ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆಯ ಬಳಿ ಸಂಭವಿಸಿದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ರಾಜ್ಯವನ್ನೇ ನಡುಗಿಸಿದೆ. ಘಟನೆಯಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಹೂವಿನ ವ್ಯಾಪಾರಿ ಮಹಿಳೆ ಮಂಜುಳಾ ಚಿಕಿತ್ಸೆ ಫಲಿಸದೆ ಶುಕ್ರವಾರ ಮೃತಪಟ್ಟಿದ್ದಾರೆ. ಈ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.
ಈ ಘಟನೆ ಗುರುವಾರ ರಾತ್ರಿ ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ನಡೆದಿದೆ. ಪ್ರವಾಸಿಗರಿಂದ ಕಿಕ್ಕಿರಿದು ತುಂಬಿದ್ದ ಅರಮನೆ ಮುಂಭಾಗದಲ್ಲಿ ಬಲೂನ್ಗಳಿಗೆ ಗಾಳಿ ತುಂಬಿಸುತ್ತಿದ್ದ ವೇಳೆ ಹೀಲಿಯಂ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿದೆ.
ಸಿಲಿಂಡರ್ ಸ್ಫೋಟದ ವೇಳೆ ಬಲೂನ್ ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶದ ಕನೌಜ್ ಮೂಲದ ವ್ಯಾಪಾರಿ ಸಲೀಂ ಖಮರುದ್ದೀನ್ (40) ಸ್ಥಳದಲ್ಲೇ ಮೃತಪಟ್ಟಿದ್ದರು. ಇದೀಗ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೂವಿನ ವ್ಯಾಪಾರಿ ಮಂಜುಳಾ ಅವರೂ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಮಂಜುಳಾ ಸೇರಿದಂತೆ ಐವರು ಗಾಯಗೊಂಡಿದ್ದರು. ಗಾಯಾಳುಗಳಾಗಿ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಲಕ್ಷ್ಮಿ, ಕೋಲ್ಕತಾದ ಶಮಿನಾ ಶಬಿಲ್, ರಾಣೆಬೆನ್ನೂರಿನ ಕೊಟ್ರೇಶ್ ಹಾಗೂ ರಂಜಿತಾ ಎಂಬುವವರು ಇದ್ದರು. ಗಾಯಗೊಂಡ ಎಲ್ಲರನ್ನೂ ತಕ್ಷಣ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮಂಜುಳಾ ಅವರ ತಲೆಗೆ ಗಂಭೀರ ಗಾಯವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.
ಮೃತ ಬಲೂನ್ ವ್ಯಾಪಾರಿ ವಿರುದ್ಧ ಎಫ್ಐಆರ್
ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ, ಮೃತ ಬಲೂನ್ ವ್ಯಾಪಾರಿ ಸಲೀಂ ಖಮರುದ್ದೀನ್ ವಿರುದ್ಧ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸ್ಫೋಟದಲ್ಲಿ ಗಾಯಗೊಂಡಿರುವ ಪ್ರವಾಸಿಗರೊಬ್ಬರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಣೆಬೆನ್ನೂರು ಮೂಲದ ಕೊಟ್ರೇಶ್ ಬೀರಪ್ಪ ಎಂಬುವವರು ನೀಡಿದ ದೂರಿನನ್ವಯ ಈ ಪ್ರಕರಣ ದಾಖಲಾಗಿದೆ. ಕುಟುಂಬದೊಂದಿಗೆ ಮೈಸೂರು ಪ್ರವಾಸಕ್ಕೆ ಬಂದಿದ್ದ ಕೊಟ್ರೇಶ್, ತಮ್ಮ ಮಕ್ಕಳಿಗೆ ಬಲೂನ್ ಕೊಡಿಸಲು ಅರಮನೆ ಬಳಿ ನಿಂತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ದೂರಿನ ಪ್ರಕಾರ, ಬಲೂನ್ ವ್ಯಾಪಾರಿ ಸಲೀಂ ಸೈಕಲ್ ಮೇಲೆ ಹೀಲಿಯಂ ಸಿಲಿಂಡರ್ ಇಟ್ಟುಕೊಂಡು ಬಲೂನ್ಗಳಿಗೆ ಗಾಳಿ ತುಂಬಿಸುತ್ತಿದ್ದರು. ಈ ವೇಳೆ ಯಾವುದೇ ಮುನ್ನೆಚ್ಚರಿಕೆ ಇಲ್ಲದೆ ಸಿಲಿಂಡರ್ ಸ್ಫೋಟಗೊಂಡಿದ್ದು, ಸ್ಫೋಟದ ಹೊಡೆತಕ್ಕೆ ಕೊಟ್ರೇಶ್ ಅವರ ಕಾಲುಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ ಸ್ಥಳದಲ್ಲಿದ್ದ ಲಕ್ಷ್ಮಿ, ಮಂಜುಳಾ ಹಾಗೂ ಶಮಿನಾ ಶಬಿಲ್ ಅವರಿಗೆ ಗಂಭೀರ ಗಾಯಗಳಾಗಿವೆ ಎಂದು ಅವರು ತಿಳಿಸಿದ್ದಾರೆ.





