ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಭರದ ಸಿದ್ಧತೆಗಳು ಆರಂಭವಾಗಿದ್ದು, ದಸರಾ ಜಂಬೂಸವಾರಿಯಲ್ಲಿ ಪ್ರಮುಖ ಪಾತ್ರವಹಿಸಲಿರುವ ಗಜಪಡೆಯ ಚಟುವಟಿಕೆಗಳು ಚುರುಕುಗೊಂಡಿವೆ. ಹುಣಸೂರಿನ ವೀರನಹೊಸಳ್ಳಿಯಿಂದ ಮೈಸೂರಿಗೆ ಆಗಮಿಸಿರುವ ಮೊದಲ ತಂಡದ ಆನೆಗಳ ತೂಕ ಪರೀಕ್ಷೆ ನಡೆಸಲಾಗಿದ್ದು, ಶ್ರೀಕಂಠ ಆನೆ 5,790 ಕೆಜಿ ತೂಕದೊಂದಿಗೆ ಮೊದಲ ಸ್ಥಾನ ಪಡೆದುಕೊಂಡಿದೆ.
ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ಸಾಯಿರಾಮ್ ತೂಕ ಮಾಪನ ಕೇಂದ್ರದಲ್ಲಿ ಗಜಪಡೆಯ ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಮೊದಲ ತಂಡದಲ್ಲಿರುವ ಧನಂಜಯ, ಮಹೇಂದ್ರ, ಏಕಲವ್ಯ, ಪ್ರಶಾಂತ, ಗೋಪಿ, ಶ್ರೀರಾಮ, ಶ್ರೀಕಂಠ, ಲಕ್ಷ್ಮಿ ಹಾಗೂ ಕಾವೇರಿ ಸೇರಿದಂತೆ ಒಟ್ಟು 9 ಆನೆಗಳ ತೂಕವನ್ನು ಅಳೆಯಲಾಯಿತು. ಈ ವೇಳೆ 5,790 ಕೆಜಿ ತೂಕ ಹೊಂದಿರುವ ಶ್ರೀಕಂಠ ಆನೆ ಅತ್ಯಂತ ಹೆಚ್ಚು ತೂಕದ ಆನೆಯಾಗಿ ಗುರುತಿಸಿಕೊಂಡಿದೆ.
ದಸರಾ ಮಹೋತ್ಸವದ ಸಿದ್ಧತೆಗಳ ಭಾಗವಾಗಿ ಆಗಸ್ಟ್ 26ರಂದು ಹುಣಸೂರಿನ ವೀರನಹೊಸಳ್ಳಿಯಲ್ಲಿ ಗಜಪಡೆಗೆ ಸಾಂಪ್ರದಾಯಿಕವಾಗಿ ಫಲತಾಂಬೂಲ ಅರ್ಪಿಸುವ ಮೂಲಕ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಗಜಯಾತ್ರೆಗೆ ಚಾಲನೆ ನೀಡಿದ್ದರು. ಬಳಿಕ ಗಜಪಡೆ ಮೈಸೂರಿನತ್ತ ಪ್ರಯಾಣ ಬೆಳೆಸಿತ್ತು.
ಆಗಸ್ಟ್ 28ರಂದು ದಸರಾ ಗಜಪಡೆ ಜಯಮಾರ್ತಾಂಡ ದ್ವಾರ ಮೂಲಕ ಮೈಸೂರು ಅರಮನೆಗೆ ಪ್ರವೇಶಿಸಿತು. ಈ ಸಂದರ್ಭದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ವಿವಿಧ ಕಲಾ ತಂಡಗಳ ಪ್ರದರ್ಶನದೊಂದಿಗೆ ಆನೆಗಳಿಗೆ ಅದ್ಧೂರಿ ಸ್ವಾಗತ ನೀಡಲಾಯಿತು.
ಈ ಬಾರಿಯ ದಸರಾ ವಿಭಿನ್ನ
ಈ ವರ್ಷದ ಮೈಸೂರು ದಸರಾ ಉತ್ಸವವನ್ನು ಮತ್ತಷ್ಟು ವಿಶೇಷವಾಗಿ ಆಚರಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಈ ಬಾರಿಯ ದಸರಾ ವಿಭಿನ್ನವಾಗಿರಲಿದೆ, ಹೊಸ ಸಂಪ್ರದಾಯಗಳ ಅನಾವರಣವಾಗಲಿದೆ ಎಂದು CM ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ದಸರಾ ಮಹೋತ್ಸವದಲ್ಲಿ ಈ ಬಾರಿ ಕನ್ನಡ ಚಿತ್ರರಂಗವೂ ವಿಶೇಷವಾಗಿ ಭಾಗವಹಿಸುವ ಸಾಧ್ಯತೆ ಇದೆ. ಈ ಕುರಿತು ಫಿಲ್ಮ್ ಚೇಂಬರ್ ಅಧ್ಯಕ್ಷೆ ಜಯಮಾಲ ಅವರೊಂದಿಗೆ ಚರ್ಚೆ ನಡೆಸಿರುವುದಾಗಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಇದರ ಜೊತೆಗೆ ಪೊಲೀಸ್ ಬ್ಯಾಂಡ್ ಜತೆಗೆ ಆರ್ಮಿ ಬ್ಯಾಂಡ್ನ್ನೂ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ. ದಸರಾ ಉದ್ಘಾಟಕರ ಆಯ್ಕೆ ಕುರಿತು ಎಲ್ಲರೊಂದಿಗೆ ಚರ್ಚೆ ನಡೆಸಿ ಬಳಿಕ ಅಂತಿಮ ಹೆಸರು ಘೋಷಣೆ ಮಾಡುವುದಾಗಿ ಅವರು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಗಜಪಡೆಯ ತರಬೇತಿ, ತೂಕ ಪರೀಕ್ಷೆ ಸೇರಿದಂತೆ ಹಲವು ಸಿದ್ಧತಾ ಕಾರ್ಯಗಳು ನಡೆಯಲಿದ್ದು, ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಗಾಗಿ ಆನೆಗಳನ್ನು ಸಜ್ಜುಗೊಳಿಸಲಾಗುತ್ತಿದೆ. ಈಗಾಗಲೇ ಗಜಪಡೆ ಮೈಸೂರಿಗೆ ಆಗಮಿಸಿರುವುದರಿಂದ ದಸರಾ ಸಂಭ್ರಮಕ್ಕೆ ಅಧಿಕೃತವಾಗಿ ಕಳೆ ಬಂದಿದೆ.





