ಬೆಂಗಳೂರು, ಮೇ 02: ರಾಜಧಾನಿ ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಸಂಜೆಯಾದಂತೆ ಮೋಡ ಕವಿದ ವಾತಾವರಣದೊಂದಿಗೆ ಮಳೆಯು ನಗರವನ್ನು ಆವರಿಸುತ್ತಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಶುಕ್ರವಾರ ಸಂಜೆ ಕೆ.ಆರ್.ವೃತ್ತ, ಕಾರ್ಪೊರೇಷನ್, ವಿಧಾನಸೌಧ, ಮೆಜೆಸ್ಟಿಕ್, ಗಾಂಧಿನಗರ, ಓಕಳಿಪುರಂ, ರಾಜಾಜಿನಗರ, ಗಿರಿನಗರ, ಬಸವೇಶ್ವರ ನಗರ, ಮಲ್ಲೇಶ್ವರಂ, ಆರ್.ಆರ್.ನಗರ, ಮತ್ತು ವಿಜಯನಗರದಂತಹ ಪ್ರಮುಖ ಪ್ರದೇಶಗಳಲ್ಲಿ ಮಳೆ ಸುರಿದಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ರಾಜ್ಯಾದ್ಯಂತ ಮುಂದಿನ ಐದು ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಆದರೆ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಕೆಲವೆಡೆ ತುಂತುರು ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ..
ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆ
ಕಾಫಿನಾಡು ಖ್ಯಾತಿಯ ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಚಿಕ್ಕಮಗಳೂರು ನಗರ, ಮೂಡಿಗೆರೆ, ಕಳಸ ಸೇರಿದಂತೆ ಹಲವು ಭಾಗಗಳಲ್ಲಿ ದಿಢೀರ್ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ರಣ ಮಳೆಯಿಂದಾಗಿ ವಾಹನ ಸವಾರರು ತೊಂದರೆಗೀಡಾಗಿದ್ದಾರೆ. ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ತುಂಬಿ, ಸಂಚಾರಕ್ಕೆ ತೊಡಕುಂಟಾಗಿದೆ.
ರಾಜ್ಯದ ಇತರ ಭಾಗಗಳಲ್ಲಿ ಮಳೆಯ ಪರಿಣಾಮ
ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಮಂಡ್ಯ, ಮತ್ತು ಕೋಲಾರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಮತ್ತು ಹಾಸನದಂತಹ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆಯಾಗಬಹುದು. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡದ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗುವ ಸಂಭವವಿದೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಮತ್ತು ವಿಜಯಪುರದಂತಹ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.