ರಾಜ್ಯದಲ್ಲಿ ಮಳೆ ಅಬ್ಬರ: ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ

ಹೆಂಡ್ತಿಯರ (13)

ಕಾರವಾರ, ಜುಲೈ 06: ರಾಜ್ಯದ ಹಲವೆಡೆ ವರುಣ ಅಬ್ಬರಿಸುತ್ತಿದ್ದಾನೆ. ಮಹಾಮಳೆಯ ಆರ್ಭಟಕ್ಕೆ ಅವಾಂತರಗಳೇ ಸೃಷ್ಟಿಯಾಗಿವೆ. ಇತ್ತ ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 5 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 7ರಂದು ರಜೆ ಘೋಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲೂಕುಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ನಾಳೆ ರಜೆ ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ. ಈ ತಾಲೂಕುಗಳಲ್ಲಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜುಲೈ 7ರಂದು ರಜೆ ಇರಲಿದೆ. 

ಕಾರವಾರದಲ್ಲಿ ಕಚೇರಿ ಮೇಲೆ ಮರ ಬಿದ್ದ ಘಟನೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಗಾಳಿ ಸಹಿತ ಮಳೆಗೆ ಕಾರವಾರ ನಗರಸಭೆ ಪಕ್ಕದಲ್ಲಿರುವ ಸಹಾಯಕ ಸರ್ಕಾರಿ ಅಭಿಯೋಜಕರ ಕಚೇರಿ ಮೇಲೆ ಮರ ಬಿದ್ದಿರುವ ಘಟನೆ ನಡೆದಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ, ಕಚೇರಿಯೊಳಗಿದ್ದ ಕಡತಗಳು ಮತ್ತು ದಾಖಲೆಗಳನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಿದ್ದಾರೆ. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾರಿಗೂ ಪ್ರಾಣ ಹಾನಿಯಾಗಿಲ್ಲ. 

ಕಾಫಿನಾಡಿನಲ್ಲೂ ಮಳೆ ಅಬ್ಬರ

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲೂ ಮಳೆ ಮುಂದುವರಿದಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮಳೆಯ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕಳಸ ತಾಲೂಕಿನಾದ್ಯಂತ ಎಲ್ಲಾ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೂ ಜುಲೈ 7 ರಜೆ ಘೋಷಿಸಿ ಕಳಸ ತಹಶೀಲ್ದಾರ್ ಮಂಜುನಾಥ್ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಕಳಸ ತಾಲ್ಲೂಕಿನಲ್ಲಿ ಅತಿಯಾದ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ತಾಲ್ಲೂಕಿನ ಎಲ್ಲಾ 1ನೇ ತರಗತಿಯಿಂದ 7ನೇ ತರಗತಿಯವರೆಗಿನ ಸರ್ಕಾರಿ ಶಾಲೆ, ಸರ್ಕಾರಿ ಅನುದಾನಿತ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಜುಲೈ 07ರಂದು ರಜೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೊಪ್ಪ ಮತ್ತು ಶೃಂಗೇರಿಯಲ್ಲೂ ರಜೆ

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲೂ ಸಹ ಮಳೆಯ ತೀವ್ರತೆ ಹೆಚ್ಚಾಗಿದ್ದು, ಅಂಗನವಾಡಿಯಿಂದ ಪ್ರೌಢಶಾಲೆವರೆಗೂ ರಜೆ ಘೋಷಿಸಲಾಗಿದೆ. ಮಧ್ಯಾಹ್ನದ ನಂತರ ಭಾರೀ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶೃಂಗೇರಿ ತಾಲೂಕಿನಲ್ಲೂ ಸಹ ರಜೆ ಘೋಷಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. 

ಮುಂದಿನ 24 ಗಂಟೆಗಳ ಮುನ್ಸೂಚನೆ

ಹವಾಮಾನ ಇಲಾಖೆಯ ಪ್ರಕಾರ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆ ಮುಂದುವರೆಯಲಿದೆ. ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಭೂಕುಸಿತ ಮತ್ತು ಪ್ರವಾಹದ ಅಪಾಯವಿದ್ದು, ಜನರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. 

Exit mobile version