ಚಿಕ್ಕಬಳ್ಳಾಪುರ, ಅಕ್ಟೋಬರ್ 28: ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿ ಧಾಮದಲ್ಲಿರುವ ಐತಿಹಾಸಿಕ ಟಿಪ್ಪು ಸುಲ್ತಾನ್ ಸಮ್ಮರ್ ಪ್ಯಾಲೆಸ್ (ಬೇಸಿಗೆ ಅರಮನೆ) ಮೇಲೆ ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು ಬರೆಯುವ ಘಟನೆ ನಡೆದಿದ್ದು, ಈ ವಿಕೃತಿ ಪ್ರಕರಣದಲ್ಲಿ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ.
ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ (ASI) ಅಧೀನದಲ್ಲಿರುವ ಈ ಐತಿಹಾಸಿಕ ಸ್ಥಳದ ಗೋಡೆಯ ಮೇಲೆ ಬಿಷ್ಣೋಯ್ ಹೆಸರನ್ನು ಬರೆದಿರುವುದು ಟಿಪ್ಪು ಸುಲ್ತಾನ್ ಅಭಿಮಾನಿಗಳು ಮತ್ತು ಪ್ರವಾಸಿಗರಲ್ಲಿ ತೀವ್ರ ಅಸಮಾಧಾನವನ್ನು ಉಂಟುಮಾಡಿದೆ.
ಸದ್ಯ ದೆಹಲಿಯ ತಿಹಾರ್ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ಒಬ್ಬ ಅಂತಾರಾಷ್ಟ್ರೀಯ ಗ್ಯಾಂಗ್ಸ್ಟರ್ ಆಗಿದ್ದು, ಆತನ ಹೆಸರನ್ನು ಈ ರೀತಿಯಲ್ಲಿ ದುರ್ಬಳಕೆ ಮಾಡಿರುವುದು ಗಂಭೀರ ಕಳವಳಕ್ಕೆ ಕಾರಣವಾಗಿದೆ. ಈ ಘಟನೆಯು ಬೆಳಕಿಗೆ ಬಂದ ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಅವರ ಸೂಚನೆಯಂತೆ ಸುಮೋಟೋ ಕೇಸ್ ದಾಖಲಿಸಲಾಗಿದೆ. ಈ ಘಟನೆಯು ಸುಮಾರು ಒಂದು ತಿಂಗಳ ಹಿಂದೆ ನಡೆದಿರುವ ಸಾಧ್ಯತೆ ಇದ್ದು, ದುಷ್ಕರ್ಮಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (BNSS) ಕಲಂ 324(2) ಮತ್ತು 329(3)ರಡಿ ಪ್ರಕರಣ ದಾಖಲಾಗಿದೆ.
ಈ ಘಟನೆಯ ಬಗ್ಗೆ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸೆ ಮಾತನಾಡಿದ್ದು, ದುಷ್ಕರ್ಮಿಗಳನ್ನು ಶೀಘ್ರವಾಗಿ ಪತ್ತೆಹಚ್ಚಲು ತನಿಖೆ ತೀವ್ರಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಸ್ಥಳದಲ್ಲಿ ಇರುವ ಸಿಸಿಟಿವಿ ಕ್ಯಾಮರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಆರೋಪಿಗಳನ್ನು ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸುವ ಭರವಸೆಯನ್ನು ಪೊಲೀಸರು ನೀಡಿದ್ದಾರೆ. ಇದೇ ವೇಳೆ, ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಸಿಬ್ಬಂದಿಯು ಗೋಡೆಯ ಮೇಲೆ ಬರೆದಿದ್ದ ಲಾರೆನ್ಸ್ ಬಿಷ್ಣೋಯ್ ಹೆಸರನ್ನು ತಕ್ಷಣವೇ ಅಳಿಸಿದ್ದಾರೆ. ಬಿಷ್ಣೋಯ್ ಹೆಸರಿನ ಮೇಲೆ ಬಣ್ಣವನ್ನು ಬಳಿದು ಗೋಡೆಯನ್ನು ಸ್ವಚ್ಛಗೊಳಿಸಲಾಗಿದೆ.





