ರಾಜ್ಯದಲ್ಲಿ ಅಗತ್ಯವಾದ ಭದ್ರತೆ ಸಿಬ್ಬಂದಿ ಇದ್ದು, ಯಾವುದೇ ರೀತಿಯ ಕೊರತೆಯಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಗತ್ಯವಾದ ಭದ್ರತಾ ಸಿಬ್ಬಂದಿ ಇದೆ. ಇರುವ ಸಿಬ್ಬಂದಿಯನ್ನು ಕಡಿಮೆ ಮಾಡಿಲ್ಲ. ಆ ಸಂಖ್ಯೆ ಹಾಗೆಯೇ ಇದೆ. ಹೆಚ್ಚುವರಿಯಾಗಿ ನೇಮಕಾತಿ ಮಾಡಿಕೊಳ್ಳಬೇಕು ಎನ್ನುವ ಪ್ರಸ್ತಾವನೆಯು ಇದೆ. ನೇಮಕಾತಿ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತದೆ ಎಂದು ಸ್ಪಷ್ಟಪಡಿಸಿದರು.
ಪಹಲ್ಗಾಮ್ನಲ್ಲಿ ಉಗ್ರಗಾಮಿಗಳ ದಾಳಿ ಬಳಿಕ ನಡೆದ ಬೆಳವಣಿಗೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಕೆಲವು ನಿರ್ದೇಶನಗಳು ಬಂದಿವೆ. ಮೂರು ಜಿಲ್ಲೆಗಳನ್ನು ಆಯ್ಕೆ ಮಾಡಿದ್ದಾರೆ. ಮಾಕ್ ಡ್ರಿಲ್ ಮಾಡುತ್ತಾರೆ. ಹೆಚ್ಚುವರಿಯಾಗಿ ಮೈಸೂರ ಜಿಲ್ಲೆಯನ್ನು ಇದಕ್ಕೆ ಸೇರ್ಪಡೆ ಮಾಡಿಕೊಂಡಿದ್ದೇವೆ. ಇಂಟಲಿಜೆನ್ಸ್ ಮಾಹಿತಿ ಮತ್ತು ಇನ್ನಿತರ ಕಾರಣಗಳಿಂದ ಆಯ್ಕೆ ಮಾಡಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಯ ಪೊಲೀಸ್ ಅಧೀಕ್ಷಕರಿಗೆ ಪರಿಸ್ಥಿತಿಯ ಸೂಕ್ಷ್ಮತೆ ಮತ್ತು ಗಂಭೀರತೆಯನ್ನು ತಿಳಿಸಲಾಗಿದೆ ಎಂದು ಹೇಳಿದರು.
ಕ್ಯಾಬಿನೆಟ್ನಲ್ಲಿ ಜಾತಿಗಣತಿ ಚರ್ಚೆ ಆಗಬಹುದು. ಸಚಿವ ಸಂಪುಟ ಸಭೆಯ ಕಾರ್ಯಸೂಚಿ ಇನ್ನು ಬಂದಿಲ್ಲ. ಮಧ್ಯಾಹ್ನದ ನಂತರ ಗೊತ್ತಾಗಲಿದೆ ಎಂದು ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದರು.