ಮಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನಿರಂತರ ಮಳೆಯಿಂದ ಗುಡ್ಡ ಕುಸಿತ ಸಂಭವಿಸುತ್ತಿದೆ. ಇದರಿಂದ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ (ಮಂಗಳೂರು) ಮತ್ತು ಕೊಡಗು ಜಿಲ್ಲೆಗಳಲ್ಲಿ ಜೂನ್ 16, 2025ರ ಸೋಮವಾರದಂದು ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರಿನಲ್ಲಿ ಶಾಲೆಗಳಿಗೆ ರಜೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ತೀವ್ರತೆ ಮುಂದುವರೆದಿರುವ ಕಾರಣ, ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ ಮತ್ತು ಕೊಪ್ಪ ತಾಲೂಕುಗಳ ಶಾಲೆಗಳಿಗೆ ಈ ಆದೇಶ ಜಾರಿಯಲ್ಲಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಭಾರಿ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ತುಂಬಿದ್ದು, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಉಡುಪಿಯಲ್ಲಿ ಧಾರಾಕಾರ ಮಳೆ
ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅಂಗನವಾಡಿಯಿಂದ ಪ್ರೌಢ ಶಾಲೆಗಳವರೆಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ವಿದ್ಯಾ ಕುಮಾರಿ.ಕೆ ಈ ಆದೇಶವನ್ನು ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಮಳೆಯಿಂದಾಗಿ ಕೆಲವು ಕಡೆ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದ್ದು, ಜನಜೀವನದ ಮೇಲೆ ಪರಿಣಾಮ ಬೀರಿದೆ. ಮಳೆಯ ತೀವ್ರತೆಯನ್ನು ಗಮನಿಸಿ, ವಿದ್ಯಾರ್ಥಿಗಳಿಗೆ ಸುರಕ್ಷಿತ ವಾತಾವರಣ ಒದಗಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟವು ಮುಂದುವರಿದಿದೆ. ಜಿಲ್ಲೆಯ ಐದು ತಾಲೂಕುಗಳಾದ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಮತ್ತು ಉಳ್ಳಾಲದಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಈ ಆದೇಶವನ್ನು ಜಾರಿಗೊಳಿಸಿದ್ದಾರೆ. ಜಿಲ್ಲೆಯಲ್ಲಿ ನಾಳೆಯೂ (ಜೂ.16) ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಕಾರಣದಿಂದ ರಜೆಯ ಘೋಷಣೆ ಮಾಡಲಾಗಿದೆ.
ಕೊಡಗಿನಲ್ಲಿ ಭಾರಿ ಮಳೆ
ಕೊಡಗು ಜಿಲ್ಲೆಯಲ್ಲಿಯೂ ಮಳೆಯ ತೀವ್ರತೆ ಜಾಸ್ತಿಯಾಗಿದ್ದು, ಜಿಲ್ಲಾಧಿಕಾರಿ ವೆಂಕಟರಾಜಾ ಅಂಗನವಾಡಿ, ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಕೆಲವು ಕಡೆ ಗುಡ್ಡ ಕುಸಿತದ ಆತಂಕವಿದ್ದು, ಜನರ ಸುರಕ್ಷತೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಹಾಸನ ಜಿಲ್ಲೆಯ ಹಾಸನ, ಸಕಲೇಶಪುರ, ಆಲೂರು ಮತ್ತು ಬೇಲೂರು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಆಲೂರು ತಾಲೂಕಿನ ಬಿಕ್ಕೋಡು ಬಳಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದಿದ್ದರಿಂದ ಬಿಕ್ಕೋಡು ಮತ್ತು ಆಲೂರು ನಡುವಿನ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಕಂದಾಯ ಇಲಾಖೆಯ ಸಿಬ್ಬಂದಿ ಮರವನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ದೇವಿಮನೆ ಘಟ್ಟದಲ್ಲಿ ಪದೇ ಪದೇ ಗುಡ್ಡ ಕುಸಿಯುತ್ತಿದ್ದು, ಶಿರಸಿ-ಕುಮಟಾ ರಸ್ತೆಯಲ್ಲಿ ರಾತ್ರಿ ವೇಳೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕಳೆದ ಮೂರು ದಿನಗಳಲ್ಲಿ ಐದು ಬಾರಿ ಗುಡ್ಡ ಕುಸಿದಿದ್ದು, ಇನ್ನಷ್ಟು ಕುಸಿತದ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.