ಮುಂಬೈ, ಆಗಸ್ಟ್ 12: ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದಿದ್ದು, ಈ ಭೀಕರ ದುರಂತದಲ್ಲಿ 8 ಮಂದಿ ಮೃತಪಟ್ಟಿದ್ದಾರೆ. ಇನ್ನೂ 6 ರಿಂದ 8 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಕುರ್ಲಾ ವೆಸ್ಟ್ನ ಚಿರಾಗ್ ನಗರ, ಗೌಶಿಯಾ ಚಾಲ್ ಪ್ರದೇಶದಲ್ಲಿ ಬುಧವಾರ ಮುಂಜಾನೆ ಸುಮಾರು 3:48ಕ್ಕೆ ಏಕಾಏಕಿ ಗುಡ್ಡ ಕುಸಿದಿದೆ.
ದುರಂತದ ವಿವರ
ಮುಂಬೈನಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಟ್ಟದ ಮಣ್ಣು ಸಡಿಲಗೊಂಡು ಏಕಾಏಕಿ ಕುಸಿದಿದೆ. ಈ ವೇಳೆ ಎರಡು ಮನೆಗಳು ಸಂಪೂರ್ಣವಾಗಿ ಧ್ವಂಸಗೊಂಡಿವೆ. ಅವಶೇಷಗಳಡಿ ಸಿಲುಕಿ 8 ಮಂದಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪ್ರದೇಶವು ಹಳೆಯ ಕಟ್ಟಡಗಳು ಮತ್ತು ಗುಡ್ಡದ ತಪ್ಪಲಿನಲ್ಲಿರುವ ಜನವಸತಿ ಪ್ರದೇಶವಾಗಿದೆ.
ರಕ್ಷಣಾ ಕಾರ್ಯಾಚರಣೆ ತೀವ್ರ
ವಿಷಯ ತಿಳಿಯುತ್ತಿದ್ದಂತೆ ಮುಂಬೈ ಅಗ್ನಿಶಾಮಕ ದಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) , ಪೊಲೀಸರು ಹಾಗೂ ಬೃಹನ್ಮುಂಬೈ ನಗರಪಾಲಿಕೆ (BMC) ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಸಿಲುಕಿರುವವರನ್ನು ಸುರಕ್ಷಿತವಾಗಿ ಹೊರತೆಗೆಯಲು ಜೆಸಿಬಿಗಳು ಹಾಗೂ ವಿಶೇಷ ರಕ್ಷಣಾ ಉಪಕರಣಗಳನ್ನು ಬಳಸಿಕೊಂಡು ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಮೃತರ ಸಂಖ್ಯೆ ಏರುವ ಆತಂಕ
ಸ್ಥಳೀಯರು ಹಾಗೂ ಪ್ರತ್ಯಕ್ಷದರ್ಶಿಗಳ ಪ್ರಕಾರ, ಅವಶೇಷಗಳಡಿ ಇನ್ನೂ 6 ರಿಂದ 8 ಮಂದಿ ಸಿಲುಕಿರುವ ಸಾಧ್ಯತೆಯಿದೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಾಯಕಾರಿಯಾಗಿರುವ ಮನೆಗಳಲ್ಲಿದ್ದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈನಲ್ಲಿ ಮಳೆ
ಮುಂಬೈನಲ್ಲಿ ಕಳೆದ 24 ಗಂಟೆಗಳಲ್ಲಿ ಸರಾಸರಿ 80-100 ಮಿ.ಮೀ. ಮಳೆಯಾಗಿದ್ದು, ಕುರ್ಲಾ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಹವಾಮಾನ ಇಲಾಖೆಯು ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಎಚ್ಚರಿಕೆಯಿಂದಿರಲು ಸೂಚಿಸಿದೆ. ಗುಡ್ಡ ಪ್ರದೇಶಗಳಲ್ಲಿ ಮತ್ತಷ್ಟು ಕುಸಿತವಾಗಬಹುದಾದ ಸಾಧ್ಯತೆಯಿಂದಾಗಿ, ಆ ಪ್ರದೇಶದ ನಿವಾಸಿಗಳನ್ನು ಸ್ಥಳಾಂತರಿಸಲಾಗುತ್ತಿದೆ.
ಮುಂಬೈ ಪೊಲೀಸ್ ಆಯುಕ್ತರು ಸಾರ್ವಜನಿಕರಿಗೆ ಎಚ್ಚರಿಕೆಯಿಂದಿರಲು, ಅಪಾಯಕಾರಿ ಪ್ರದೇಶಗಳಿಗೆ ಹೋಗದಿರಲು ಮತ್ತು ತುರ್ತು ಸಹಾಯಕ್ಕೆ 112 ಸಂಖ್ಯೆಯನ್ನು ಸಂಪರ್ಕಿಸಲು ಮನವಿ ಮಾಡಿದ್ದಾರೆ. BMC ಅಧಿಕಾರಿಗಳು ಗುಡ್ಡದ ತಪ್ಪಲಿನಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯ ಮುಂದುವರೆದಿದೆ.
