ನೇಪಾಳದಲ್ಲಿ ಸಂಭವಿಸಿದ ಭೀಕರ ಜಲಪ್ರಳಯ ದೇಶದ ಹಲವು ಪ್ರದೇಶಗಳಲ್ಲಿ ಭಾರೀ ಹಾನಿ ಉಂಟುಮಾಡಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದೆ. ಇದರ ನಡುವೆ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ನ ಸಿಇಒ ಲಕ್ಷ್ ಗೋಪಿಸೆಟ್ಟಿ ನೇಪಾಳ ಪ್ರವಾಸದಲ್ಲಿದ್ದ ವೇಳೆ ಪ್ರವಾಹದ ಬಳಿಕ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಇನ್ಫೋಸಿಸ್ ತಿಳಿಸಿದೆ. ಅವರು ವೈಯಕ್ತಿಕ ಪ್ರವಾಸದ ಹಿನ್ನೆಲೆ ನೇಪಾಳಕ್ಕೆ ತೆರಳಿದ್ದರು ಎಂದು ಕಂಪನಿ ಹೇಳಿದೆ.
ಲಕ್ಷ್ ಗೋಪಿಸೆಟ್ಟಿ ಸಂಪರ್ಕಕ್ಕೆ ಸಿಗುತ್ತಿಲ್ಲ
ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ ಗೋಪಿಸೆಟ್ಟಿ ನೇಪಾಳಕ್ಕೆ ವೈಯಕ್ತಿಕ ಭೇಟಿ ನೀಡಿದ್ದರು. ಆದರೆ ಭೀಕರ ಪ್ರವಾಹದ ನಂತರ ಅವರೊಂದಿಗೆ ಸಂಪರ್ಕ ಸಾಧಿಸಲು ಸಾಧ್ಯವಾಗುತ್ತಿಲ್ಲ. ಅವರ ಸುರಕ್ಷತೆ ಮತ್ತು ಆರೋಗ್ಯವೇ ಕಂಪನಿಯ ಮೊದಲ ಆದ್ಯತೆ ಎಂದು ಇನ್ಫೋಸಿಸ್ ಹೇಳಿದೆ.
ಲಕ್ಷ್ ಗೋಪಿಸೆಟ್ಟಿ ಅವರ ಕುರಿತು ಮಾಹಿತಿ ಸಂಗ್ರಹಿಸಲು ಸಂಬಂಧಿತ ಸಂಸ್ಥೆಗಳೊಂದಿಗೆ ಕಂಪನಿ ಸಂಪರ್ಕದಲ್ಲಿದೆ. ಅವರ ಕುಟುಂಬದವರೊಂದಿಗೂ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯ ನೆರವು ನೀಡಲಾಗುತ್ತಿದೆ ಎಂದು ಇನ್ಫೋಸಿಸ್ ತಿಳಿಸಿದೆ.
ನೇಪಾಳದಲ್ಲಿ ರಕ್ಷಣಾ ಕಾರ್ಯಾಚರಣೆ ತೀವ್ರ
ಹಿಮಾಲಯ ಪ್ರದೇಶದಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನೇಪಾಳದ ಹಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಪ್ರವಾಹದ ಪರಿಣಾಮ ರಸ್ತೆ, ಸೇತುವೆ ಸೇರಿದಂತೆ ಹಲವು ಮೂಲಸೌಕರ್ಯಗಳಿಗೆ ಹಾನಿಯಾಗಿದ್ದು, ದೂರದ ಪ್ರದೇಶಗಳಿಗೆ ರಕ್ಷಣಾ ತಂಡಗಳು ತಲುಪುವುದೇ ಸವಾಲಾಗಿದೆ.
ಪ್ರವಾಹದ ನಂತರ ನೂರಾರು ಮಂದಿ ಮೃತಪಟ್ಟಿದ್ದು, ಸಾವಿರಾರು ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಈಗಾಗಲೇ ಸಾವಿರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, ಇನ್ನೂ ಹಲವರಿಗಾಗಿ ಶೋಧ ಮುಂದುವರಿದಿದೆ.
ಸುರಂಗಗಳಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ನೆರವು
ಪ್ರವಾಹದಿಂದ ನೇಪಾಳದ ಹಲವು ಜಲವಿದ್ಯುತ್ ಯೋಜನೆಗಳ ಮೇಲೂ ಪರಿಣಾಮ ಬೀರಿದೆ. ಸುಮಾರು 1,000 ಕಾರ್ಮಿಕರು ವಿವಿಧ ಜಲವಿದ್ಯುತ್ ಯೋಜನೆಗಳ ಸುರಂಗಗಳಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರನ್ನು ಸುರಕ್ಷಿತವಾಗಿ ಹೊರತರಲು ನೇಪಾಳ ಭಾರತದಿಂದ ನೆರವು ಕೋರಿದೆ.
ನೇಪಾಳದ ಮನವಿಗೆ ಭಾರತ ಸ್ಪಂದಿಸಿದ್ದು, ಸುರಂಗ ರಕ್ಷಣಾ ಕಾರ್ಯಾಚರಣೆಗೆ ವಿಶೇಷ ತಂಡವನ್ನು ಕಳುಹಿಸಲು ಮುಂದಾಗಿದೆ.
ವೈದ್ಯಕೀಯ ನೆರವು, ಸೇತುವೆ ನಿರ್ಮಾಣಕ್ಕೂ ಸಹಾಯ
ರಕ್ಷಣಾ ಕಾರ್ಯಾಚರಣೆಯ ಜತೆಗೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈದ್ಯಕೀಯ ನೆರವಿನ ಅಗತ್ಯವೂ ಹೆಚ್ಚಾಗಿದೆ. ಭಾರತವು ವೈದ್ಯಕೀಯ ತಂಡ ಹಾಗೂ ಇತರ ಪರಿಹಾರ ಸಾಮಗ್ರಿಗಳನ್ನು ಕಳುಹಿಸುವ ಕ್ರಮ ಕೈಗೊಂಡಿದೆ. ಈಗಾಗಲೇ ಪ್ರವಾಹ ಪೀಡಿತ ನೇಪಾಳಕ್ಕೆ ಭಾರತ ಪರಿಹಾರ ನೆರವು ಕಳುಹಿಸಿರುವುದಾಗಿ ವರದಿಯಾಗಿದೆ.
ಪ್ರವಾಹದಿಂದ ಹಲವು ರಸ್ತೆಗಳು ಮತ್ತು ಸೇತುವೆಗಳು ಹಾನಿಗೊಳಗಾಗಿರುವ ಹಿನ್ನೆಲ ಸಂಪರ್ಕ ವ್ಯವಸ್ಥೆಯನ್ನು ಪುನರ್ಸ್ಥಾಪಿಸುವುದು ರಕ್ಷಣಾ ಕಾರ್ಯಾಚರಣೆಯ ಪ್ರಮುಖ ಸವಾಲಾಗಿದೆ. ಅಗತ್ಯವಿರುವ ಕಡೆ ತಾತ್ಕಾಲಿಕ ಸೇತುವೆಗಳು ಹಾಗೂ ಇತರ ಮೂಲಸೌಕರ್ಯ ನೆರವು ಒದಗಿಸುವ ಪ್ರಯತ್ನವೂ ನಡೆಯುತ್ತಿದೆ.
ಭಾರತೀಯರ ಸ್ಥಿತಿಯ ಮೇಲೂ ನಿಗಾ
ನೇಪಾಳದ ಪ್ರವಾಹದಲ್ಲಿ ಭಾರತೀಯರು ಸೇರಿದಂತೆ ಹಲವು ವಿದೇಶಿ ನಾಗರಿಕರು ನಾಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ ನೂರಾರು ಭಾರತೀಯರ ಸಂಪರ್ಕ ಇನ್ನೂ ಸ್ಥಾಪನೆಯಾಗಿಲ್ಲ. ಅವರ ಸುರಕ್ಷತೆಗಾಗಿ ನೇಪಾಳದ ಅಧಿಕಾರಿಗಳೊಂದಿಗೆ ಭಾರತ ನಿರಂತರ ಸಂಪರ್ಕದಲ್ಲಿದೆ.





