40 ಸಾವಿರವಲ್ಲ, ಆಗಿರೋದು ಬರೀ 8 ಸಾವಿರ ಉದ್ಯೋಗ ನೇಮಕಾತಿ: ಸಿದ್ದರಾಮಯ್ಯ ವಿರುದ್ದ ಬಿಜೆಪಿ ಆರೋಪ

Untitled design 2026 02 25T154918.794

ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗಗಳ ನೇಮಕಾತಿಯ ಅಂಕಿ-ಅಂಶಗಳ ಕುರಿತು ಈಗ ರಾಜಕೀಯ ಜಿದ್ದಾಜಿದ್ದಿ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಒಂದು ಹೇಳಿಕೆ ಈಗ ವಿರೋಧ ಪಕ್ಷ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದೆ.

ಇತ್ತೀಚೆಗೆ ಧಾರವಾಡದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಗೆ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕಳೆದ 2.5 ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು ಮಾಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದರು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮುಖ್ಯಮಂತ್ರಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸದನದ ಒಳಗೆ ಒಂದು ಮಾಹಿತಿ ನೀಡಿ, ಹೊರಗೆ ಜನರ ಮುಂದೆ ಸುಳ್ಳು ಹೇಳುವುದು ನಿರುದ್ಯೋಗಿ ಯುವಜನತೆಗೆ ಮಾಡುತ್ತಿರುವ ನೇರ ವಂಚನೆ. ರಾಜ್ಯದ ಅತಿ ದೀರ್ಘಾವಧಿ ಮುಖ್ಯಮಂತ್ರಿಗಳಾಗಿರುವ ತಾವೇ ದಾರಿ ತಪ್ಪಿಸಿದರೆ ಹೇಗೆ ? ಎಂದು ಪ್ರಶ್ನಿಸಿದ್ದಾರೆ. ಪರಿಸ್ಥಿತಿ ಕೈಮೀರುವ ಮುನ್ನ ಬಾಕಿ ಇರುವ ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಯುವಜನತೆಗೆ ನ್ಯಾಯ ಒದಗಿಸಿ ಎಂದು ಅವರು ಒತ್ತಾಯಿಸಿದ್ದಾರೆ.

ಉದ್ಯೋಗಾಕಾಂಕ್ಷಿಗಳ ಆಕ್ರೋಶ

ಕೇವಲ ರಾಜಕೀಯ ಪಕ್ಷಗಳ ನಡುವಿನ ಆರೋಪ-ಪ್ರತ್ಯಾರೋಪ ಮಾತ್ರವಲ್ಲದೆ, ಇತ್ತ ರಾಜ್ಯದ ಸಾವಿರಾರು ಉದ್ಯೋಗಾಕಾಂಕ್ಷಿಗಳು ಬೋಗಸ್ ಗ್ಯಾರಂಟಿಗಳಿಂದ ಉದ್ಯೋಗ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೆಪಿಎಸ್‌ಸಿ ಮತ್ತು ಇತರ ನೇಮಕಾತಿ ಪ್ರಾಧಿಕಾರಗಳ ವಿಳಂಬ ಧೋರಣೆಯಿಂದಾಗಿ ಅಭ್ಯರ್ಥಿಗಳು ಸಂಕಷ್ಟದಲ್ಲಿದ್ದಾರೆ. ಸರ್ಕಾರದ ಈ ಅಂಕಿ-ಅಂಶಗಳ ಗೊಂದಲವು ಅಭ್ಯರ್ಥಿಗಳಲ್ಲಿ ಮತ್ತಷ್ಟು ಗೊಂದಲ ಮತ್ತು ಅಸಮಾಧಾನ ಮೂಡಿಸಿದೆ.

ಒಟ್ಟಾರೆಯಾಗಿ, 40 ಸಾವಿರ ಹುದ್ದೆಗಳ ಭರ್ತಿಯ ಸಿಎಂ ಹೇಳಿಕೆ ಮತ್ತು ಕೇವಲ 8 ಸಾವಿರ ಹುದ್ದೆಗಳ ನೇಮಕಾತಿಯ ಬಿಜೆಪಿಯ ಅಧಿಕೃತ ದಾಖಲೆಗಳ ನಡುವಿನ ಈ ಸಮರ ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆಯಲಿದೆ ಎಂಬುದು ಕುತೂಹಲಕಾರಿಯಾಗಿದೆ.

Exit mobile version