ಕೊಪ್ಪಳ: ಜಿಲ್ಲೆಯಲ್ಲಿ ರಸ್ತೆ ಅಪಘಾತಗಳ ಸರಣಿ ಮುಂದುವರಿದಿದ್ದು, ನಿನ್ನೆ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ದುರ್ಮರಣಕ್ಕೀಡಾಗಿದ್ದಾರೆ. ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮದ ಬಳಿ ವೇಗವಾಗಿ ಬಂದ ಬುಲೆರೋ ವಾಹನವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಮೃತರನ್ನು ಕೊಪ್ಪಳ ತಾಲೂಕಿನ ಹೊಸಹಳ್ಳಿ ಗ್ರಾಮದ ನಿವಾಸಿಗಳಾದ ವಾಜೀದ್ ಮತ್ತು ರಾಜಾ ಹುಸೇನ್ ಹಾಗೂ ಗಂಗಾವತಿ ತಾಲೂಕಿನ ಶ್ರೀರಾಮನಗರದ ನಿವಾಸಿ ಆಸೀಫ್ ಎಂದು ಗುರುತಿಸಲಾಗಿದೆ. ಈ ಮೂವರು ಯುವಕರು ಶ್ರೀರಾಮನಗರದಿಂದ ಹೊಸಹಳ್ಳಿ ಗ್ರಾಮಕ್ಕೆ ಬೈಕ್ನಲ್ಲಿ ತೆರಳುತ್ತಿದ್ದರು. ಇಂದರಗಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗ, ಎದುರುಗಡೆಯಿಂದ ಅತೀ ವೇಗವಾಗಿ ಬಂದ ಬುಲೆರೋ ವಾಹನ ನಿಯಂತ್ರಣ ತಪ್ಪಿ ಬೈಕ್ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಯುವಕರು ರಸ್ತೆಯ ಮೇಲೆ ಬಿದ್ದಿದ್ದಾರೆ. ಗಂಭೀರ ಗಾಯಗೊಂಡಿದ್ದ ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತ ಸಂಭವಿಸುತ್ತಿದ್ದಂತೆ ಬುಲೆರೋ ವಾಹನವನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ವಿಷಯ ತಿಳಿದ ತಕ್ಷಣ ಮುನಿರಾಬಾದ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಇನ್ನೂ ಪರಾರಿಯಾಗಿರುವ ಬುಲೆರೋ ಚಾಲಕನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೂಳಿ ದಾಳಿಯಿಂದ 57 ವರ್ಷದ ವೃದ್ಧ ಬಲಿ
ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹುಲಿಮಂಗಲ ಗ್ರಾಮದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ 57 ವರ್ಷದ ವೃದ್ಧನೊಬ್ಬರ ಮೇಲೆ ಗೂಳಿಯು ದಾಳಿ ಮಾಡಿದ ಪರಿಣಾಮ ವೃದ್ದ ಸಾವನ್ನಪ್ಪಿದ್ದಾರೆ.
ಘಟನೆ ನಿನ್ನೆ ಹುಲಿಮಂಗಲ ಗ್ರಾಮದ ಒಳ ರಸ್ತೆಯೊಂದರಲ್ಲಿ ನಡೆದಿದೆ. ಮೃತ ಪಟ್ಟ ವ್ಯಕ್ತಿಯನ್ನು ಗ್ರಾಮದ ಹುಲಿಮಂಗಲದ ನಿವಾಸಿ ರಾಮರೆಡ್ಡಿ (ವಯಸ್ಸು 57) ಎಂದು ಗುರುತಿಸಲಾಗಿದೆ. ರಾಮರೆಡ್ಡಿ ಪ್ರತಿದಿನವೂ ಅದೇ ರಸ್ತೆಯ ಮಾರ್ಗವಾಗಿ ಓಡಾಡುತ್ತಿದ್ದರು. ನಿನ್ನೆ ಅದೇ ದಾರಿಯಲ್ಲಿ ಸಂಚರಿಸುತ್ತದ್ದ ಗೂಳಿಯೊಂದು ವೃದ್ದರ ಮೇಲೆ ದಾಳಿ ಮಾಡಿದೆ. ನೋವು ತಾಳದಾರದೇ ವೃದ್ದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆಯ ದೃಶ್ಯಗಳು ಸ್ಥಳಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಹೆಬ್ಬಗೋಡು ಪೊಲೀಸ್ ಠಾಣೆಯಲ್ಲಿ ಈ ಸಂಬಂಧಿತ ಪ್ರಕರಣವನ್ನು ಅಧಿಕೃತವಾಗಿ ದಾಖಲಿಸಲಾಗಿದೆ





