ಶೇ.42% ಮಳೆ ಕೊರತೆ, ರೈತರು ಸಂಕಷ್ಟದಲ್ಲಿ; ಕೇಂದ್ರದ ನೆರವಿಗೆ ರಾಜ್ಯ ಸರ್ಕಾರ ಒತ್ತಾಯ

Untitled design 2026 07 16T161336.491

ಬೆಂಗಳೂರು:(ಜುಲೈ.16)  ಕರ್ನಾಟಕದಲ್ಲಿ ಈ ವರ್ಷ ಮುಂಗಾರು ಮಳೆ ಕೈಕೊಟ್ಟಿದೆ. ಈ ಹಿನ್ನಲೆ ರಾಜ್ಯದ ಹಲವು ಜಿಲ್ಲೆಗಳು ಬರದ ಭೀತಿಯನ್ನು ಎದುರಿಸುತ್ತಿವೆ. ಮಳೆ ಕೊರತೆಯಿಂದ ಕೃಷಿ, ಕುಡಿಯುವ ನೀರು ಹಾಗೂ ಗ್ರಾಮೀಣ ಜೀವನೋಪಾಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ತುರ್ತು ನೆರವು ನೀಡುವಂತೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಶೇ.42ರಷ್ಟು ಹಾಗೂ ಜುಲೈ ತಿಂಗಳಲ್ಲಿ ಶೇ.34ರಷ್ಟು ಮಳೆ ಕೊರತೆ ದಾಖಲಾಗಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಯ ಅಭಾವದಿಂದ ಬೆಳೆ ನಷ್ಟ ಹೆಚ್ಚಾಗಿದ್ದು, ಅಂತರ್ಜಲ ಮಟ್ಟ ಕುಸಿತಗೊಂಡಿದೆ. ಜಲಾಶಯಗಳಿಗೆ ನೀರಿನ ಒಳಹರಿವು ಗಣನೀಯವಾಗಿ ಕಡಿಮೆಯಾಗಿರುವ ಪರಿಣಾಮ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ವಿಶೇಷ ಆರ್ಥಿಕ ನೆರವು ನೀಡಬೇಕು ಎಂದು ಪರಮೇಶ್ವರ ಮನವಿ ಮಾಡಿದ್ದಾರೆ. ಸಣ್ಣ ಮತ್ತು ಅತಿ ಸಣ್ಣ ರೈತರ ಸಂಖ್ಯೆಯನ್ನು ನಿರ್ಧರಿಸಲು 2015-16ರ ಕೃಷಿ ಜನಗಣತಿಯ ಬದಲಿಗೆ FRUITS ದತ್ತಾಂಶವನ್ನು ಪರಿಗಣಿಸುವಂತೆ ಅವರು ಒತ್ತಾಯಿಸಿದ್ದಾರೆ. ಜೊತೆಗೆ SDRF, NDRF ಹಾಗೂ ಬರ ಕೈಪಿಡಿ-2020ರ ಮಾನದಂಡಗಳನ್ನು ಏಕರೂಪಗೊಳಿಸಿ ರೈತರಿಗೆ ತ್ವರಿತ ಪರಿಹಾರ ನೀಡಬೇಕು ಎಂದು ಸೂಚಿಸಿದ್ದಾರೆ.

ಬಿತ್ತನೆ ಅವಧಿಯಲ್ಲಿ 20 ರಿಂದ 59 ಶೇಕಡಾ ಮಳೆ ಕೊರತೆಯನ್ನೂ ಬರ ಘೋಷಣೆಯ ಮಾನದಂಡವಾಗಿ ಪರಿಗಣಿಸಬೇಕು ಎಂಬುದು ರಾಜ್ಯದ ಮತ್ತೊಂದು ಪ್ರಮುಖ ಬೇಡಿಕೆಯಾಗಿದೆ. ಪ್ರಸ್ತುತ ಋತುಮಾನದ ಒಟ್ಟು ಮಳೆಯ ಆಧಾರದ ಮೇಲೆ ಮಾತ್ರ ಬರ ನಿರ್ಧಾರ ಕೈಗೊಳ್ಳುವ ಪದ್ಧತಿಯನ್ನು ಪರಿಷ್ಕರಿಸುವ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಒಣಹವೆಯ ವ್ಯಾಖ್ಯಾನವನ್ನು ಸ್ಥಳೀಯ ಕೃಷಿ ಮತ್ತು ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಬದಲಾಯಿಸಬೇಕು. ಅಲ್ಲದೆ, ಬರ ಪರಿಸ್ಥಿತಿಯನ್ನು ಮುಂಚಿತವಾಗಿ ಘೋಷಿಸಲು ರಾಜ್ಯಗಳಿಗೆ ಅವಕಾಶ ನೀಡಬೇಕು ಹಾಗೂ ಬಿತ್ತನೆ ಪೂರ್ಣಗೊಳ್ಳುವವರೆಗೆ ಕಾಯುವ ನಿಯಮವನ್ನು ಸಡಿಲಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

ಪರಿಸ್ಥಿತಿಯ ಗಂಭೀರತೆಯನ್ನು ಉಲ್ಲೇಖಿಸಿರುವ ಪರಮೇಶ್ವರ , ಕರ್ನಾಟಕದ ಪ್ರಸ್ತುತ ಬರ ಪರಿಸ್ಥಿತಿಯನ್ನು “ರಾಷ್ಟ್ರೀಯ ವಿಪತ್ತು” ಎಂದು ಘೋಷಿಸುವುದು ಅಥವಾ ಅದಕ್ಕೆ ಸಮಾನವಾದ ವಿಶೇಷ ಆರ್ಥಿಕ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದಕ್ಕೂ ಮೊದಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಹ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ರಾಜ್ಯದ ಬರ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವನ್ನು ಕಳುಹಿಸುವಂತೆ ಮನವಿ ಮಾಡಿದ್ದರು. ಕರ್ನಾಟಕ ಸರ್ಕಾರ ಈಗಾಗಲೇ ನೀರಿನ ಸಂರಕ್ಷಣೆ ಹಾಗೂ ತುರ್ತು ಕ್ರಮಗಳನ್ನು ಕೈಗೊಂಡಿದ್ದರೂ, ಕೇಂದ್ರದ ಸಹಕಾರ ಅತ್ಯಗತ್ಯವಾಗಿದೆ ಎಂದು ಅವರು ತಿಳಿಸಿದ್ದರು.

 

 

Exit mobile version