ವಿಜಯನಗರದ ಪ್ರಖ್ಯಾತ ರಾಜ ಕೃಷ್ಣದೇವರಾಯರ ಸಮಾಧಿ ಸ್ಥಳದಲ್ಲಿ ಮಾಂಸ ಮಾರಾಟ ನಡೆಯುತ್ತಿರುವುದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಇದು ಕೇವಲ ಕನ್ನಡಿಗರಿಗೆ ಮಾತ್ರವಲ್ಲ, ಇಡೀ ರಾಷ್ಟ್ರಕ್ಕೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರರಾಗಿದ್ದ ವಿಜಯನಗರದ ಶ್ರೀ ಕೃಷ್ಣದೇವರಾಯರ ಸಮಾಧಿಯ ಶೋಚನೀಯ ಸ್ಥಿತಿಯಿದು. ಕೆಲವರು ಈ ಪವಿತ್ರ ಸ್ಥಳವನ್ನು ಮಾಂಸದ ಮಾರುಕಟ್ಟೆಯಾಗಿ ಪರಿವರ್ತಿಸಿದ್ದಾರೆ. ಇದು ಕನ್ನಡ ನಾಡಿನ ಹೆಮ್ಮೆಯ ಅರಸ, ಅಸಾಮಾನ್ಯ ಆಡಳಿತಗಾರ, ಅಪ್ರತಿಮ ದಂಡನಾಯಕ ಶ್ರೀ ಕೃಷ್ಣದೇವರಾಯರಿಗೆ ಮಾಡಿದ ಘೋರ ಅವಮಾನವಾಗಿದೆ.
ಹಿಂದೂ ದೇವಾಲಯಗಳನ್ನು ನಾಶಪಡಿಸಿ, ದೇಶದ ಸಂಪತ್ತನ್ನು ದೋಚಿ, ಸಾವಿರಾರು ಹಿಂದೂಗಳನ್ನು ಕ್ರೂರವಾಗಿ ಕೊಂದ ಔರಂಗಜೇಬನ ಸಮಾಧಿಯನ್ನು ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ತೆರಿಗೆದಾರರ ಹಣದಿಂದ ಸಂರಕ್ಷಿಸುತ್ತಿದೆ. ಆದರೆ, ವಿಜಯನಗರ ಸಾಮ್ರಾಜ್ಯವನ್ನು ವಿಸ್ತರಿಸಿದ ಪರಾಕ್ರಮಿ, ಕಲೆ ಮತ್ತು ಸಾಹಿತ್ಯದ ಪೋಷಕರಾದ ಶ್ರೀ ಕೃಷ್ಣದೇವರಾಯರ ಸಮಾಧಿಗೆ ಈ ರೀತಿಯ ದಿವ್ಯ ನಿರ್ಲಕ್ಷ್ಯ ಏಕೆ?
ಇದು ಕನ್ನಡಿಗರಿಗೆ ಮಾತ್ರವಲ್ಲ, ಇಡೀ ರಾಷ್ಟ್ರಕ್ಕೆ ಮಾಡಿದ ಅವಮಾನವಾಗಿದೆ. ಸಮಾಧಿಯ ಪಾವಿತ್ರ್ಯತೆಯನ್ನು ಹಾಳುಮಾಡುತ್ತಿರುವ ಮಾಂಸ ಮಾರಾಟಗಾರರನ್ನು ಜಿಲ್ಲಾಡಳಿತವು ತಕ್ಷಣವೇ ಜಾಗ ಖಾಲಿ ಮಾಡುವಂತೆ ಸೂಚಿಸಬೇಕು. ಜೊತೆಗೆ, ಈ ಸ್ಥಳದ ನೈರ್ಮಲ್ಯ ಮತ್ತು ಸಮಾಧಿಯ ಪಾವಿತ್ರ್ಯತೆಯನ್ನು ಕಾಪಾಡಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು.





