ಬೆಂಗಳೂರು (ಜುಲೈ 23): ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದರೂ, ಇದೀಗ ಮತ್ತೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದಿನಿಂದ ಜುಲೈ 23ರಿಂದ ಮುಂದಿನ ಕೆಲವು ದಿನಗಳವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಚಟುವಟಿಕೆ ದುರ್ಬಲವಾಗಲಿದ್ದು, ಹಲವು ಪ್ರದೇಶಗಳಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ.
ಈ ಬಾರಿ ಮುಂಗಾರು ಆರಂಭಿಕ ಹಂತದಲ್ಲಿ ಮಳೆಯ ಕೊರತೆ ಕಂಡುಬಂದಿತ್ತು. ನಂತರ ಕೆಲವು ದಿನಗಳ ಕಾಲ ಉತ್ತಮ ಮಳೆಯಾದರೂ, ಇದೀಗ ಮತ್ತೆ ಮಳೆ ವಿರಾಮ ಪಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಇದರಿಂದ ರೈತರು, ನಗರ ನಿವಾಸಿಗಳು ಹಾಗೂ ಜಲಾಶಯಗಳ ಸ್ಥಿತಿಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ಕರಾವಳಿ ಭಾಗದ ಮಂಗಳೂರು ಮತ್ತು ಉಡುಪಿಯಲ್ಲಿ ಗರಿಷ್ಠ 30 ಡಿಗ್ರಿ ತಾಪಮಾನ ಹಾಗೂ ಕನಿಷ್ಠ 24 ಡಿಗ್ರಿ ದಾಖಲಾಗಲಿದೆ. ಕಾರವಾರದಲ್ಲಿ ಗರಿಷ್ಠ 28 ಡಿಗ್ರಿ ಮತ್ತು ಕನಿಷ್ಠ 27 ಡಿಗ್ರಿ ತಾಪಮಾನ ಇರಲಿದೆ.
ಮಲೆನಾಡಿನ ಮಡಿಕೇರಿ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಹವಾಮಾನ ತುಸು ತಂಪಾಗಿರಲಿದ್ದು, ಮಡಿಕೇರಿಯಲ್ಲಿ 26-21 ಡಿಗ್ರಿ, ಚಿಕ್ಕಮಗಳೂರಿನಲ್ಲಿ 24-19 ಡಿಗ್ರಿ ಹಾಗೂ ಹಾಸನದಲ್ಲಿ 26-21 ಡಿಗ್ರಿ ತಾಪಮಾನ ದಾಖಲಾಗುವ ನಿರೀಕ್ಷೆಯಿದೆ.
ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ ಮತ್ತು ಬಳ್ಳಾರಿ ಭಾಗಗಳಲ್ಲಿ ಗರಿಷ್ಠ 28 ರಿಂದ 31 ಡಿಗ್ರಿ ಸೆಲ್ಸಿಯಸ್ ನಡುವೆ ತಾಪಮಾನ ದಾಖಲಾಗುವ ಸಾಧ್ಯತೆಯಿದೆ. ಮೈಸೂರು, ಮಂಡ್ಯ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲೂ ಗರಿಷ್ಠ 30 ರಿಂದ 31 ಡಿಗ್ರಿ ತಾಪಮಾನ ಇರಲಿದೆ.
ಒಟ್ಟಾರೆ, ಮುಂದಿನ ಕೆಲವು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಮಳೆಯ ಸಾಧ್ಯತೆ ಕಡಿಮೆಯಿದ್ದು, ಮೋಡ ಕವಿದ ವಾತಾವರಣದ ನಡುವೆಯೇ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಮಾತ್ರ ಇದೆ. ಸಾರ್ವಜನಿಕರು ಹಾಗೂ ರೈತರು ಹವಾಮಾನ ಇಲಾಖೆಯ ಮುಂದಿನ ಮುನ್ಸೂಚನೆಗಳನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಒಳಿತು.





