ಬಿಡದಿ ಟೌನ್ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್–ಬಿಜೆಪಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪಾದಯಾತ್ರೆಗೆ ಭೈರಮಂಗಲ ಗ್ರಾಮದಲ್ಲಿ ಚಾಲನೆ ದೊರೆತಿದೆ. ಸಸಿಗೆ ನೀರು ಹಾಕುವ ಮೂಲಕ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಿದರು. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ರೈತರ ಜಮೀನುಗಳನ್ನು ವಶಪಡಿಸಿಕೊಳ್ಳುವ ಪ್ರಯತ್ನವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ಪಾದಯಾತ್ರೆ ವೇಳೆ ಮಾತನಾಡಿದ ಕುಮಾರಸ್ವಾಮಿ, ರೈತರ ಹಿತಕ್ಕಾಗಿ ಜೆಡಿಎಸ್ ಹೋರಾಟ ನಡೆಸುತ್ತಿದೆ. ಕಳೆದ 515 ದಿನಗಳಿಂದ ರೈತರು ಬಿಡದಿ ಟೌನ್ಶಿಪ್ ಯೋಜನೆ ವಿರುದ್ಧ ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ. ಹಲವು ರೀತಿಯ ಒತ್ತಡ ಮತ್ತು ಬೆದರಿಕೆಗಳ ನಡುವೆಯೂ ರೈತರು ತಮ್ಮ ಹೋರಾಟವನ್ನು ಮುಂದುವರಿಸಿದ್ದಾರೆ. ಈ ಹೋರಾಟ ಯಾವುದೇ ರಾಜಕೀಯ ಸ್ವಾರ್ಥಕ್ಕಾಗಿ ನಡೆಯುತ್ತಿಲ್ಲ. ರೈತರ ಭೂಮಿ ಮತ್ತು ಭವಿಷ್ಯವನ್ನು ರಕ್ಷಿಸುವ ಉದ್ದೇಶದಿಂದ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಬಿಡದಿ ಟೌನ್ಶಿಪ್ ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಜೆಡಿಎಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆದರೆ 2006ರಲ್ಲಿ ಯೋಜನೆ ಪ್ರಾರಂಭಿಸಿದಾಗ ಇದ್ದ ನಿರ್ಧಾರವೇ ಬೇರೆ ಆಗಿತ್ತು. ತಮ್ಮ ಅವಧಿಯಲ್ಲಾಗಲಿ ಅಥವಾ ಬಿಜೆಪಿ ಸರ್ಕಾರದ ಅವಧಿಯಲ್ಲಾಗಲಿ ಯೋಜನೆಗೆ ಸಂಬಂಧಿಸಿದ ಪ್ರಾಥಮಿಕ ಹಾಗೂ ಅಂತಿಮ ಅಧಿಸೂಚನೆ ಹೊರಡಿಸಿರಲಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ರೈತರ ಜಮೀನಿಗೆ ಮೊದಲು 2 ಕೋಟಿ ರೂಪಾಯಿ ಪರಿಹಾರ ನೀಡುತ್ತೇವೆ ಎಂದು ಹೇಳಲಾಗಿತ್ತು. ಇದೀಗ 3 ಕೋಟಿ ರೂಪಾಯಿ ನೀಡುವುದಾಗಿ ಹೇಳುತ್ತಿದ್ದಾರೆ. ‘ಏನು ವ್ಯಾಪಾರ ಮಾಡುತ್ತಿದ್ದೀರಿ?’ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ರೈತರ ಭೂಮಿಯನ್ನು ಪೊಲೀಸ್ ಬಲ ಬಳಸಿ ವಶಪಡಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. 2006ರಲ್ಲಿ 2,600 ಎಕರೆ ಸರ್ಕಾರಿ ಜಮೀನು ಇತ್ತು. ಆ ಜಮೀನು ಈಗ ಎಲ್ಲಿಗೆ ಹೋಯಿತು ಎಂಬುದನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ಯೋಜನೆ ಕುರಿತು ಕಾಂಗ್ರೆಸ್ ಸರ್ಕಾರ ಸಮಿತಿ ರಚಿಸಿರುವುದನ್ನೂ ಕುಮಾರಸ್ವಾಮಿ ಪ್ರಶ್ನಿಸಿದರು. 2006ರಲ್ಲಿಯೇ ಈ ವಿಚಾರಕ್ಕೆ ಸಂಬಂಧಿಸಿದಂತೆ ಸತ್ಯಶೋಧನಾ ಸಮಿತಿ ರಚಿಸಲಾಗಿತ್ತು. ಆ ಸಮಿತಿ ಏನು ವರದಿ ನೀಡಿತ್ತು ಎಂಬುದನ್ನು ಸರ್ಕಾರ ಮೊದಲು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.
ಸಚಿವ ಹೆಚ್.ಸಿ. ಬಾಲಕೃಷ್ಣ ವಿರುದ್ಧವೂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ‘ಬಾಲಕೃಷ್ಣ ನನ್ನ ಹಳೆಯ ಮಿತ್ರ’ ಎಂದು ಹೇಳುವುದಿಲ್ಲ ಎಂದು ವ್ಯಂಗ್ಯವಾಡಿದ ಅವರು, ಬಾಲಕೃಷ್ಣ ಅವರು ಜೆಡಿಎಸ್ನಲ್ಲಿ ಮೂರು ಬಾರಿ, ಬಿಜೆಪಿಯಲ್ಲಿ ಒಂದು ಬಾರಿ ಹಾಗೂ ಕಾಂಗ್ರೆಸ್ನಲ್ಲಿ ಒಂದು ಬಾರಿ ಗೆದ್ದಿದ್ದಾರೆ. ಇದೀಗ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.
ಯೋಜನೆಗೆ ಕೆಲ ದಲ್ಲಾಳಿಗಳು ಮಾತ್ರ ಒಪ್ಪಿಗೆ ಸೂಚಿಸಿ ಜಮೀನು ನೀಡುತ್ತಿದ್ದಾರೆ. ಆದರೆ ಪಿತ್ರಾರ್ಜಿತ ಆಸ್ತಿ ಹೊಂದಿರುವ ರೈತರು ಹಾಗೂ ಸ್ವಾಭಿಮಾನಿ ರೈತ ಮಹಿಳೆಯರು ಯೋಜನೆ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ರೈತರು ಇಂತಹವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಕುಮಾರಸ್ವಾಮಿ ಸಲಹೆ ನೀಡಿದರು.
ಇದೇ ವೇಳೆ ನೈಸ್ ರಸ್ತೆಯ ಟೋಲ್ ಸಂಗ್ರಹದ ವಿಚಾರದಲ್ಲೂ ಸರ್ಕಾರದ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ, ಹೈಕೋರ್ಟ್ ತೀರ್ಪನ್ನು ಅನುಸರಿಸಿ ಜನರು ಕಾನೂನುಬಾಹಿರವಾಗಿ ಟೋಲ್ ಹಣ ಪಾವತಿಸಬಾರದು ಎಂದರು.





