ನಾಳೆ ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್: ರಾಜ್ಯದ ಜನರ ನಿರೀಕ್ಷೆಗಳೇನು?

111 (6)

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ತಮ್ಮ ದಾಖಲೆಯ ಬಜೆಟ್ ಮಂಡನೆ ಮಾಡಲು ಸಜ್ಜಾಗಿದ್ದು, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವ ಜೊತೆಗೆ ಹೊಸ ಜನಪರ ಯೋಜನೆಗಳನ್ನು ಘೋಷಣೆ ಮಾಡಲಿದ್ದಾರೆ.

ಆದರೆ, ಅಭಿವೃದ್ಧಿ ಯೋಜನೆಗಳಿಗಾಗಿ ಹಣಕಾಸಿನ ಕೊರತೆ ಇದೆ ಎಂಬ ಕಾರಣಕ್ಕೆ ಹಲವಾರು ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಡಳಿತ ಪಕ್ಷದ ಶಾಸಕರೇ ಈ ಕುರಿತು ಟೀಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ, ಸಿದ್ದರಾಮಯ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲು ಮುಂದಾಗಿದ್ದಾರೆ.

ADVERTISEMENT
ADVERTISEMENT

 

ಗ್ರಾಮೀಣ ಅಭಿವೃದ್ಧಿ

ಗ್ರಾಮೀಣ ರಸ್ತೆ ಅಭಿವೃದ್ಧಿ, ಶಿಕ್ಷಣ ಇಲಾಖೆಯಲ್ಲಿ ಕಟ್ಟಡ ನಿರ್ಮಾಣ, ತರಗತಿ ಕೊಠಡಿಗಳ ಹೆಚ್ಚಳ, ಶಿಕ್ಷಕರ ನೇಮಕಾತಿ, ಆರೋಗ್ಯ ಸೇವೆಗಳ ಬಲವರ್ಧನೆ, ಜಿಲ್ಲಾ ಕೇಂದ್ರಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ, ಕೈಗಾರಿಕಾ ವಲಯಗಳ ಸ್ಥಾಪನೆ ಸೇರಿದಂತೆ ವಿವಿಧ ಯೋಜನೆಗಳನ್ನು ಅವರು ಘೋಷಿಸುವ ನಿರೀಕ್ಷೆಯಿದೆ.

ಬಜೆಟ್‌ನಲ್ಲಿ ಕೇಂದ್ರ ಸರ್ಕಾರದ ಅನ್ಯಾಯದ ವಿರುದ್ಧ ವಾಗ್ದಾಳಿ ನಡೆಸಲಿರುವ ಸಿದ್ದರಾಮಯ್ಯ, ರಾಜ್ಯಕ್ಕೆ ನ್ಯಾಯಯುತ ತೆರಿಗೆ ಪಾಲಿಗಾಗಿ ಒತ್ತಡ ಹೇರಲಿದ್ದಾರೆ. ನೀರಾವರಿ ಯೋಜನೆಗಳ ಪೈಕಿ ಮೇಕೆದಾಟು ಹಾಗೂ ಮಹದಾಯಿ ಯೋಜನೆಗಳ ಪ್ರಸ್ತಾಪ ಮಾಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳಲಿದ್ದಾರೆ.

 

ಕಳಸಾ-ಬಂಡೂರಿ ಯೋಜನೆ 

ಉತ್ತರ ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಕಳಸಾ-ಬಂಡೂರಿ ಯೋಜನೆ ಜಾರಿಗೆ ಆಗದಿರುವ ಬಗ್ಗೆ ಕೇಂದ್ರದ ನಿರ್ಲಕ್ಷ್ಯವನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸುವ ಸಾಧ್ಯತೆಯಿದೆ. ಗೋವಾ ಸರ್ಕಾರದ ಆಕ್ಷೇಪ ಹಾಗೂ ಪರಿಸರ ಮೌಲ್ಯಮಾಪನದ ನೆಪದಲ್ಲಿ ಯೋಜನೆ ವಿಳಂಬಗೊಂಡಿರುವ ಬಗ್ಗೆ ರಾಜ್ಯ ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಲಿದೆ.


