ಕರ್ನಾಟಕ ಸರ್ಕಾರವು ಪಡಿತರ ವ್ಯವಸ್ಥೆಗೆ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಿರುವ ಕುರಿತು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕ್ರಮವು ಕಾನೂನುಬಾಹಿರವಾಗಿದ್ದು, ಆಹಾರ ಭದ್ರತಾ ಯೋಜನೆಯ ಮೂಲ ಉದ್ದೇಶಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.
ಆಹಾರ ಭದ್ರತೆ ಒದಗಿಸುವಲ್ಲಿ ಯಾವುದೇ ರೀತಿಯ ಜಾತಿ ಆಧಾರಿತ ಲಿಂಕ್ ಇರಲು ಸಾಧ್ಯವಿಲ್ಲ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಅವರ ಆರ್ಥಿಕ ಸ್ಥಿತಿ ಮತ್ತು ಮಾನದಂಡಗಳ ಆಧಾರದ ಮೇಲೆ ಯಾವುದೇ ತಾರತಮ್ಯವಿಲ್ಲದೆ ಆಹಾರಧಾನ್ಯ ವಿತರಿಸಬೇಕು. ಆದರೆ ಕರ್ನಾಟಕದಲ್ಲಿ ಪಡಿತರ ಪಡೆಯಲು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಿರುವ ಕುರಿತು ವರದಿಗಳು ಬಂದಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ರಾಜ್ಯದಿಂದ ಸ್ಪಷ್ಟನೆ ಕೇಳಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಬಡವರಿಗೆ ಸಬ್ಸಿಡಿ ದರದಲ್ಲಿ ಆಹಾರಧಾನ್ಯ ವಿತರಿಸಲಾಗುತ್ತಿದ್ದು, ಈ ಯೋಜನೆ ಸಂಪೂರ್ಣವಾಗಿ ಅಗತ್ಯ ಮತ್ತು ಅರ್ಹತೆಯ ಆಧಾರದ ಮೇಲೆ ನಡೆಯಬೇಕು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಯಾವುದೇ ಜಾತಿ ಅಥವಾ ಜನಾಂಗದ ಆಧಾರದ ಮೇಲೆ ಆಹಾರ ಭದ್ರತೆಯನ್ನು ನಿರ್ಧರಿಸಲು ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.
* ಕರ್ನಾಟಕದಲ್ಲಿ ಜಾತಿ ಪ್ರಮಾಣ ಪತ್ರ ಕಡ್ಡಾಯಕ್ಕೆ ಕೇಂದ್ರ ಆಹಾರ ಸಚಿವರ ಆಕ್ಷೇಪ
* ಇದು ಕಾನೂನು ಬಾಹಿರ ಕ್ರಮವೆಂದ ಸಚಿವರಿಂದ ಅಧಿಕಾರಿಗಳಿಗೆ ನಿರ್ದೇಶನ
* ಬಡವರ ಆಹಾರಧಾನ್ಯಕ್ಕೆ ಆಡಳಿತಾತ್ಮಕ ಕ್ರಮ ಅಡ್ಡಿಯಾಗಬಾರದು; ರಾಜ್ಯಕ್ಕೆ ಚಾಟಿ ಬೀಸಿದ ಸಚಿವರು
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ದೇಶದ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಆಹಾರ ಭದ್ರತೆ ಒದಗಿಸುವಲ್ಲಿ ಬದ್ಧವಾಗಿದೆ ಎಂದು ಜೋಶಿ ಹೇಳಿದ್ದಾರೆ. ಆದರೆ ಕರ್ನಾಟಕದಲ್ಲಿ ಮಾತ್ರ ಪಡಿತರ ಪಡೆಯಲು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಿರುವುದು ಗಂಭೀರ ಪ್ರಶ್ನೆಯನ್ನು ಎಬ್ಬಿಸುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರದ ಈ ಕ್ರಮದ ಹಿಂದಿನ ಉದ್ದೇಶವೇನು ಎಂಬುದನ್ನು ಪ್ರಶ್ನಿಸಿರುವ ಸಚಿವರು, ಆಧಾರ್ ಮತ್ತು ಬಯೋಮೆಟ್ರಿಕ್ ದೃಢೀಕರಣ ವ್ಯವಸ್ಥೆಗಳು ಈಗಾಗಲೇ ಯಶಸ್ವಿಯಾಗಿ ಜಾರಿಯಲ್ಲಿರುವಾಗ ಜಾತಿ ಪ್ರಮಾಣ ಪತ್ರವನ್ನು ಹೆಚ್ಚುವರಿಯಾಗಿ ಕಡ್ಡಾಯಗೊಳಿಸುವ ಅಗತ್ಯವೇನು. ಇಂತಹ ಕ್ರಮಗಳು ಆಡಳಿತಾತ್ಮಕವಾಗಿ ಅನಗತ್ಯ ತೊಂದರೆಗಳನ್ನು ಉಂಟುಮಾಡಬಹುದು ಎಂದು ಎಚ್ಚರಿಸಿದ್ದಾರೆ.
ದೇಶಾದ್ಯಂತ ಅರ್ಹ ಫಲಾನುಭವಿಗಳಿಗೆ ಸುಲಭವಾಗಿ ಪಡಿತರ ಲಭ್ಯವಾಗುವಂತೆ ಮಾಡಲು ಕೇಂದ್ರ ಸರ್ಕಾರ ಈಗಾಗಲೇ ‘ಒಂದು ರಾಷ್ಟ್ರ, ಒಂದು ಪಡಿತರ ಚೀಟಿ’ ಯೋಜನೆಯನ್ನು ಜಾರಿಗೆ ತಂದಿದೆ. ಇಂತಹ ಸಂದರ್ಭದಲ್ಲಿ ಸ್ಥಳೀಯವಾಗಿ ಹೊಸ ನಿಯಮಗಳನ್ನು ಹೇರುವುದು ಬಡವರ ಹಿತಾಸಕ್ತಿಗೆ ವಿರುದ್ಧವಾಗಿದೆ. ಆಹಾರ ಭದ್ರತೆ ಯಾವುದೇ ಆಡಳಿತಾತ್ಮಕ ಅಡಚಣೆಯಿಲ್ಲದೆ ಎಲ್ಲರಿಗೂ ತಲುಪಬೇಕು ಎಂಬುದು ಸರ್ಕಾರಗಳ ಪ್ರಮುಖ ಹೊಣೆಗಾರಿಕೆ ಎಂದು ಹೇಳಿರುವ ಜೋಶಿ, ಬಡ ಮತ್ತು ಅರ್ಹ ವರ್ಗಗಳಿಗೆ ಆಹಾರಧಾನ್ಯ ತಲುಪುವಲ್ಲಿ ಯಾವುದೇ ರೀತಿಯ ಅಡ್ಡಿ ಇರಬಾರದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಸಂಗ್ರಹಿಸಲು ಹಾಗೂ ಸಂಬಂಧಿಸಿದ ಅಧಿಕಾರಿಗಳಿಂದ ವಿವರಣೆ ಪಡೆಯಲು ಕೇಂದ್ರದ ಉನ್ನತ ಅಧಿಕಾರಿಗಳಿಗೆ ನಿರ್ದೇಶ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.





