ಬೆಂಗಳೂರು (ಆ.3): ಬಹಳ ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆಗೆ ಇಂದು ಅಂತಿಮವಾಗಿ ತೆರೆ ಬಿದ್ದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಪುಟಕ್ಕೆ ಹೊಸ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಿರಿಯ ಶಾಸಕರಾದ ಬಸವರಾಜ ರಾಯರೆಡ್ಡಿ, ಲಕ್ಷ್ಮಣ ಸವದಿ, ಎನ್. ಚೆಲುವರಾಯಸ್ವಾಮಿ ಸೇರಿದಂತೆ ಒಟ್ಟು 8 ಮಂದಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಬಸವರಾಜ ರಾಯರೆಡ್ಡಿ (ಯಲಬುರ್ಗಾ): ಆರು ಬಾರಿಯ ಶಾಸಕರಿಗೆ ಸಚಿವ ಸ್ಥಾನ
ಆರು ಬಾರಿ ಶಾಸಕರಾಗಿ ಹಾಗೂ 11ನೇ ಲೋಕಸಭೆಯ ಸಂಸದರಾಗಿ ಸೇವೆ ಸಲ್ಲಿಸಿರುವ ಬಸವರಾಜ ರಾಯರೆಡ್ಡಿ ಅವರು ರಾಜ್ಯ ರಾಜಕಾರಣದ ಹಿರಿಯ ನಾಯಕರು. 1980ರ ದಶಕದಲ್ಲಿ ಜನತಾದಳ ಮತ್ತು ಜನತಾದಳ (ಯು) ಮೂಲಕ ಸಕ್ರಿಯರಾಗಿದ್ದ ಇವರು, 2000ರ ಆರಂಭದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಹಿಂದೆ ಉನ್ನತ ಶಿಕ್ಷಣ ಸಚಿವರಾಗಿದ್ದ ಇವರು, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರಾಗಿಯೂ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಇಂದು ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಲಕ್ಷ್ಮಣ ಸವದಿ (ಅಥಣಿ): ನಾಲ್ಕು ಬಾರಿಯ ಶಾಸಕ, ಮಾಜಿ ಉಪಮುಖ್ಯಮಂತ್ರಿಗೆ ಸ್ಥಾನ
ನಾಲ್ಕು ಬಾರಿ ಶಾಸಕ ಹಾಗೂ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಕೆಲಸ ಮಾಡಿರುವ ಲಕ್ಷ್ಮಣ ಸವದಿ ಅವರು ರಾಜ್ಯ ರಾಜಕೀಯದ ಅನುಭವಿ ನಾಯಕರು. ಹಿಂದೆ ಬಿಜೆಪಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ, ಸಾರಿಗೆ ಮತ್ತು ಕೃಷಿ ಸಚಿವರಾಗಿ ಜವಾಬ್ದಾರಿ ನಿರ್ವಹಿಸಿದ್ದರು. 2023ರ ಚುನಾವಣೆ ವೇಳೆ ಕಾಂಗ್ರೆಸ್ ಸೇರಿ ದೊಡ್ಡ ಅಂತರದಿಂದ ಗೆದ್ದಿದ್ದ ಇವರಿಗೆ ಈಗ ಸಚಿವ ಸ್ಥಾನ ಒಲಿದಿದ್ದು, ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಎನ್. ಚೆಲುವರಾಯಸ್ವಾಮಿ (ನಾಗಮಂಗಲ): ನಾಲ್ಕು ಬಾರಿಯ ಶಾಸಕ, ಮಾಜಿ ಸಚಿವ
ನಾಲ್ಕು ಬಾರಿ ಶಾಸಕರಾಗಿ ಮತ್ತು ಒಂದು ಬಾರಿ ಸಂಸದರಾಗಿ ಸೇವೆ ಸಲ್ಲಿಸಿರುವ ಚೆಲುವರಾಯಸ್ವಾಮಿ ಅವರು ಕೂಡ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ರಾಜಕೀಯ ದಿನಗಳ ಆರಂಭದಲ್ಲಿ ಜೆಡಿಎಸ್ನ ಪ್ರಭಾವಿ ನಾಯಕರಾಗಿದ್ದ ಇವರು, ಜೆಡಿಎಸ್ ಅವಧಿಯಲ್ಲಿ ಆರೋಗ್ಯ ಮತ್ತು ಸಾರಿಗೆ ಸಚಿವರಾಗಿದ್ದರು. ನಂತರ ಕಾಂಗ್ರೆಸ್ ಸೇರಿ ಕೃಷಿ ಸಚಿವರಾಗಿ ಜವಾಬ್ದಾರಿ ನಿಭಾಯಿಸಿದ ಅನುಭವ ಹೊಂದಿದ್ದಾರೆ.
