ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಸಿಗುವಂತೆ ಮಾಡುವುದೇ ನಮ್ಮ ಗುರಿ: ಪಿ.ಎಂ ನರೇಂದ್ರಸ್ವಾಮಿ

Untitled design 2025 10 27t185209.169

ಚಾಮರಾಜನಗರ: ಮುಂದಿನ ಪೀಳಿಗೆಗೆ ಶುದ್ಧ ಗಾಳಿ ಮತ್ತು ಶುದ್ದ ನೀರು ಸಿಗುವಂತೆ ಮಾಡುವುದೇ ನಮ್ಮ ಗುರಿ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿಎಂ ನರೇಂದ್ರಸ್ವಾಮಿ ತಿಳಿಸಿದರು.

ಚಾಮರಾಜನಗರದಲ್ಲಿ ನಡೆದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪಿಎಂ ನರೇಂದ್ರಸ್ವಾಮಿ ಅವರು, ಭವಿಷ್ಯ  ಉಳಿಯಬೇಕು ಎಂದರೆ ಪರಿಸರ ಉಳಿಯಬೇಕು, ಅರಣ್ಯ ಉಳಿಯಬೇಕು. ಎಲ್ಲರಿಗೂ ಪರಿಶುದ್ಧವಾದ ಗಾಳಿ ಮತ್ತು ನೀರು ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಕೊರೋನಾ ಬಂದಾಗ ಜನ ಆಮ್ಲಜನಕ ಇಲ್ಲದೆ ಸತ್ತರು. ಇದರಿಂದ ನಾವು ಪಾಠ ಕಲಿತು ಆಮ್ಲಜನಕವನ್ನು ಕಾಪಾಡಿಕೊಳ್ಳಬೇಕು. ಜೊತೆಗೆ ಭೂಮಿ ಮತ್ತು ಅಂತರ್ಜಲವನ್ನು ಸೇರುತ್ತಿರುವ ರಾಸಾಯನಿಕ ವಸ್ತುಗಳ ಬಗ್ಗೆ ತಿಳಿದುಕೊಳ್ಳಬೇಕು. ಆಹರ ಇಲ್ಲದಿದ್ದರೂ ಬದುಕಬಹುದು, ಗಾಳಿ ಮತ್ತು ನೀರು ಇಲ್ಲದೆ ಬದುಕಲು ಸಾಧ್ಯವಿಲ್ಲ ಎನ್ನುವುದನ್ನು ಅರಿತುಕೊಳ್ಳಬೇಕು ಎಂದು ವಿವರಿಸಿದರು.

ಕಾರ್ಖಾನೆಗಳು ಬೇಕು, ಉದ್ಯೋಗ, ಉದ್ಯಮ ಬೇಕು. ಆದರೆ ಕಾರ್ಖಾನೆಗಳ ಹೊರಸೂಸುವ ಬಗ್ಗೆ ಎಚ್ಚರದಿಂದ ಇರಬೇಕು. ಹಾಗೆಯೇ ನಮ್ಮ ಸಮಾಜವನ್ನು ಪ್ಲಾಸಿಕ್ ಮುಕ್ತ ಮಾಡಲು ಪಣತೊಡಬೇಕು ಎಂದು ಕರೆಕೊಟ್ಟರು. ರಂಗನತಿಟ್ಟುವಿನಿಂದ ಸತ್ತೇಗಾಲದವರೆಗೆ ಸುಮಾರು 50 ಕಿ.ಮೀ. ವ್ಯಾಪ್ತಿಯಲ್ಲಿ ಕಾವೇರಿ ನದಿಗೆ ಒಳಚರಂಡಿ ನೀರು, ಘನತ್ಯಾಜ್ಯ, ಕೈಗಾರಿಕೆ ತ್ಯಾಜ್ಯ ಹಾಗೂ ಇತರೆ ಸ್ವರೂಪದ ಮಲಿನಕಾರಕಗಳು ಸೇರ್ಪಡೆಗೊಂಡು ನೀರು ಕಲುಷಿತವಾಗುತ್ತಿದೆ. ಈ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ ಎಂದರು.

ಜೀವ ನದಿ ಕಾವೇರಿ ನೀರು ಕಲುಷಿತಗೊಳ್ಳುವುದನ್ನು ತಡೆಯಲು ರಾಜ್ಯ ಸರ್ಕಾರ ರಚಿಸಿರುವ ತಾಂತ್ರಿಕ ಸಮಿತಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ. ಕಾವೇರಿ ಕಲುಷಿತ ಆಗುವುದನ್ನು ತಡೆಯಲು ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಬೇಕಾಗಿದೆ. ಜೊತೆಗೆ ಸಾರ್ವಜನಿಕರ ಪಾತ್ರ ಕೂಡ ಮಹತ್ವದ್ದಾಗಿದೆ ಎಂದು ನರೇಂದ್ರಸ್ವಾಮಿ ತಿಳಿಸಿದರು.

Exit mobile version