ಬೆಂಗಳೂರು: ಭ್ರಷ್ಟಾಚಾರ ಆರೋಪಗಳನ್ನು ಎದುರಿಸುತ್ತಿರುವ ಹಲವು ಸರ್ಕಾರಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಿದೆ. ಆದಾಯ ಮೀರಿ ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆ ಈ ದಾಳಿ ನಡೆದಿದ್ದು, ಮಹತ್ವದ ದಾಖಲೆಗಳಿಗಾಗಿ ಅಧಿಕಾರಿಗಳು ತೀವ್ರ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಪಿಡಬ್ಲ್ಯುಡಿ (PWD) ಇಲಾಖೆಯ ಚೀಫ್ ಇಂಜಿನಿಯರ್ ಪುರುಷೋತ್ತಮ ದಾಸ್ ಅವರಿಗೆ ಸಂಬಂಧಿಸಿದಂತೆ ಒಟ್ಟು 11 ಕಡೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ಮೈಸೂರಿನಲ್ಲಿ 5 ಸ್ಥಳಗಳು ಮತ್ತು ಬೆಂಗಳೂರಿನಲ್ಲಿ 6 ಸ್ಥಳಗಳಲ್ಲಿ ಶೋಧ ಕಾರ್ಯ ಕೈಗೊಳ್ಳಲಾಗಿದೆ. ಪುರುಷೋತ್ತಮ ದಾಸ್ ಅವರು ಕರ್ನಾಟಕ ಸ್ಟೇಟ್ ಹೈವೇ ಡೆವಲಪ್ಮೆಂಟ್ ಪ್ರಾಜೆಕ್ಟ್ನ ಪ್ರಾಜೆಕ್ಟ್ ಡೈರೆಕ್ಟರ್ ಆಗಿಯೂ ಕಾರ್ಯನಿರ್ವಹಿಸುತ್ತಿದ್ದರು. ಅವರ ನಿವಾಸ, ಕಚೇರಿ ಹಾಗೂ ಆಪ್ತರ ಮನೆಗಳಲ್ಲಿಯೂ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಇದರ ಜೊತೆಗೆ ಬೆಂಗಳೂರು ಗ್ರಾಮಾಂತರ ಪ್ರದೇಶದ ಕರ್ನಾಟಕ ರೆಸಿಡೆನ್ಷಿಯಲ್ ಎಜುಕೇಶನ್ ಇನ್ಸ್ಟಿಟ್ಯೂಟ್ ಸೊಸೈಟಿಯ ಸೂಪರಿಂಟೆಂಡೆಂಟ್ ಇಂಜಿನಿಯರ್ ಹೆಚ್.ಎಂ. ಜನಾರ್ಧನ್ ಅವರ ಮೇಲೂ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಅವರ ಆಸ್ತಿ ವಿವರಗಳು ಹಾಗೂ ಹಣಕಾಸು ವ್ಯವಹಾರಗಳ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ದಾವಣಗೆರೆಯಲ್ಲಿ ಬೆಸ್ಕಾಂನ ಸಿವಿಲ್ ವಿಭಾಗದಲ್ಲಿ ಅಸಿಸ್ಟೆಂಟ್ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಆರ್.ಹೆಚ್. ಅರ್ಜುನ್ ಅವರ ಮನೆ ಹಾಗೂ ಕಚೇರಿಗಳ ಮೇಲೂ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ಅರ್ಜುನ್ ವಿರುದ್ಧ ಅಪಾರ ಪ್ರಮಾಣದ ಅಕ್ರಮ ಆಸ್ತಿ ಹೊಂದಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ದಾವಣಗೆರೆ ನಗರದ ನಿಟ್ಟುವಳ್ಳಿ ಪ್ರದೇಶದ ನಿವಾಸ, ಕಚೇರಿ ಹಾಗೂ ಶಿವಮೊಗ್ಗದ ಮನೆಯಲ್ಲಿ ಏಕಕಾಲದಲ್ಲಿ ಶೋಧ ನಡೆದಿದೆ.
ಶಿವಮೊಗ್ಗದ ಮನೆಯಲ್ಲಿ ಆಸ್ತಿ ಸಂಬಂಧಿಸಿದ ಮಹತ್ವದ ದಾಖಲೆಗಳು, ಚಿನ್ನ ಮತ್ತು ಬೆಳ್ಳಿ ವಸ್ತುಗಳು ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಜೊತೆಗೆ ಬ್ಯಾಂಕ್ ಖಾತೆಗಳು, ಜಮೀನು-ಮನೆಗಳ ದಾಖಲೆಗಳು ಸೇರಿದಂತೆ ಹಲವು ಹಣಕಾಸು ವ್ಯವಹಾರಗಳ ಕುರಿತು ಅಧಿಕಾರಿಗಳು ಆಳವಾದ ಪರಿಶೀಲನೆ ನಡೆಸುತ್ತಿದ್ದಾರೆ.
ಇದೇ ವೇಳೆ ಧಾರವಾಡದಲ್ಲಿ ಲ್ಯಾಂಡ್ ರೆಕಾರ್ಡ್ ವಿಭಾಗದ ಸರ್ವೇಯರ್ ಸೋಮಲಿಂಗಪ್ಪ ಅವರ ಮೇಲೂ ದಾಳಿ ನಡೆದಿದೆ. ಅವರ ನಿವಾಸ ಹಾಗೂ ಸಂಬಂಧಿತ ಸ್ಥಳಗಳಲ್ಲಿ ದಾಖಲೆಗಳ ಶೋಧ ಕಾರ್ಯ ಮುಂದುವರಿದಿದೆ.
ಬೆಳ್ಳಂಬೆಳಗ್ಗೆ ಆರಂಭವಾದ ಈ ದಾಳಿ ಕಾರ್ಯಾಚರಣೆ ಹಲವು ಗಂಟೆಗಳ ಕಾಲ ಮುಂದುವರಿದಿದ್ದು, ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಇನ್ನೂ ಕೆಲವು ಸ್ಥಳಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ.





