ಚಾಮರಾಜನಗರ: ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಭಾನುವಾರದಂದು ಕೆಎಸ್ಆರ್ಟಿಸಿ (KSRTC) ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದಿದ್ದರೂ, 30 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾದ ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಘಟನೆ ವಿವರ
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ತಾಳ ಬೆಟ್ಟದ ಪೊನ್ನಾಚಿ ತಿರುವಿನ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಬಸ್ ಮಲೆ ಮಹದೇಶ್ವರ ಸ್ವಾಮಿಯ ದರ್ಶನ ಮಾಡಿ ವಾಪಸ್ಸಾಗುತ್ತಿದ್ದ ಭಕ್ತರನ್ನು ಹೊತ್ತು ಕೊಳ್ಳೆಗಾಲಕ್ಕೆ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿಯಲ್ಲಿ ಪಲ್ಟಿಯಾಗಿ ಬಿದ್ದಿದೆ.
ರಕ್ಷಣಾ ಕಾರ್ಯಾಚರಣೆ
ಘಟನಾ ಸ್ಥಳಕ್ಕೆ ಪೊಲೀಸರು ತಕ್ಷಣ ದೌಡಾಯಿಸಿದ್ದು, ಸ್ಥಳೀಯರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ಹೊರತೆಗೆದು ಚಿಕಿತ್ಸೆಗಾಗಿ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಕೆಲವರನ್ನು ಚಾಮರಾಜನಗರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸ್ಥಳೀಯ ವಾಹನಗಳ ನೆರವಿನಿಂದ ಕೆಲವರನ್ನು ಆಸ್ಪತ್ರೆಗೆ ಸಾಗಿಸಲಾಯಿತು.
ವೀಕೆಂಡ್ ರಜೆಯಿಂದಾಗಿ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಸಾಕಷ್ಟು ವಾಹನಗಳ ಸಂದಣಿ ಇತ್ತು. ಅಪಘಾತದಿಂದಾಗಿ ಸಂಚಾರ ಅಸ್ತವ್ಯಸ್ತಗೊಂಡು, ಗಂಟೆಗಟ್ಟಲೆ ವಾಹನಗಳು ಸಿಲುಕಿಕೊಂಡವು. ಪೊಲೀಸರು ಸಂಚಾರವನ್ನು ತಿರುಗಿಸುವಲ್ಲಿ ಯಶಸ್ವಿಯಾದರೂ, ಪ್ರವಾಸಿಗರು ಮತ್ತು ಭಕ್ತರು ಸಾಕಷ್ಟು ತೊಂದರೆ ಅನುಭವಿಸುವ ಪರಿಸ್ಥಿತಿ ಉಂಟಾಗಿತ್ತು.
ತುಮಕೂರಿನಲ್ಲಿ KSRTC ಬಸ್ ಪಲ್ಟಿ! 40 ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿ ಪಾರು
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯದ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ ಭಾರೀ ದುರಂತ ತಪ್ಪಿದೆ. ಬಸ್ನಲ್ಲಿ ಭರ್ತಿಯಾಗಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ತಿಪಟೂರು ಡಿಪೋಗೆ ಸೇರಿದ ಈ ಬಸ್ ಹೊಸದುರ್ಗದಿಂದ ಬೆಂಗಳೂರಿನ ಕಡೆಗೆ ತೆರಳುತ್ತಿತ್ತು. ಗುಬ್ಬಿ ಸಮೀಪದ ಕಳ್ಳಿಪಾಳ್ಯದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಡಿವೈಡರ್ಗೆ ಬಲವಾಗಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಐದಾರು ಪ್ರಯಾಣಿಕರಿಗೆ ಗಂಭೀರ ಗಾಯ ಅಪಘಾತದಲ್ಲಿ ಐದಾರು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ 40ಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಯಾಣಿಕರ ಪ್ರಕಾರ, ಬಸ್ ಅತಿ ವೇಗವಾಗಿ ಹೋಗುತ್ತಿದ್ದು, ಚಾಲಕನು ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಅಪಘಾತದ ಕಾರಣ ತನಿಖೆ ನಡೆಯುತ್ತಿದೆ. ಪೊಲೀಸರು ಚಾಲಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಈ ಅಪಘಾತದಿಂದ ರಸ್ತೆ ಸಂಚಾರಕ್ಕೆ ಸ್ವಲ್ಪ ಸಮಯ ಅಡಚಣೆಯಾಗಿದ್ದು, ಪೊಲೀಸ್ ಮತ್ತು ರಸ್ತೆ ಸಾರಿಗೆ ಅಧಿಕಾರಿಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.





