ಬೆಂಗಳೂರು, (ಜುಲೈ 27): ಕರ್ನಾಟಕದಲ್ಲಿ ಮಳೆಯ ಅಬ್ಬರ ಇನ್ನೂ ಮುಂದುವರಿಯಲಿದ್ದು, ಜುಲೈ ಅಂತ್ಯದವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮುನ್ಸೂಚನೆ ನೀಡಿವೆ.
- ಜುಲೈ ಅಂತ್ಯದವರೆಗೂ ರಾಜ್ಯದಲ್ಲಿ ಉತ್ತಮ ಮಳೆಯ ಮುನ್ಸೂಚನೆ.
- ಕರಾವಳಿ ಕರ್ನಾಟಕಕ್ಕೆ ಜುಲೈ 30ರವರೆಗೆ ಆರೆಂಜ್ ಅಲರ್ಟ್.
- ಜುಲೈ 28ರಂದು ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್.
- ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯ ಎಚ್ಚರಿಕೆ.
ಮುಂದಿನ 7ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD) #ಕರ್ನಾಟಕ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ, ಕರಾವಳಿ & ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಹಗುರದಿಂದ ಸಾದಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ & ಒಳನಾಡು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರುವ pic.twitter.com/bcVKwOE4FF
— Karnataka State Natural Disaster Monitoring Centre (@KarnatakaSNDMC) July 27, 2026
ಕರಾವಳಿ ಕರ್ನಾಟಕದಲ್ಲಿ ಜುಲೈ 30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಜುಲೈ 28ರಂದು ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಹಲವೆಡೆಗಳಲ್ಲಿಯೂ ಇನ್ನೂ ಕೆಲ ದಿನಗಳ ಕಾಲ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.
ಜುಲೈ 28ರಂದು ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಪ್ರದೇಶಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.
ಇದೇ ವೇಳೆ ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕಳೆದ 24 ಗಂಟೆಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಬೆಂಗಳೂರು ದಕ್ಷಿಣದ ಚುಂಚನಕುಪ್ಪೆಯಲ್ಲಿ 78 ಮಿ.ಮೀ., ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ 66.5 ಮಿ.ಮೀ., ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 66.4 ಮಿ.ಮೀ., ದಕ್ಷಿಣ ಕನ್ನಡದ ನೇರಿಯದಲ್ಲಿ 65 ಮಿ.ಮೀ., ವಿಜಯನಗರ ಜಿಲ್ಲೆಯ ಪುಣಭಘಟ್ಟದಲ್ಲಿ 58 ಮಿ.ಮೀ., ಕೊಡಗಿನ ಬಿರುನಾನಿಯಲ್ಲಿ 48 ಮಿ.ಮೀ. ಹಾಗೂ ಶೃಂಗೇರಿಯ ಬೇಗಾರಿನಲ್ಲಿ 47 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ವಿಶೇಷವಾಗಿ ಕರಾವಳಿ ಮತ್ತು ಗುಡ್ಡಗಾಡು ಪ್ರದೇಶದ ನಿವಾಸಿಗಳು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.





