ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿಯ ಪಿಇಎಸ್ ಕಾಲೇಜು ಪಕ್ಕದ ಕ್ಲೌಡ್-11 ಯೂನಿಸೆಕ್ಸ್ ಸಲೂನ್ ಅಂಡ್ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ಜಾಲ ನಡೆಸುತ್ತಿದ್ದ ಕೇಂದ್ರವೊಂದರ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ ಮತ್ತು ಮಂಡ್ಯ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ನಾಲ್ವರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಸಲೂನ್ ಮಾಲಕಿ ಎಲಿಜೆಬತ್, ಓರ್ವ ಪಿಂಪ್ ಮತ್ತು ಓರ್ವ ಗ್ರಾಹಕನನ್ನು ವಶಕ್ಕೆ ಪಡೆಯಲಾಗಿದೆ.
ಪ್ರತಿಷ್ಠಿತ ಪಿಇಎಸ್ ಕಾಲೇಜಿನ ಹತ್ತಿರವೇ ಇಂತಹ ಕರಾಳ ದಂಧೆ ನಡೆಯುತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಈ ಹಿಂದೆಯೂ ಕ್ಲೌಡ್-11 ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಆದರೆ, ದಂಧೆಯನ್ನು ಮುಂದುವರಿಸಲು ಕಟ್ಟಡ ಮಾಲೀಕರು ಅವಕಾಶ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಲೂನ್ ಮಾಲಕಿ ಎಲಿಜೆಬತ್ ವಿರುದ್ಧ ಮೈಸೂರು ಮತ್ತು ಮಂಡ್ಯದಲ್ಲಿ ಈಗಾಗಲೇ ಹಲವು ಪ್ರಕರಣಗಳು ದಾಖಲಾಗಿವೆ.
ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಪರಶುರಾಮ್ ಮತ್ತು ಸಿಪಿಐ ನವೀನ್ ಸುಪ್ಪೇಕರ್ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ, ಹೊರ ರಾಜ್ಯಗಳಿಂದ ಮಹಿಳೆಯರನ್ನು ಕರೆತಂದು ದಂಧೆಯಲ್ಲಿ ತೊಡಗಿಸುತ್ತಿದ್ದ ಮಾಹಿತಿ ಬಹಿರಂಗವಾಗಿದೆ. ಇದರ ಜೊತೆಗೆ, ಸಮೀಪದ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ದಂಧೆಗೆ ಸೆಳೆಯುವ ಪ್ರಯತ್ನವೂ ನಡೆದಿತ್ತು ಎಂಬ ಆರೋಪವಿದೆ. ಕಟ್ಟಡ ಮಾಲೀಕರ ವಿರುದ್ಧವೂ ಕಾನೂನು ಕ್ರಮಕ್ಕೆ ಒಡನಾಡಿ ಸಂಸ್ಥೆ ಒತ್ತಾಯಿಸಿದೆ. ಈ ಸ್ಪಾಗೆ ಯಾವುದೇ ಲೈಸೆನ್ಸ್ ಇಲ್ಲದಿರುವುದು ತಿಳಿದುಬಂದಿದೆ.
ಮಾನವ ಹಕ್ಕುಗಳ ಆಯೋಗದ ಆದೇಶದಂತೆ, ವೇಶ್ಯಾವಾಟಿಕೆಗೆ ಅವಕಾಶ ನೀಡುವ ಕಟ್ಟಡಗಳನ್ನು ಸೀಜ್ ಮಾಡಬೇಕು ಎಂದು ಸರ್ಕಾರ ಎಲ್ಲಾ ಜಿಲ್ಲೆಗಳಿಗೆ ಸೂಚಿಸಿದೆ. ಮಕ್ಕಳ ಕಲ್ಯಾಣ ಸಮಿತಿಯೂ ಈ ಬಗ್ಗೆ ನಗರಸಭೆಗೆ ನೋಟಿಸ್ ಜಾರಿ ಮಾಡಬೇಕು ಎಂದು ಒಡನಾಡಿ ಸಂಸ್ಥೆ ಒತ್ತಾಯಿಸಿದೆ.
ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. “ಮಂಡ್ಯ ಜನರು ಇಂತಹ ಅವಮಾನಗಳನ್ನು ಸಹಿಸಬಾರದು. ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಮೈಸೂರಿನಿಂದ ಮಂಡ್ಯವನ್ನು ವೇಶ್ಯಾವಾಟಿಕೆಯ ಕೇಂದ್ರವನ್ನಾಗಿ ಮಾಡಿಕೊಳ್ಳುವ ಪ್ರಯತ್ನವನ್ನು ತಡೆಯಲು ಕಠಿಣ ಕ್ರಮ ಜರೂರು,” ಎಂದು ಸ್ಟ್ಯಾನ್ಲಿ ಒತ್ತಾಯಿಸಿದ್ದಾರೆ.