ಮಧು ಬಂಗಾರಪ್ಪ (ಸೊರಬ): ಮಾಜಿ ಸಿಎಂ ಪುತ್ರ, ಪುನರಾಯ್ಕೆ
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಅವರ ಪುತ್ರರಾದ ಮಧು ಬಂಗಾರಪ್ಪ ಅವರು ಪ್ರಸ್ತುತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. 2013ರಲ್ಲಿ ಜೆಡಿಎಸ್ನಿಂದ ಮೊದಲ ಬಾರಿಗೆ ಶಾಸಕರಾಗಿದ್ದ ಇವರು, 2021ರಲ್ಲಿ ಕಾಂಗ್ರೆಸ್ ಸೇರಿದರು. 2023ರಲ್ಲಿ ಸ್ವಂತ ಸಹೋದರನ ವಿರುದ್ಧವೇ ಭರ್ಜರಿ ಗೆಲುವು ಸಾಧಿಸಿದ ಇವರು, ಈಗ ಎರಡನೇ ಬಾರಿಗೆ ಸಂಪುಟದಲ್ಲಿ ಮುಂದುವರಿಯುತ್ತಿದ್ದು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಎಸ್.ಎಸ್. ಮಲ್ಲಿಕಾರ್ಜುನ್ (ದಾವಣಗೆರೆ ಉತ್ತರ): ಹಿರಿಯ ನಾಯಕರ ಪುತ್ರ, ಮತ್ತೆ ಸಚಿವ
ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರ ಪುತ್ರರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು 1996ರಿಂದ ಹಂತ ಹಂತವಾಗಿ ಒಟ್ಟು 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಿಂದೆ ಎಸ್.ಎಂ. ಕೃಷ್ಣ ಹಾಗೂ ಸಿದ್ದರಾಮಯ್ಯ ಅವರ ಸಂಪುಟಗಳಲ್ಲಿ ಯುವಜನ ಸೇವೆ, ತೋಟಗಾರಿಕೆ ಮತ್ತು ಗಣಿ ಇಲಾಖೆ ಸಚಿವರಾಗಿ ಕೆಲಸ ಮಾಡಿದ ದೊಡ್ಡ ಅನುಭವ ಹೊಂದಿದ್ದಾರೆ. ಕೊನೆ ಕ್ಷಣದ ಕಸರತ್ತಿನಲ್ಲಿ ಇವರು ಮತ್ತೆ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದು, ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಬಿ. ನಾಗೇಂದ್ರ (ಬಳ್ಳಾರಿ ಗ್ರಾಮಾಂತರ): 4 ಬಾರಿಯ ಶಾಸಕ, ಮಾಜಿ ಸಚಿವ
ಬಿಕಾಂ ಪದವೀಧರರಾದ ಬಿ. ನಾಗೇಂದ್ರ ಅವರು ಇದುವರೆಗೆ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2008ರಲ್ಲಿ ಪಕ್ಷೇತರರಾಗಿ, 2013ರಲ್ಲಿ ಬಿಜೆಪಿಯಿಂದ ಹಾಗೂ 2018ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ ಇತಿಹಾಸ ಇವರದ್ದಾಗಿದೆ. ಹಿಂದೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವರಾಗಿ ಇವರು ಕಾರ್ಯನಿರ್ವಹಿಸಿದ್ದರು. ಇದೀಗ ಮತ್ತೆ ಸಚಿವ ಸ್ಥಾನ ಸಿಕ್ಕಿದ್ದು, ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಪಿ.ಎಂ. ನರೇಂದ್ರಸ್ವಾಮಿ (ಮಳವಳ್ಳಿ): ಮೂಲ ಕಾಂಗ್ರೆಸ್ಸಿಗನಿಗೆ ಅವಕಾಶ
ಯೂತ್ ಕಾಂಗ್ರೆಸ್ ಮೂಲಕ ರಾಜಕೀಯ ಪ್ರವೇಶಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಮೂಲ ಕಾಂಗ್ರೆಸ್ಸಿಗ ನರೇಂದ್ರಸ್ವಾಮಿ. 2013 ಮತ್ತು 2023ರ ಅವಧಿಯಲ್ಲಿ ಸಚಿವ ಸ್ಥಾನದ ರೇಸ್ನಲ್ಲಿದ್ದರೂ ಅವಕಾಶ ಕೈತಪ್ಪಿತ್ತು. ಹೈಕಮಾಂಡ್ ಹಾಗೂ ರಾಹುಲ್ ಗಾಂಧಿ ಅವರೊಂದಿಗೆ ಉತ್ತಮ ಒಡನಾಟ ಹೊಂದಿರುವ ಇವರಿಗೆ ಈ ಬಾರಿ ಅರ್ಹ ಸ್ಥಾನಮಾನ ನೀಡಲಾಗಿದ್ದು, ಡಾ. ಬಾಬಾ ಅಂಬೇಡ್ಕರ್ ಹೆಸರಿನಲ್ಲಿ ಹಾಗೂ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಪುಟ್ಟರಂಗಶೆಟ್ಟಿ (ಚಾಮರಾಜನಗರ): 4 ಬಾರಿಯ ಶಾಸಕ, ಮಾಜಿ ಸಚಿವ
ಕೃಷಿ ಮತ್ತು ಉದ್ಯಮ ಹಿನ್ನೆಲೆಯುಳ್ಳ ಬಿ.ಎ. ಪದವೀಧರರಾದ ಸಿ. ಪುಟ್ಟರಂಗಶೆಟ್ಟಿ ಅವರು ಕೂಡ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 2008ರಿಂದ ಸತತವಾಗಿ 4 ಬಾರಿ ಗೆದ್ದು ಬಂದಿರುವ ಪ್ರಭಾವಿ ಹಿಂದುಳಿದ ವರ್ಗಗಳ ನಾಯಕ. ಹಿಂದೆ ಎಂಎಸ್ಐಎಲ್ (MSIL) ಅಧ್ಯಕ್ಷರಾಗಿ ಹಾಗೂ ಸಚಿವರಾಗಿ ಕೆಲಸ ಮಾಡಿರುವ ಇವರು ಮತ್ತೊಮ್ಮೆ ಸಚಿವ ಸಂಪುಟದ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದಾರೆ.
