ಬೆಂಗಳೂರು ಅಭಿವೃದ್ಧಿ ಖಾತೆ ವಿಚಾರದಲ್ಲಿ ಅಸಮಾಧಾನಗೊಂಡಿದ್ದ ಸಚಿವ ಕೃಷ್ಣ ಬೈರೇಗೌಡ ಕೊನೆಗೂ ತಣ್ಣಗಾಗಿದ್ದು, ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇಂದು ಜಿಬಿಎ ಕೇಂದ್ರ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡ ಅವರು, ಅಧಿಕಾರ ಸ್ವೀಕಾರದ ಬಳಿಕ ಐವರು ಜಿಬಿಎ ಆಯುಕ್ತರೊಂದಿಗೆ ಮಹತ್ವದ ಸಭೆ ನಡೆಸಿ ನಗರದ ಅಭಿವೃದ್ಧಿ ಯೋಜನೆಗಳ ಕುರಿತು ಸಮಗ್ರ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಬೆಂಗಳೂರು ನಗರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ವಿವಿಧ ಯೋಜನೆಗಳ ಅನುಷ್ಠಾನ ಹಾಗೂ ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ನಗರದ ರಸ್ತೆ ಗುಂಡಿಗಳ ಸಮಸ್ಯೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
“ಒಂದು ಕಡೆ ರಸ್ತೆ ಕಾಮಗಾರಿ ನಡೆಸಿದರೆ, ಮತ್ತೊಂದು ಕಡೆ ಮತ್ತೆ ಗುಂಡಿಗಳು ಕಾಣಿಸಿಕೊಳ್ಳುತ್ತಿವೆ. ಈ ಸಮಸ್ಯೆ ಬೇರೆ ರಾಜ್ಯಗಳಲ್ಲಿ ಅಷ್ಟಾಗಿ ಕಾಣಿಸುವುದಿಲ್ಲ. ಆದರೆ ಬೆಂಗಳೂರಿನಲ್ಲೇ ಯಾಕೆ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ? ಬೆಂಗಳೂರು ಎಂದರೆ ಗುಂಡಿಗಳ ನಗರ ಎಂಬ ಭಾವನೆ ಸಾರ್ವಜನಿಕರಲ್ಲಿ ಮೂಡುವಂತಾಗಿರುವುದು ಬೇಸರದ ಸಂಗತಿ” ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ನಗರದ ರಸ್ತೆ ಗುಂಡಿಗಳ ಸಮಸ್ಯೆ ಜನರ ದೈನಂದಿನ ಬದುಕಿನ ಮೇಲೆ ಪರಿಣಾಮ ಬೀರುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು. ಕೇವಲ ತಾತ್ಕಾಲಿಕ ದುರಸ್ತಿ ಕಾರ್ಯಗಳಿಗಿಂತ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಬೇಕೆಂದು ತಿಳಿಸಿದರು.
ಸಭೆಯಲ್ಲಿ ನಗರದಲ್ಲಿ ನಡೆಯುತ್ತಿರುವ ಪ್ರಮುಖ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು, ಸಂಚಾರ ದಟ್ಟಣೆ ನಿವಾರಣೆಗೆ ಕೈಗೊಳ್ಳಲಾಗಿರುವ ಯೋಜನೆಗಳು ಹಾಗೂ ಸಾರ್ವಜನಿಕ ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದ ವಿಚಾರಗಳ ಬಗ್ಗೆಯೂ ಚರ್ಚೆ ನಡೆಯಿತು. ವಿವಿಧ ಕಾಮಗಾರಿಗಳ ಪ್ರಗತಿ ವರದಿ ಪರಿಶೀಲಿಸಿದ ಸಚಿವರು, ಯೋಜನೆಗಳನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನಗೊಂಡಿದ್ದ ಕೃಷ್ಣ ಬೈರೇಗೌಡ ಇದೀಗ ಬೆಂಗಳೂರು ಅಭಿವೃದ್ಧಿಯ ಜವಾಬ್ದಾರಿಯನ್ನು ಅಧಿಕೃತವಾಗಿ ವಹಿಸಿಕೊಂಡಿದ್ದು, ನಗರದ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ನಿಲುವು ತಾಳಿರುವುದು ಮೊದಲ ದಿನದ ಸಭೆಯಲ್ಲೇ ಸ್ಪಷ್ಟವಾಗಿದೆ. ರಸ್ತೆ ಗುಂಡಿಗಳ ಸಮಸ್ಯೆ ಸೇರಿದಂತೆ ಸಾರ್ವಜನಿಕರಿಗೆ ನೇರವಾಗಿ ತೊಂದರೆ ಉಂಟುಮಾಡುವ ವಿಷಯಗಳಿಗೆ ಆದ್ಯತೆ ನೀಡಿ, ಅಧಿಕಾರಿಗಳ ಜವಾಬ್ದಾರಿಯನ್ನು ಹೆಚ್ಚಿಸುವ ಮೂಲಕ ನಗರಾಭಿವೃದ್ಧಿಗೆ ಹೊಸ ವೇಗ ನೀಡುವ ಸಂದೇಶವನ್ನು ಸಚಿವರು ರವಾನಿಸಿದ್ದಾರೆ.