ಮೇಕೆದಾಟು ಯೋಜನೆ

ಹಳೆಯ ಮೈಸೂರು ಭಾಗದಲ್ಲಿ ಬಹುನಿರೀಕ್ಷಿತ ಮೇಕೆದಾಟು ಯೋಜನೆಯ ಕುರಿತು ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ. ಕಾಂಗ್ರೆಸ್ ಪಕ್ಷ ಈ ಯೋಜನೆ ಜಾರಿಗೆ ಪಾದಯಾತ್ರೆ ನಡೆಸಿದ್ದರೂ, ತಮಿಳುನಾಡಿನ ಆಕ್ಷೇಪದ ಕಾರಣದಿಂದ ಅದು ಮುಂದೂಡಲ್ಪಟ್ಟಿದೆ ಎಂಬ ಟೀಕೆಗಳಿವೆ. ಬಜೆಟ್‌ನಲ್ಲಿ ಇದಕ್ಕೆ ಸ್ಪಷ್ಟತೆ ನೀಡುವ ನಿರೀಕ್ಷೆಯಿದೆ.

 

ಕೃಷಿ, ಹೈನುಗಾರಿಕೆ, ಪಶುಸಂಗೋಪನೆ ಕ್ಷೇತ್ರ

ಕೃಷಿ, ಹೈನುಗಾರಿಕೆ, ಪಶುಸಂಗೋಪನೆ ಕ್ಷೇತ್ರಗಳಿಗೆ ಹೊಸ ಪ್ರೋತ್ಸಾಹ ಒದಗಿಸುವ ನಿರೀಕ್ಷೆಯಿದ್ದು, ಶಕ್ತಿ ಮತ್ತು ಗೃಹಲಕ್ಷ್ಮೀ ಯೋಜನೆಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗುವುದು. ಮಹಿಳಾ ಸ್ವಸಹಾಯ ಸಂಘಗಳು ಮತ್ತು ಸ್ತ್ರೀ ಶಕ್ತಿ ಸಂಘಗಳಿಗೆ ಹೆಚ್ಚಿನ ಆರ್ಥಿಕ ನೆರವು ನೀಡಲು ಸರ್ಕಾರ ನಿರ್ಧರಿಸಿದೆ.

 

ಯುವನಿಧಿ

ಯುವನಿಧಿಯಲ್ಲಿ ಹೊಸ ಪದವೀಧರರನ್ನು ಸೇರ್ಪಡೆ ಮಾಡುವುದು, ಗೃಹಜ್ಯೋತಿ ಯೋಜನೆಗೆ ಹೆಚ್ಚಿನ ಅನುದಾನ ಒದಗಿಸುವುದು ಸೇರಿದಂತೆ ಅನೇಕ ಮಹತ್ವದ ನಿರ್ಧಾರಗಳು ಬಜೆಟ್‌ನಲ್ಲಿ ಇರಲಿವೆ. ಕೃಷಿ ಪಂಪ್‌ಸೆಟ್‌ಗಳಿಗೆ ಸೌರಶಕ್ತಿ ಸಂಯೋಜನೆ, ನವೋದ್ಯಮಗಳಿಗೆ ಪ್ರೋತ್ಸಾಹ, ಕಂದಾಯ ಇಲಾಖೆಯಲ್ಲಿ ಡಿಜಿಟಲೀಕರಣಕ್ಕೆ ಒತ್ತು ನೀಡುವುದು ಸರ್ಕಾರದ ಪ್ರಾಥಮಿಕ ಗುರಿಯಾಗಿದೆ.

ಬೇಸಿಗೆಗಿಂತ ಮುಂಚೆಯೇ ತಾಲ್ಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗಳು, ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ನಡೆಯುವ ನಿರೀಕ್ಷೆ ಇದ್ದು, ಜನಮನ್ನಣೆ ಪಡೆಯಲು ಸಿದ್ದರಾಮಯ್ಯ ಜನಪ್ರಿಯ ಬಜೆಟ್ ಮಂಡನೆ ಮಾಡಲು ಸಜ್ಜಾಗಿದ್ದಾರೆ.

Exit mobile version