ವಿಮಾನ ದುರಂತದಲ್ಲಿ ಅಜಿತ್ ಪವಾರ್ ನಿಧನ: ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರಿಂದ ಸಂತಾಪ

Untitled design 2026 01 28T115415.602

ಬೆಂಗಳೂರು: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ಪ್ರಭಾವಿ ರಾಜಕೀಯ ನಾಯಕ ಅಜಿತ್ ಪವಾರ್ ಅವರು ಇಂದು ಬುಧವಾರ (ಜನವರಿ 28, 2026) ಬೆಳಿಗ್ಗೆ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ ನಿಧನರಾಗಿದ್ದಾರೆ. ಈ ದುರ್ಘಟನೆಯಿಂದ ಮಹಾರಾಷ್ಟ್ರ ಮಾತ್ರವಲ್ಲದೆ ಇಡೀ ದೇಶವೇ ಶೋಕದಲ್ಲಿ ಮುಳುಗಿದೆ.

ರಾಷ್ಟ್ರೀಯ ಮಾಧ್ಯಮಗಳು ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ನೀಡಿರುವ ಮಾಹಿತಿಯ ಪ್ರಕಾರ, ಮುಂಬೈನಿಂದ ಬಾರಾಮತಿಗೆ ತೆರಳುತ್ತಿದ್ದ ಲಿಯರ್ಜೆಟ್ 45 (Learjet 45) ಎಂಬ ಸಣ್ಣ ವಿಮಾನವು ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ವೇಳೆ ತಾಂತ್ರಿಕ ದೋಷಕ್ಕೆ ಒಳಗಾಗಿ ಪತನಗೊಂಡಿದೆ. ಲ್ಯಾಂಡಿಂಗ್ ಸಮಯದಲ್ಲಿ ವಿಮಾನವು ರನ್‌ವೇ ಸಮೀಪವೇ ನೆಲಕ್ಕಪ್ಪಳಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮ ಅಜಿತ್ ಪವಾರ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಅಗ್ನಿಶಾಮಕ ದಳ ಹಾಗೂ ರಕ್ಷಣಾ ತಂಡಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಈ ದುರ್ಘಟನೆಯ ಕಾರಣಗಳ ಕುರಿತು ತನಿಖೆ ಆರಂಭಿಸಲಾಗಿದ್ದು, ಡಿಜಿಸಿಎ ವಿಶೇಷ ಸಮಿತಿಯನ್ನು ರಚಿಸಿ ಸಂಪೂರ್ಣ ವರದಿ ನೀಡಲು ಸೂಚಿಸಿದೆ.

ಅಜಿತ್ ಪವಾರ್ ಅವರ ನಿಧನದ ಸುದ್ದಿ ಹೊರಬಿದ್ದ ಬೆನ್ನಲ್ಲೇ ದೇಶದಾದ್ಯಂತ ಶೋಕಾಚರಣೆ ವ್ಯಕ್ತವಾಗಿದೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಅನೇಕ ರಾಜಕೀಯ ನಾಯಕರು ತಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಸಂತಾಪ

“ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಮಾನ ಅಪಘಾತದಲ್ಲಿ ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಅವರ ನಿಧನವು ಸಾರ್ವಜನಿಕ ಜೀವನಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬ ಸದಸ್ಯರು, ಸಹೋದ್ಯೋಗಿಗಳು ಹಾಗೂ ಬೆಂಬಲಿಗರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ

“ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಅಕಾಲಿಕ ಮರಣ ಹೊಂದಿದ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ಅವರು ಮಹಾರಾಷ್ಟ್ರದ ಪ್ರಭಾವಿ ಹಾಗೂ ಜನಪ್ರಿಯ ನಾಯಕರಾಗಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಸದಸ್ಯರಿಗೆ ಹಾಗೂ ಅಭಿಮಾನಿಗಳಿಗೆ ಶಕ್ತಿ ನೀಡಲಿ,” ಎಂದು ಹೆಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

 

ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

“ಅಜಿತ್ ಪವಾರ್ ಅವರ ಅಕಾಲಿಕ ನಿಧನದಿಂದ ಸಾರ್ವಜನಿಕ ಜೀವನಕ್ಕೆ ಮತ್ತು ಮಹಾರಾಷ್ಟ್ರ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ ಸದಸ್ಯರಿಗೆ ಮತ್ತು ಬೆಂಬಲಿಗರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು,” ಎಂದು ಡಿ.ಕೆ. ಶಿವಕುಮಾರ್ ಟ್ವಿಟ್ ಮಾಡಿದ್ದಾರೆ.

Exit mobile version