗಿನಿಂದಲೇ ಬೆಂಗಳೂರಿನ ಹಲವು ಭಾಗಗಳಲ್ಲಿ ತುಂತುರು ಮಳೆ ಆರಂಭವಾಗಿದೆ. ಕಾರ್ಪೋರೇಷನ್ ವೃತ್ತ, ಟೌನ್ ಹಾಲ್, ಕೆ.ಆರ್. ಮಾರ್ಕೆಟ್ ಸೇರಿದಂತೆ ನಗರದ ಹಲವು ಪ್ರದೇಶಗಳಲ್ಲಿ ಮಳೆಯಾಗಿದ್ದು, ವಾತಾವರಣ ತಂಪಾಗಿದೆ. ಆದರೆ ಬೆಂಗಳೂರಿಗೆ ಸದ್ಯ ಯಾವುದೇ ಎಚ್ಚರಿಕೆ ಅಥವಾ ಅಲರ್ಟ್ ಘೋಷಿಸಲಾಗಿಲ್ಲ.

ಇದಕ್ಕೂ ಮೊದಲು ಜೂನ್ ತಿಂಗಳಲ್ಲಿ ರಾಜ್ಯದಾದ್ಯಂತ ವಾಡಿಕೆಯಷ್ಟು ಮಳೆಯಾಗದ ಕಾರಣ ರೈತರು ಸೇರಿದಂತೆ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿತ್ತು. ರಾಜ್ಯ ಹವಾಮಾನ ಇಲಾಖೆ ಬಿಡುಗಡೆ ಮಾಡಿದ ಅಂಕಿ-ಅಂಶಗಳ ಪ್ರಕಾರ, ಜೂನ್ ತಿಂಗಳಲ್ಲಿ ರಾಜ್ಯದಲ್ಲಿ ಶೇ.43ರಷ್ಟು ಮಳೆ ಕೊರತೆ ದಾಖಲಾಗಿದೆ.

ಸಾಮಾನ್ಯವಾಗಿ ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಸುಮಾರು 119 ಮಿ.ಮೀ. ಮಳೆಯಾಗಬೇಕಿದ್ದರೆ, ಈ ಬಾರಿ ಕೇವಲ 110 ಮಿ.ಮೀ. ಮಳೆಯಷ್ಟೇ ದಾಖಲಾಗಿದೆ. ಪ್ರಾದೇಶಿಕವಾಗಿ ನೋಡಿದರೆ ಕರಾವಳಿ ಭಾಗದಲ್ಲಿ ಶೇ.46, ಉತ್ತರ ಒಳನಾಡಿನಲ್ಲಿ ಶೇ.24, ದಕ್ಷಿಣ ಒಳನಾಡಿನಲ್ಲಿ ಶೇ.50 ಮಳೆ ಕೊರತೆ ಕಂಡುಬಂದಿದೆ. ದಕ್ಷಿಣ ಒಳನಾಡು ಪ್ರದೇಶವೇ ರಾಜ್ಯದಲ್ಲಿ ಅತಿ ಹೆಚ್ಚು ಮಳೆ ಕೊರತೆಯನ್ನು ಅನುಭವಿಸಿರುವ ಭಾಗವಾಗಿದೆ.

ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಸುರಿಯಲಿರುವ ಮಳೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವ ನಿರೀಕ್ಷೆ ಇದೆ. ಆದರೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ನದಿ ತೀರದ ನಿವಾಸಿಗಳು, ಪ್ರವಾಸಿಗರು ಹಾಗೂ ಮೀನುಗಾರರು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಕೆಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆಯೂ ಇದೆ. ಸಾರ್ವಜನಿಕರು ಅಗತ್ಯವಿದ್ದರೆ ಮಾತ್ರ ಪ್ರಯಾಣ ಕೈಗೊಳ್ಳುವುದು, ಹವಾಮಾನ ಇಲಾಖೆಯ ಅಧಿಕೃತ ಮಾಹಿತಿ ಗಮನಿಸುವುದು ಹಾಗೂ ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವುದು ಸೂಕ್ತ ಎಂದು ಸೂಚಿಸಲಾಗಿದೆ.

Exit mobile version