ತುಮಕೂರು: ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಪ್ಪಳದಿಂದ ಬೆಂಗಳೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಇಂದು ರಾತ್ರಿ ಸುಮಾರು 10 ಗಂಟೆಗೆ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಕಾರು ಚಾಲಕ ಮತ್ತು ಗನ್ ಮ್ಯಾನ್ ಅವರನ್ನು ತುಮಕೂರು ನಗರದ ಬಿ.ಹೆಚ್ ರಸ್ತೆಯಲ್ಲಿರುವ ಸಿದ್ದಗಂಗಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಸಚಿವರನ್ನು ಆಸ್ಪತ್ರೆಗೆ ದಾಖಲಿಸಿದ ತಕ್ಷಣ ವೈದ್ಯರು ತುರ್ತು ಚಿಕಿತ್ಸೆ ನೀಡಲು ಆರಂಭಿಸಿದರು. ಅವರ ಹೃದಯ ಸಂಬಂಧಿ ತಪಾಸಣೆ ಸೇರಿದಂತೆ ಅಗತ್ಯ ಎಲ್ಲಾ ಪರೀಕ್ಷೆಗಳನ್ನು ನಡೆಸಲಾಯಿತು. ಪ್ರಾಥಮಿಕ ವರದಿಗಳ ಪ್ರಕಾರ ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಎದೆನೋವಿನ ಬಗ್ಗೆ ಆತಂಕ ಹರಡಿದ ಹಿನ್ನೆಲೆಯಲ್ಲಿ ಸಚಿವ ಶಿವರಾಜ್ ತಂಗಡಗಿ ಅವರು ಸ್ವತಃ ಸ್ಪಷ್ಟನೆ ನೀಡಿದ್ದಾರೆ. “ಬೆಂಗಳೂರಿಗೆ ಹೋಗುವಾಗ ಎದೆನೋವು ಕಾಣಿಸಿಕೊಂಡಿತು. ಹಾಗಾಗಿ ಆಸ್ಪತ್ರೆಗೆ ಬಂದೆ. ಎಲ್ಲಾ ಚೆಕಪ್ ಮುಗಿದಿದೆ. ಏನೂ ತೊಂದರೆ ಇಲ್ಲ, ಎಲ್ಲಾ ನಾರ್ಮಲ್ ಇದೆ. ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ” ಎಂದು ಅವರು ಹೇಳಿದ್ದಾರೆ. ತಮ್ಮ ಆರೋಗ್ಯದ ಬಗ್ಗೆ ಅಭಿಮಾನಿಗಳು ಮತ್ತು ಜನತೆ ಆತಂಕಪಡಬೇಕಾಗಿಲ್ಲ ಎಂದು ಅವರು ಮನವಿ ಮಾಡಿದ್ದಾರೆ.
ಚಿಕಿತ್ಸೆ ಬಳಿಕ ಸಚಿವರು ತುಮಕೂರಿನಿಂದ ಬೆಂಗಳೂರಿಗೆ ತೆರಳಿದ್ದಾರೆ. ನಾಳೆಯ ವಿಧಾನಸಭಾ ಅಧಿವೇಶನದಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಅವರ ಕಚೇರಿ ಮೂಲಗಳು ತಿಳಿಸಿವೆ.
